ಚಿತ್ರಗಳು : ಶಿವಮೊಗ್ಗದಲ್ಲಿ ಯಡಿಯೂರಪ್ಪ ಪ್ರವಾಹ ಪರಿಸ್ಥಿತಿ ವೀಕ್ಷಣೆ
ಶಿವಮೊಗ್ಗ, ಆಗಸ್ಟ್ 13 : ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಶಿವಮೊಗ್ಗ ಜಿಲ್ಲಾ ಪ್ರವಾಸದಲ್ಲಿದ್ದಾರೆ. ಜಿಲ್ಲೆಯ ವಿವಿಧ ಪ್ರದೇಶಗಳಿಗೆ ಭೇಟಿ ನೀಡುತ್ತಿರುವ ಅವರು ಪ್ರವಾಹದಿಂದ ಆದ ಹಾನಿಯ ಪರಿಶೀಲನೆ ನಡೆಸುತ್ತಿದ್ದಾರೆ.
ಸೋಮವಾರ ಯಡಿಯೂರಪ್ಪ ತವರು ಜಿಲ್ಲೆ ಶಿವಮೊಗ್ಗ ಪ್ರವಾಸದಲ್ಲಿದ್ದಾರೆ. ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಬಳಿಕ ಮೊದಲ ಬಾರಿಗೆ ಅವರು ಶಿವಮೊಗ್ಗಕ್ಕೆ ಆಗಮಿಸಿದ್ದಾರೆ. ವಿನೋಬ ನಗರದಲ್ಲಿರುವ ಯಡಿಯೂರಪ್ಪ ನಿವಾಸದ ಮುಂದೆ ಪೊಲೀಸರು ಮುಖ್ಯಮಂತ್ರಿಗಳಿಗೆ ಗೌರವ ವಂದನೆ ಸಲ್ಲಿಸಿದರು.
ಯಡಿಯೂರಪ್ಪ ಶಿವಮೊಗ್ಗ ನಗರದಲ್ಲಿ ಮಳೆಯಿಂದ ಹಾನಿಯಾದ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸಂಸದ ಬಿ. ವೈ. ರಾಘವೇಂದ್ರ, ಶಾಸಕರಾದ ಕೆ. ಎಸ್. ಈಶ್ವರಪ್ಪ, ಆರಗ ಜ್ಞಾನೇಂದ್ರ, ವಿಧಾನ ಪರಿಷತ್ ಸದಸ್ಯರಾದ ರುದ್ರೇಗೌಡ, ಆಯನೂರು ಮಂಜುನಾಥ್ ಮುಂತಾದವರು ಯಡಿಯೂರಪ್ಪ ಜೊತೆಗಿದ್ದಾರೆ.
ಪ್ರವಾಹವನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಿ: ಸಿದ್ದರಾಮಯ್ಯ
ಶಿವಮೊಗ್ಗ ಜಿಲ್ಲೆಯಲ್ಲಿ ಪ್ರವಾಹದಿಂದ ಆಗಿರುವ ಹಾನಿಯ ಬಗ್ಗೆ ಒಂದು ವಾರದಲ್ಲಿ ವಿವರವಾದ ವರದಿ ಸಲ್ಲಿಸಬೇಕು ಎಂದು ಯಡಿಯೂರಪ್ಪ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಶಿವಮೊಗ್ಗ ನಗರ ಸೇರಿದಂತೆ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಪ್ರವಾಹದಿಂದಾಗಿ ಅಪಾರವಾದ ಹಾನಿಯಾಗಿದೆ.
17 ಜಿಲ್ಲೆಗಳ 80 ತಾಲೂಕು ಪ್ರವಾಹ ಪೀಡಿತ, ಸರ್ಕಾರದ ಘೋಷಣೆ
50 ಕೋಟಿ ರೂ. ಘೋಷಣೆ
ಸೋಮವಾರ ಬಿ. ಎಸ್. ಯಡಿಯೂರಪ್ಪ ಶಿವಮೊಗ್ಗ ನಗರಕ್ಕೆ ಭೇಟಿ ನೀಡಿದ್ದಾರೆ. ನಗರದ ಪ್ರವಾಹ ಪೀಡಿತ ಪ್ರದೇಶಗಳಿಗೆ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಶಾಸಕ ಕೆ.ಎಸ್. ಈಶ್ವರಪ್ಪ ಮುಂತಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಶಿವಮೊಗ್ಗ ನಗರಕ್ಕೆ 50 ಕೋಟಿ ರೂ.ಗಳನ್ನು ತಾತ್ಕಾಲಿಕವಾಗಿ ಘೋಷಣೆ ಮಾಡಿದರು.
ಗೋ ಶಾಲೆಗೆ ಯಡಿಯೂರಪ್ಪ ಭೇಟಿ
ಶಿವಮೊಗ್ಗ ನಗರದಲ್ಲಿ ಸ್ಥಾಪಿಸಿರುವ ಗೋಶಾಲೆಗೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಭೇಟಿ ನೀಡಿದರು. ತುಂಗಾ ನದಿಯ ನೀರು ಗೋ ಶಾಲೆಗೆ ನುಗ್ಗಿ ಹಲವಾರು ಜಾನುವಾರುಗಳು ಮೃತಪಟ್ಟಿದ್ದವು.
ದೇವಾಲಯಕ್ಕೆ ಭೇಟಿ
ಶಿವಮೊಗ್ಗ ನಗರದ ರಾಮಣ್ಣ ಶ್ರೇಷ್ಠಿ ಪಾರ್ಕ್ನಲ್ಲಿರುವ ಸರ್ವಸಿದ್ಧಿ ವಿನಾಯಕ ದೇವಾಲಯಕ್ಕೆ ಯಡಿಯೂರಪ್ಪ, ಕೆ. ಎಸ್. ಈಶ್ವರಪ್ಪ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಬಳಿಕ ಮಾತನಾಡಿದ ಅವರು, "ನೆರೆಯಿಂದ ಜಲಾವೃತಗೊಂಡ ಮನೆಗಳ ಸಂತ್ರಸ್ಥರಿಗೆ ಬಟ್ಟೆ, ಪಾತ್ರೆ, ಆಹಾರ ಸಾಮಗ್ರಿಗಳ ಖರೀದಿಸಲು ಪ್ರತಿ ಕುಟುಂಬಕ್ಕೆ ರೂ.10,000 ಗಳ ಸಹಾಯಧನ, ಭಾಗಶಃ ಹಾನಿಗೊಳಗಾದ ಮನೆಗಳ ದುರಸ್ಥಿಗೆ ಪ್ರತಿ ಮನೆಗೆ ರೂ.1 ಲಕ್ಷ ಧನ ಸಹಾಯ ಸಂಪೂರ್ಣ ನಾಶವಾಗಿರುವ ಮನೆಗಳ ಪುನರ್ನಿರ್ಮಾಣಕ್ಕೆ ಪ್ರತಿ ಮನೆಗೆ ರೂ.5 ಲಕ್ಷ ನೆರವು" ನೀಡಲಾಗುತ್ತದೆ" ಎಂದರು.
ಹೆಲಗತ್ತಿ ಗ್ರಾಮಕ್ಕೆ ಯಡಿಯೂರಪ್ಪ ಭೇಟಿ
ಯಡಿಯೂರಪ್ಪ ತೀರ್ಥಹಳ್ಲಿ ತಾಲೂಕಿನ ಹೆಗಲತ್ತಿ ಗ್ರಾಮಕ್ಕೆ ಭೇಟಿ ನೀಡಿದರು. ಗುಡ್ಡ ಕುಸಿತದಿಂದಾಗಿ ಗ್ರಾಮದಲ್ಲಿ ಅಪಾರವಾದ ಹಾನಿಯಾಗಿದೆ.
ಮಾಧ್ಯಮಗಳ ಜೊತೆ ಮಾತನಾಡಿದ ಯಡಿಯೂರಪ್ಪ, "ಜಿಲ್ಲೆಯಲ್ಲಿ ಪ್ರವಾಹದಿಂದ ಉಂಟಾಗಿರುವ ಹಾನಿ ಪರಿಶೀಲಿಸಿ ಒಂದು ವಾರದ ಒಳಗಾಗಿ ವರದಿ ಸಲ್ಲಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಪ್ರವಾಹ ಪೀಡಿತ ಪ್ರದೇಶಗಳ ಅಭಿವೃದ್ಧಿಗೆ ಸದ್ಯದಲ್ಲಿಯೇ ವಿಶೇಷ ಪ್ಯಾಕೇಜ್ ಘೋಷಣೆ ಮಾಡಲಾಗುತ್ತದೆ. ಪ್ರವಾಹದಿಂದ ಹಾನಿಗೀಡಾದ ಅರಣ್ಯ ಭೂಮಿ, ಕೃಷಿ ಭೂಮಿ, ಆಸ್ತಿ ಪಾಸ್ತಿಗಳ ಸಮಗ್ರ ಸಮೀಕ್ಷೆಗೆ ಸೂಚನೆ ನೀಡಲಾಗಿದೆ" ಎಂದರು.