ಮಕ್ಕಳೊಂದಿಗೆ ಬೆರೆತ ಕಾಶಿನಾಥ ನಾಯ್ಕ; ಕ್ರೀಡಾ ಅಕಾಡೆಮಿ ಸ್ಥಾಪನೆ ಕನಸು ಬಿಚ್ಚಿಟ್ಟ ನೀರಜ್ ಚೋಪ್ರಾ ಗುರು
ಶಿರಸಿ, ಅಕ್ಟೋಬರ್ 5: ಟೊಕಿಯೋ ಒಲಿಂಪಿಕ್ಸ್ನಲ್ಲಿ ಚಿನ್ನದ ಪದಕ ಗೆದ್ದ ನೀರಜ್ ಚೋಪ್ರಾರ ತರಬೇತುದಾರ ಹಾಗೂ ಕಾಮನ್ವೆಲ್ತ್ ಗೇಮ್ಸ್ನಲ್ಲಿ ಕಂಚಿನ ಪದಕ ವಿಜೇತ ಕಾಶಿನಾಥ ನಾಯ್ಕ ಮಂಗಳವಾರ ಶಿರಸಿಯ ವಿಶ್ವದರ್ಶನ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳಿಗೆ ಕ್ರೀಡಾ ತರಬೇತಿ ನೀಡಿದರು.
ವಿಶ್ವದರ್ಶನ ಶಿಕ್ಷಣ ಸಂಸ್ಥೆಯ ಶಾಲೆಯಲ್ಲಿ ನಡೆದ ಸಭಾ ಕಾರ್ಯಕ್ರಮದ ನಂತರ ನೇರವಾಗಿ ಮೈದಾನಕ್ಕೆ ಮಕ್ಕಳನ್ನು ಕರೆದೊಯ್ದ ಕಾಶಿನಾಥ ನಾಯ್ಕ, ಜಾವೆಲಿನ್ ಕುರಿತು ಪ್ರಾತ್ಯಕ್ಷಿತೆ ನೀಡಿದರು. ಅದಾದ ನಂತರ ಮಕ್ಕಳಿಂದ ಕ್ರಿಕೆಟ್ ಬಾಲ್ ಎಸೆದು ಅಭ್ಯಾಸ ಮಾಡಿಸಿದರು. ನಂತರ ಜಾವೆಲಿನ್ ಎಸೆತ ಮಾಡಿಸಿದರು.
ದೂರದಲ್ಲಿರುವ ಮಾವಿನ ಮರಕ್ಕೆ ಕಲ್ಲು ಎಸೆದು ಕಾಯಿ ಕೊಯ್ಯುವ ಸಾಮರ್ಥ್ಯದ ಗ್ರಾಮೀಣ ಮಕ್ಕಳು, ಉತ್ತಮ ಕ್ರೀಡಾಪಟುಗಳಾಗಬಲ್ಲರು ಎಂದು ಅವರು ಹೇಳಿದರು. ಇನ್ನು ಉತ್ತರ ಕನ್ನಡ ಜಿಲ್ಲೆಯಲ್ಲಿ ಸಿದ್ದಿ ಜನಾಂಗದವರು ಹೆಚ್ಚಿದ್ದಾರೆ. ಅವರನ್ನು ಸೇರಿದಂತೆ ಅನೇಕ ಗ್ರಾಮೀಣ ಕ್ರೀಡಾ ಪ್ರತಿಭೆಗಳು ಇಲ್ಲಿವೆ. ಅವರಿಗೆ ಸೂಕ್ತ ವೇದಿಕೆ ದೊರೆಯದ ಕಾರಣ ಪ್ರತಿಭೆಗಳು ಅನಾವರಣಗೊಂಡಿಲ್ಲ ಎಂದರು.

ಗ್ರಾಮೀಣ ಭಾಗದ ಪ್ರತಿಭೆಗಳಿಗೆ ತರಬೇತಿ ನೀಡಿ ಅವರನ್ನು ಮುಖ್ಯ ವಾಹಿನಿಗೆ ತರುವ ಕನಸು ನನ್ನದು. ಹೀಗಾಗಿ ಮುಂದಿನ ವರ್ಷ ಕ್ರೀಡಾ ಅಕಾಡೆಮಿ ಸ್ಥಾಪಿಸುವ ಚಿಂತನೆ ಇದೆ ಎಂದೂ ಕಾಶಿನಾಥ ನಾಯ್ಕ ತಮ್ಮ ಇಂಗಿತ ವ್ಯಕ್ತಪಡಿಸಿದ್ದಾರೆ.
ನನ್ನ ಕ್ರೀಡಾ ಸಾಧನೆಗೆ ಭಾರತೀಯ ಸೈನ್ಯವೇ ಪ್ರೇರಣೆಯಾಗಿದೆ. ಕಾರ್ಗಿಲ್ ಯುದ್ಧದ ಅಂತ್ಯದ ವೇಳೆ ನಾನು ಸೇನೆ ಸೇರಿದೆ. ಅಲ್ಲಿನ ಕ್ರೀಡಾ ವಿಭಾಗ ಗಮನ ಸೆಳೆಯಿತು. ಅಲ್ಲಿ ಯಾವುದೇ ವಿಶೇಷ ತರಬೇತುದಾರರು ಇರಲಿಲ್ಲ. ಆಗ ಅಲ್ಲಿನ ಸೇನಾಧಿಕಾರಿಗಳೇ ಮಾರ್ಗದರ್ಶನ ನೀಡಿದರು. ಹೀಗಾಗಿ ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಲು ಸಾಧ್ಯವಾಯಿತು ಎಂದು ವಿವರಿಸಿದರು.

ಸಾಧನೆ ಮಾಡಬೇಕಾದರೆ ಕಷ್ಟಗಳು ಸಹಜ. ಕಷ್ಟಗಳನ್ನು ಮೀರಿ ಬದುಕಿದಾಗ ಮಾತ್ರ ಸಾಧನೆ ಸಾಧ್ಯ. ನನಗೂ ಸಾಕಷ್ಟು ಸಮಸ್ಯೆಗಳಿದ್ದವು, ಅದನ್ನು ಮೀರಿ ಗೆಲ್ಲಬೇಕು ಎಂಬ ಛಲ ಇತ್ತು. ಆ ಛಲವೇ ನನ್ನನ್ನು ಗೆಲ್ಲಿಸಿದೆ ಎಂದು ಹೇಳಿದರು.
'ಬನವಾಸಿಯಿಂದ 5 ಕಿ.ಮೀ, ದೂರದ ಹಳ್ಳಿಯಲ್ಲಿ ಹುಟ್ಟಿದ ನಾನು ಮೊದಲು ಕೂಲಿ ಕೆಲಸ ಮಾಡುತ್ತಿದ್ದೆ. ನಂತರ ಬೇಕರಿಯಲ್ಲಿ ದುಡಿದೆ. ಅನೇಕ ಅಡೆತಡೆಗಳನ್ನು ಎದುರಿಸಿ, ನಿರಂತರವಾಗಿ ಪ್ರಯತ್ನಿಸಿದ ಪರಿಣಾಮ ರಾಷ್ಟ್ರಮಟ್ಟದಲ್ಲಿ ಗುರುತಿಸಿಕೊಂಡಿದ್ದೇನೆ' ಎಂದರು.

ಗ್ರಾಮೀಣ ಭಾಗದವರು ಸಾಧನೆ ಮಾಡಲು ಸಾಧ್ಯವಿಲ್ಲ ಎಂಬುದು ಸುಳ್ಳು. ಸಾಧನೆ ಮಾಡಲು ಮುಖ್ಯವಾಗಿ ಸ್ಪರ್ಧಾತ್ಮಕ ಮನೋಭಾವನೆ ಅಗತ್ಯವಿದೆ. ಮಕ್ಕಳು ಮೊಬೈಲ್ನಲ್ಲಿ ಆಟ ಆಡುವ ಬದಲು ಮೈದಾನದಲ್ಲಿ ಆಡಿದರೆ ಆರೋಗ್ಯ ದೊರೆಯುತ್ತದೆ. ಸ್ವಂತಕ್ಕಾಗಿ ಮಾಡಿದರೆ ಸ್ವಾರ್ಥ ಎನಿಸುತ್ತದೆ. ದೇಶಕ್ಕಾಗಿ ಮಾಡಿದಾಗ ದೊರೆಯುವ ಗೆಲುವಿನ ಸಂಭ್ರಮಕ್ಕೆ ಇಡೀ ದೇಶವೇ ಸಾಕ್ಷಿಯಾಗುತ್ತದೆ ಎಂದು ಕಾಶಿನಾಥ ನಾಯ್ಕ ಹೇಳಿದರು.
ಕಾಶಿನಾಥ ನಾಯ್ಕರನ್ನು ಇದೇ ವೇಳೆ ಸನ್ಮಾನಿಸಿ ಮಾತನಾಡಿದ ಲೆಕ್ಕ ಪರಿಶೋಧಕ ವಿಘ್ನೇಶ್ವರ ಗಾಂವ್ಕರ್, ಮಕ್ಕಳು ಮಾನಸಿಕ ಹಾಗೂ ದೈಹಿಕ ಆರೋಗ್ಯ ಹೊಂದಿರಬೇಕು. ಸ್ಪರ್ಧಾತ್ಮಕ ಮನೋಭಾವನೆ ಬೆಳಸಿಕೊಳ್ಳಬೇಕು ಎಂದು ಕರೆ ನೀಡಿದರು












Click it and Unblock the Notifications