ಅನಂತ್ ಕುಮಾರ್ ಹೆಗ್ಡೆ ವಿರುದ್ಧ ಮೋದಿಗೆ ಪತ್ರ ಬರೆದ ಐಎಂಎ
ಶಿರಸಿ/ಬೆಂಗಳೂರು, ಸೆ. 6: ವೈದ್ಯರ ಮೇಲೆ ಹಲ್ಲೆ ನಡೆಸಿದ ಆರೋಪ ಹೊತ್ತು ತನಿಖೆ ಎದುರಿಸುತ್ತಿರುವ ಸಂಸದ ಅನಂತ ಕುಮಾರ್ ಹೆಗ್ಡೆ ಅವರನ್ನು ಪ್ರಧಾನಿ ಮೋದಿ ಅವರು ಸಂಪುಟಕ್ಕೆ ಸೇರಿಸಿಕೊಂಡಿರುವುದರ ಬಗ್ಗೆ ಇಂಡಿಯನ್ ಮೆಡಿಕಲ್ ಅಸೋಸಿಯೇಷನ್ (ಐಎಂಎ) ಕಳವಳ ವ್ಯಕ್ತಪಡಿಸಿದೆ.
ಸಂಸದ ಅನಂತ್ ಕುಮಾರ್ ಹೆಗಡೆ ವಿರುದ್ಧ ಎಫ್ ಐಆರ್
ಅನಂತಕುಮಾರ್ ಹೆಗ್ಡೆ ಅವರನ್ನು ಸಂಪುಟಕ್ಕೆ ಸೇರಿಸಿಕೊಂಡಿರುವುದರಿಂದ ವೈದ್ಯಕೀಯ ಸಮುದಾಯಕ್ಕೆ ತಪ್ಪು ಸಂದೇಶ ನೀಡಿದಂತಾಗಿದೆ. ಮೋದಿ ಅವರು ಈ ಬಗ್ಗೆ ಕೂಡಲೇ ಕ್ರಮ ಜರುಗಿಸುವಂತೆ ಕೋರಿ ಪತ್ರ ಬರೆಯಲಾಗಿದೆ ಎಂದು ಐಎಂಎ ರಾಷ್ಟ್ರೀಯ ಅಧ್ಯಕ್ಷ ಡಾ.ಕೆ.ಕೆ. ಅಗರ್ವಾಲ್ ಅವರು ಹೇಳಿದ್ದಾರೆ.
ತಮ್ಮ ತಾಯಿಗೆ ಸೂಕ್ತ ಚಿಕಿತ್ಸೆ ನೀಡಿಲ್ಲ ಎಂದು ಆರೋಪಿಸಿ, ಹೆಗ್ಡೆ ಅವರು ಶಿರಸಿಯಲ್ಲಿರುವ ಖಾಸಗಿ ಆಸ್ಪತ್ರೆಯ ವೈದ್ಯರ ಮೇಲೆ ಹಲ್ಲೆ ನಡೆಸಿದ್ದರು. ಈ ಘಟನೆಯ ಸಿ.ಸಿ.ಟಿ.ವಿ. ದೃಶ್ಯಗಳು ಸೋರಿಕೆಯಾಗಿ ದೇಶದಾದ್ಯಂತ ಚರ್ಚೆಗೆ ಗ್ರಾಸವಾಗಿತ್ತು.
ಜನವರಿ ತಿಂಗಳಲ್ಲಿ ಮನೆಯಲ್ಲಿ ಬಿದ್ದು ಗಾಯಮಾಡಿಕೊಂಡಿದ್ದ ಅನಮ್ತಕುಮಾರ್ ಹೆಗ್ಡೆ ಅವರ ತಾಯಿಯನ್ನು ಶಿರಸಿಯ ಟಿಎಸ್ ಎಸ್ ಆಸ್ಪತ್ರೆಗೆ ಸೇರಿಸಲಾಗಿತ್ತು. ಆದರೆ, ಚಿಕಿತ್ಸೆ ನೀಡುವಲ್ಲಿ ವಿಳಂಬವಾಗಿದೆ ಎಂದು ಆರೋಪಿಸಿದ ಉತ್ತರಕನ್ನಡದ ಸಂಸದ ಹೆಗ್ಡೆ ಅವರು ಆಸ್ಪತ್ರೆಯ ವೈದ್ಯರ ಮೇಲೆ ಹಲ್ಲೆ ಮಾಡಿದ್ದರು. ವೈದ್ಯರಾದ ಮಧುಕೇಶ್ವರ್ ಹಾಗೂ ಬಾಲಚಂದ್ರ ಅವರ ಮೇಲೆ ಹಲ್ಲೆ ನಡೆಸಿದ ದೃಶ್ಯಗಳು ಸಿಸಿ ಟಿವಿ ಕ್ಯಾಮೆರಾದಲ್ಲಿ ದಾಖಲಾಗಿತ್ತು. ನಂತರ ವೈದ್ಯರ ಬಳಿ ಹೆಗ್ಡೆ ಅವರು ಕ್ಷಮೆಯಾಚಿಸಿದ್ದರು.
ಶಿರಸಿ ಮಾರುಕಟ್ಟೆ ಪೊಲೀಸ್ ಠಾಣೆಯಲ್ಲಿ ಸಂಸದ ಅನಂತ್ ಕುಮಾರ್ ಹೆಗಡೆ ವಿರುದ್ಧ ಐಪಿಸಿ ಸೆಕ್ಷನ್ 341, 323 ಮತ್ತು 504ರ ಅಡಿಯಲ್ಲಿ ದೂರು ದಾಖಲಿಸಲಾಗಿದೆ. ಎಫ್ ಐಆರ್ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.(ಪಿಟಿಐ)