ಶಿವಮೊಗ್ಗದಿಂದ ಲೋಕಸಭೆಗೆ ಯಡಿಯೂರಪ್ಪ ಸ್ಪರ್ಧೆ?
ಶಿವಮೊಗ್ಗ, ಜ.8 : ಕೆಜೆಪಿಯನ್ನು ಬಿಜೆಪಿಯೊಂದಿಗೆ ವಿಲೀನಗೊಳಿಸಿರುವ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಲೋಕಸಭೆ ಚುನಾವಣೆಗೆ ಶಿವಮೊಗ್ಗ ಕ್ಷೇತ್ರದಿಂದ ಸ್ಪರ್ಧಿಸುವುದು ಬಹುತೇಕ ಖಚಿತವಾಗಿದೆ. ಜಿಲ್ಲೆಯ ಪಕ್ಷದ ಕಾರ್ಯಕರ್ತರು ಮತ್ತು ನಾಯಕರು ಯಡಿಯೂರಪ್ಪ ಸ್ಪರ್ಧೆಗೆ ಒಪ್ಪಿಗೆ ನೀಡಿದ್ದು, ಈ ಕುರಿತು ಯಡಿಯೂರಪ್ಪ ತಮ್ಮ ಅಂತಿಮ ಪ್ರಕಟಿಸಬೇಕಾಗಿದೆ.
ಯಡಿಯೂರಪ್ಪ ಬಿಜೆಪಿಗೆ ಮರಳಿದ ನಂತರ ಅವರಿಗೆ ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಅವಕಾಶ ನೀಡಲಾಗುತ್ತದೆ ಎಂಬ ಸುದ್ದಿ ಹಬ್ಬಿತ್ತು. ಸದ್ಯ ತಮ್ಮ ಸ್ವ ಕ್ಷೇತ್ರ ಶಿವಮೊಗ್ಗದಿಂದಲೇ ಯಡಿಯೂರಪ್ಪ ಸ್ಪರ್ಧಿಸಲಿದ್ದು, ತಮ್ಮ ಪುತ್ರ ಮತ್ತು ಕ್ಷೇತ್ರದ ಹಾಲಿ ಸಂಸದ ಬಿ.ವೈ.ರಾಘವೇಂದ್ರ ಅವರಿಗೆ ಯಾವ ಕ್ಷೇತ್ರ ನೀಡುತ್ತಾರೆ ಎಂಬುದು ಕುತೂಹಲ ಮೂಡಿಸಿದೆ.
ಯಡಿಯೂರಪ್ಪ ಸ್ಪರ್ಧೆ ಬಗ್ಗೆ ಹೇಳಿಕೆ ನೀಡಿರುವ ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ, ಬಿ.ಎಸ್.ಯಡಿಯೂರಪ್ಪ ಲೋಕಸಭೆ ಚುನಾವಣೆಗೆ ಸ್ಪರ್ಧಿಸಬೇಕು ಎಂದು ಜಿಲ್ಲೆಯ ಎಲ್ಲಾ ಕಾರ್ಯಕರ್ತರು ಬಯಸಿದ್ದಾರೆ. ಅವರು ಒಪ್ಪಿಗೆ ನೀಡಿದರೆ ಪಕ್ಷ ಅವಕಾಶ ನೀಡಲಿದೆ. ಈಗಾಗಲೇ ಕ್ಷೇತ್ರದಲ್ಲಿ ಇಬ್ಬರು ಅಭ್ಯರ್ಥಿಗಳ ಹೆಸರು ಸಿದ್ಧವಾಗಿದ್ದು, ಯಡಿಯೂರಪ್ಪ ಸ್ಪರ್ಧಿಸುವುದಾದದರೆ ಅವರ ಹೆಸರನ್ನು ಮೊದಲು ಪರಿಗಣಿಸುತ್ತೇವೆ ಎಂದು ಹೇಳಿದ್ದಾರೆ. ಯಡಿಯೂರಪ್ಪ ಸ್ಪರ್ಧಿಸುತ್ತಾರಾ?

ಬಿಜೆಪಿ ನಾಯಕರ ಒತ್ತಡ
ರಾಜ್ಯಸಭಾ ಸದಸ್ಯ ಆಯನೂರು ಮಂಜುನಾಥ್, ಕೆಎಸ್ ಈಶ್ವರಪ್ಪ ಸೇರಿದಂತೆ ಜಿಲ್ಲೆಯ ಬಿಜೆಪಿ ನಾಯಕರು ಯಡಿಯೂರಪ್ಪ ಅವರು ಸ್ಪರ್ಧಿಸುವಂತೆ ಒತ್ತಡ ಹೇರುತ್ತಿದ್ದಾರೆ. ಯಡಿಯೂರಪ್ಪ ಅವರು ಚುನಾವಣೆಗೆ ಸ್ಪರ್ಧಿಸುವುದಾದದರೆ ಉಳಿದ ಅಭ್ಯರ್ಥಿಗಳ ಹೆಸರನ್ನು ಪರಿಗಣಿಸುವುದಿಲ್ಲ ಎಂದು ಆಯನೂರು ಮಂಜುನಾಥ್ ಹೇಳಿದ್ದಾರೆ.

ರಾಘವೇಂದ್ರ ಕೈ ತಪ್ಪಲಿದೆ ಟಿಕೆಟ್
ಯಡಿಯೂರಪ್ಪ ಪುತ್ರ ಹಾಗೂ ಹಾಲಿ ಸಂಸದ ಬಿ.ವೈ.ರಾಘವೇಂದ್ರ ಅವರಿಗೆ ಟಿಕೆಟ್ ನೀಡುವುದು ಕಷ್ಟ. ಇಂತಹ ಪರಿಸ್ಥಿತಿಯಲ್ಲಿ ಮೂರನೆಯ ವ್ಯಕ್ತಿಯೊಬ್ಬರನ್ನು ಆಯ್ಕೆ ಮಾಡಬೇಕಾಗುತ್ತದೆ ಎಂದು ಬಿಜೆಪಿ ನಾಯಕರು ಯಡಿಯೂರಪ್ಪ ಅವರಿಗೆ ತಿಳಿಸಿದ್ದು, ಬೇರೆ ಅಭ್ಯರ್ಥಿ ಆಯ್ಕೆ ಮಾಡಿದರೆ ಜಿಲ್ಲೆಯಲ್ಲಿ ನಿಮ್ಮ ಹಿಡಿತ ತಪ್ಪುತ್ತದೆ ಎಂದು ಹೇಳಿದ್ದಾರೆ.

ಈಶ್ವರಪ್ಪ ಸ್ಪರ್ಧಿಸುವುದಿಲ್ಲ
ವಿಧಾನಸಭೆ ಚುನಾವಣೆಯಲ್ಲಿ ಸೋಲು ಅನುಭವಿಸಿರುವ ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಲೋಕಸಭೆಗೆ ಸ್ಪರ್ಧಿಸುತ್ತಾರೆ ಎಂಬ ಸುದ್ದಿ ಹಬ್ಬಿತ್ತು. ಆದರೆ, ಯಡಿಯೂರಪ್ಪ ಅವರು ಸ್ಪರ್ಧಿಸಲಿ ಎಂದು ಅವರು ಹೇಳಿರುವುದು, ಅವರು ಸ್ಪರ್ಧಿಸುವುದಿಲ್ಲ ಎಂಬ ಸಂದೇಶವನ್ನು ಸಾರಿದೆ.

ರಾಷ್ಟ್ರೀಯ ನಾಯಕರ ತೀರ್ಮಾನ
ಬಿ.ಎಸ್.ಯಡಿಯೂರಪ್ಪ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡ ನಂತರ ಯಡಿಯೂರಪ್ಪ ಅವರಿಗೆ ಯಾವುದೇ ಸ್ಥಾನ ಮಾನ ನೀಡಲು ಸದ್ಯ ಆಗುವುದಿಲ್ಲ. ಆದ್ದರಿಂದ ಅವರು ಬಯಸಿದರೆ ಲೋಕಸಭೆ ಚುನಾವಣೆ ಟಿಕೆಟ್ ನೀಡಿ ಎಂದು ರಾಷ್ಟ್ರೀಯ ನಾಯಕರು ರಾಜ್ಯ ನಾಯಕರಿಗೆ ಸೂಚನೆ ನೀಡಿದ್ದಾರೆ. ಆದ್ದರಿಂದ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ.

ಗೌಡರ ತಂತ್ರವೇನು?
ಶಿವಮೊಗ್ಗ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಮಾಜಿ ಸಿಎಂ ಎಸ್.ಬಂಗಾರಪ್ಪ ಪತ್ನಿ ಶಕುಂತಲಾ ಬಂಗಾರಪ್ಪ ಅವರಿಗೆ ಟಿಕೆಟ್ ನೀಡಬೇಕು ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ತಂತ್ರ ರೂಪಿಸಿದ್ದಾರೆ. ಒಂದು ವೇಳೆ ಶಕುಂತಲಾ ಅವರು ಸ್ಪರ್ಧಿಸಿದರೆ ಪ್ರಬಲ ಪೈಪೋಟಿ ಎದುರಾಗಲಿದ್ದು, ಅವರಿಗೆ ಪೈಪೋಟಿ ನೀಡಲು ಯಡಿಯೂರಪ್ಪ ಅವರಿಂದ ಮಾತ್ರ ಸಾಧ್ಯ.

ಶಿವಮೊಗ್ಗಕ್ಕೆ ಸೀಮಿತವಾಗುತ್ತಾರೆ
ಯಡಿಯೂರಪ್ಪ ಅವರು ಚುನಾವಣೆಗೆ ಸ್ಪರ್ಧಿಸಿದರೆ ಶಿವಮೊಗ್ಗ ಕ್ಷೇತ್ರಕ್ಕೆ ಮಾತ್ರ ಸೀಮಿತವಾಗುತ್ತಾರೆ. ಆದರೆ, ಅವರು ಬಿಜೆಪಿಗೆ ಹೆಚ್ಚು ಸ್ಥಾನ ಸಿಗಲು ರಾಜ್ಯ ಪ್ರವಾಸ ಮಾಡಲು ನಿರ್ಧರಿಸಿದ್ದಾರೆ. ಆದ್ದರಿಂದ ಚುನಾವಣೆಗೆ ಸ್ಪರ್ಧಿಸುವುದಕ್ಕೆ ಯಡಿಯೂರಪ್ಪ ಅವರು ಆಲೋಚನೆ ನಡೆಸುತ್ತಿದ್ದಾರೆ.

ಜ.17ರಂದು ತೀರ್ಮಾನ
ಯಡಿಯೂರಪ್ಪ ಅವರು ಬಿಜೆಪಿಗೆ ಅಧಿಕೃತವಾಗಿ ಸೇರ್ಪಡೆಗೊಂಡ ನಂತರ ಜ.17ರಂದು ದೆಹಲಿಗೆ ತೆರಳಲಿದ್ದು,ಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿ ಹಾಗೂ ಪರಿಷತ್ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿದು ಬಂದಿದೆ. ಆ ಸಮಯದಲ್ಲಿ ರಾಷ್ಟ್ರೀಯ ನಾಯಕರೊಂದಿಗೆ ಈ ಬಗ್ಗೆ ಚರ್ಚೆ ನಡೆಸಿ ಅಂತಿಮ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ.

ಬಿಜೆಪಿಗೂ ಆಯ್ಕೆ ಕಡಿಮೆ
ರಾಜ್ಯದಲ್ಲಿ ಇಷ್ಟು ಸ್ಥಾನ ಗಳಿಸಬೇಕು ಎಂದು ಲೆಕ್ಕಾಚಾರ ಹಾಕಿರುವ ಬಿಜೆಪಿಗೆ ಶಿವಮೊಗ್ಗದಲ್ಲಿ ಬೇರೆ ಆಯ್ಕೆಗಳು ಕಡಿಮೆ. ಹಾಲಿ ಸಂಸದ ಬಿ.ವೈ.ರಾಘವೇಂದ್ರ, ಆಯನೂರು ಮಂಜುನಾಥ್, ಭಾನುಪ್ರಕಾಶ್ ಹೆಸರು ಕೇಳಿಬರುತ್ತಿವೆ. ಒಂದು ವೇಳೆ ಕಾಂಗ್ರೆಸ್ ಮತ್ತು ಜೆಡಿಎಸ್ ಪ್ರಬಲ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಿದರೆ ಬಿಜೆಪಿ ಪಾಲಿಗೆ ಶಿವಮೊಗ್ಗ ಮರೀಚಿಕೆಯಾಗುವ ಸಾಧ್ಯತೆ ಇದೆ. ಆದ್ದರಿಂದ ಯಡಿಯೂರಪ್ಪ ಅವರಿಗೆ ಒತ್ತಡ ಹಾಕಲಾಗುತ್ತಿದೆ.

ವಿಧಾನಸಭೆ ಸಭೆ ಫಲಿತಾಂಶದ ಭಯ
ವಿಧಾನಸಭೆ ಚುನಾವಣೆಯಲ್ಲಿ ಜಿಲ್ಲೆಯಲ್ಲಿ ಬಿಜೆಪಿಗೆ ಕಹಿ ಅನುಭವವಾಗಿದ್ದು, ಅದನ್ನು ಮರೆಯಲು ಲೋಕಸಭೆ ಚುನಾವಣೆಯಲ್ಲಿ ಗೆಲುವು ಅನಿವಾರ್ಯವಾಗಿದೆ. ಆದ್ದರಿಂದ ಯಡಿಯೂರಪ್ಪ ಅವರಂತಹ ಪ್ರಭಾವಿ ನಾಯಕರ ಅಗತ್ಯವಿದೆ. ಅದರಲ್ಲೂ ಯಡಿಯೂರಪ್ಪ ಬಿಜೆಪಿಗೆ ಮರಳಿದ ನಂತರ ಜಿಲ್ಲೆಯಲ್ಲಿ ಬಿಜೆಪಿ ಶಕ್ತಿ ಹೆಚ್ಚಿದೆ. ಆದ್ದರಿಂದ ಅವರನ್ನು ಕಣಕ್ಕೆ ಇಳಿಸಲು ಚಿಂತನೆ ನಡೆದಿದೆ.












Click it and Unblock the Notifications