ಶಿರಸಿ: ದೇಗುಲಗಳ ಸರ್ಕಾರೀಕರಣ ವಿರೋಧಿಸಿ ಪ್ರತಿಭಟನೆ
ಶಿರಸಿ, ಅಕ್ಟೋಬರ್ 25: ರಾಜ್ಯದ ವಿವಿಧ ಭಾಗಗಳಲ್ಲಿ ಹಿಂದೂ ದೇವಾಲಯಗಳಿಗೆ ವ್ಯವಸ್ಥಾಪನಾ ಸಮಿತಿಯನ್ನು ರಚನೆ ಮಾಡುತ್ತಿರುವ ಸರ್ಕಾರದ ಕ್ರಮದ ವಿರುದ್ಧ ಉತ್ತರ ಕನ್ನಡ ಜಿಲ್ಲಾ ಹಿಂದೂ ಧಾರ್ಮಿಕ ದೇವಾಲಯಗಳ ಮಹಾಮಂಡಳದ ಆಶ್ರಯದಲ್ಲಿ ಬೃಹತ್ ಪ್ರತಿಭಟನಾ ಸಭೆ ನಡೆಯಿತು.
ಜಿಲ್ಲೆಯ ಶಿರಸಿಯ ಕರ್ಜಗಿ ಕಲ್ಯಾಣ ಮಂಟಪದಲ್ಲಿ ಪಂಚ ಯತಿವರೇಣ್ಯರ ಸಮ್ಮುಖದಲ್ಲಿ ಸಭೆಯನ್ನು ನಡೆಸಿ ವಿವಿಧ ನಿರ್ಣಯಗಳನ್ನು ಕೈಗೊಳ್ಳಲಾಯಿತು.

ಸರ್ವೋಚ್ಚ ನ್ಯಾಯಾಲಯದಲ್ಲಿ ಪ್ರಕರಣ ನಡೆಯುತ್ತಿದ್ದರೂ ಸಹ, ಅಲ್ಲಿ ಮಧ್ಯಂತರ ತಡೆಯಾಜ್ಞೆಯನ್ನು ತಂದು ತುರಾತುರಿಯಲ್ಲಿ ವ್ಯವಸ್ಥಾಪನಾ ಸಮಿತಿಯನ್ನು ರಚಿಸಲು ಮುಂದಾಗಿರುವ ಕ್ರಮವನ್ನು ದೇವಾಲಯಗಳ ಸರ್ಕಾರೀಕರಣ ಎಂದು ವಿಶ್ಲೇಷಿಸಲಾಗಿದೆ.
ಅದರೊಂದಿಗೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಈಗಾಗಲೇ ಸಮಿತಿ ರಚನೆಗೆ ಕರೆ ನೀಡಿದ್ದು, ಯಾರೂ ಸಹ ಅರ್ಜಿಗಳನ್ನು ಸಲ್ಲಿಸಬಾರದು ಎಂದು ನಿರ್ಣಯ ಕೈಗೊಂಡಿದ್ದಾರೆ. ಅಲ್ಲದೇ ಹಿಂದೂ ಧಾರ್ಮಿಕ ಸಂಸ್ಥೆಗಳ ನಿರ್ವಹಣೆಗೆ ಮುಸ್ಲೀಂ ವಕ್ಫ ಮಂಡಳಿಯ ಮಾದರಿಯಲ್ಲಿ ರಾಜ್ಯಮಟ್ಟದಲ್ಲಿ ಉಚ್ಚನ್ಯಾಯಾಲಯದ ಹಾಗೂ ಜಿಲ್ಲಾಮಟ್ಟದಲ್ಲಿ ಜಿಲ್ಲಾ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶರ ಅಧ್ಯಕ್ಷತೆಯಲ್ಲಿ ಸ್ವಾಯತ್ತ ಮಂಡಳಿಯನ್ನು ರಚಿಸಬೇಕು ಎಂದೂ ಸಹ ಸಭೆ ಆಗ್ರಹಿಸಿದೆ.

ಶಿರಸಿ ತಾಲೂಕಿನ ಸೋಂದಾ ಸ್ವರ್ಣವಲ್ಲೀ ಗಂಗಾಧರೇಂದ್ರ ಸರಸ್ವತೀ ಮಹಾಸ್ವಾಮೀಜಿ, ಹುಬ್ಬಳ್ಳಿಯ ಆರ್ಚ ಗುರುಕುಲದ ಚಿದ್ರೂಪಾನಂದ ಸ್ವಾಮೀಜಿ, ಶಿರಸಿಯ ಜೈನ ಮಠದ ಭಟ್ಟಾಕಲಂಕ ಭಟ್ಟಾರಕ ಸ್ವಾಮೀಜಿ, ಜಡೆ ಮಠದ ಮಹಾಂತ ಸ್ವಾಮೀಜಿ ಹಾಗೂ ಶಿರಸಿ ನಗರದ ಬಣ್ಣದಮಠದ ಶಿವಲಿಂಗ ಸ್ವಾಮೀಜಿ ಸೇರಿದಂತೆ ಐದು ಗುರುವರ್ಯರ ದಿವ್ಯ ಸಾನ್ನಿಧ್ಯದಲ್ಲಿ ನಡೆದ ಪ್ರತಿಭಟನಾ ಸಭೆಯಲ್ಲಿ ಸಾವಿರಕ್ಕೂ ಅಧಿಕ ಜನರು ಭಾಗವಹಿಸಿದ್ದರು.
ಉತ್ತರ ಕನ್ನಡ ಜಿಲ್ಲೆಯೊಂದಲ್ಲದೇ ಚಿತ್ರದುರ್ಗ, ಬೆಳಗಾವಿ, ದಾವಣಗೆರೆ, ದಕ್ಷಿಣ ಕನ್ನಡ ಮತ್ತಿತ್ತರ ಜಿಲ್ಲೆಗಳಿಂದಲೂ ಅಪಾರ ಸಂಖ್ಯೆಯಲ್ಲಿ ಭಕ್ತರು ಆಗಮಿಸಿ ಪ್ರತಿಭಟನಾ ಸಭೆಯಲ್ಲಿ ಭಾಗವಹಿಸಿ ತಮ್ಮ ಬೆಂಬಲವನ್ನು ಸೂಚಿಸಿದರು.












Click it and Unblock the Notifications