ಯಲ್ಲಾಪುರಕ್ಕೆ ವಿಶೇಷ ಅನುದಾನ ನೀಡಿ: ಬಿಎಸ್ ವೈಗೆ ಅನರ್ಹ ಶಾಸಕ ಶಿವರಾಮ್ ಹೆಬ್ಬಾರ್ ಪತ್ರ
ಉತ್ತರ ಕನ್ನಡ, ಆಗಸ್ಟ್ 9: ಉತ್ತರ ಕನ್ನಡದಲ್ಲಿ ವಿಪರೀತ ಮಳೆಯಾಗುತ್ತಿದೆ. ದಿನೇ ದಿನೇ ಅತಿವೃಷ್ಟಿಯಿಂದ ಹಾನಿಯೂ ಹೆಚ್ಚಾಗುತ್ತಿದೆ. ಹೀಗಾಗಿ ಯಲ್ಲಾಪುರಕ್ಕೆ ವಿಶೇಷ ಅನುದಾನ ನೀಡುವಂತೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ಅನರ್ಹ ಶಾಸಕ ಶಿವರಾಮ್ ಹೆಬ್ಬಾರ್ ಪತ್ರ ಬರೆದು ಮನವಿ ಮಾಡಿದ್ದಾರೆ.
ರಾಜ್ಯದ ಹಲವೆಡೆ ಭಾರೀ ಮಳೆಯಾಗುತ್ತಿದೆ. ಬೆಳಗಾವಿ, ಬಾಗಲಕೋಟೆ, ಉತ್ತರ ಕನ್ನಡ, ದಕ್ಷಿಣ ಕನ್ನಡ ಸೇರಿ ಹಲವು ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಜನಜೀವನವಂತೂ ಅಸ್ತವ್ಯಸ್ತವಾಗಿದೆ. ಕಳೆದೆರಡು ದಿನಗಳಿಂದ ಉತ್ತರ ಕನ್ನಡದಲ್ಲಿ ಮಳೆ ಪ್ರಮಾಣ ಹೆಚ್ಚಾಗಿ ಜನರು ಆತಂಕಗೊಂಡಿದ್ದಾರೆ. ಹೀಗಾಗಿ ಉತ್ತರ ಕನ್ನಡ ಜಿಲ್ಲೆಯಲ್ಲಿ ಸಂಭವಿಸಿರುವ ಹಾನಿ ಬಗ್ಗೆ ವೈಮಾನಿಕ ಸಮೀಕ್ಷೆ ನಡೆಸಿ ಅನುದಾನ ಮಂಜೂರು ಮಾಡಬೇಕು, ಪ್ರವಾಹಕ್ಕೀಡಾಗಿರುವ ಯಲ್ಲಾಪುರ ಕ್ಷೇತ್ರಕ್ಕೆ ವಿಶೇಷ ಅನುದಾನ ನೀಡಬೇಕು ಎಂದು ಶಿವರಾಮ್ ಹೆಬ್ಬಾರ್ ಪತ್ರ ಬರೆದಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆಯಿಂದಾಗಿ ಭಾರೀ ಆಸ್ತಿ ಪಾಸ್ತಿ, ಜಾನುವಾರುಗಳ ನಷ್ಟವಾಗಿದೆ. ಹಲವು ಸೇತುವೆಗಳು ಕೊಚ್ಚಿಕೊಂಡು ಹೋಗಿವೆ.ಜನರು ಮನೆ ಕಳೆದುಕೊಂಡು ನಿರ್ಗತಿಕರಾಗಿದ್ದಾರೆ. ವಿಶೇಷವಾಗಿ ಯಲ್ಲಾಪುರ ಕ್ಷೇತ್ರದಲ್ಲಿ ಅಪಾರ ಪ್ರಮಾಣದಲ್ಲಿ ಜನರಿಗೆ ನಷ್ಟ ಸಂಭವಿಸಿದೆ. ಹೀಗಾಗಿ ಸ್ಥಳ ಸಮೀಕ್ಷೆ ಮಾಡಿಸಿ ರಾಜ್ಯ ಹಾಗೂ ಕೇಂದ್ರ ಸರ್ಕಾರದಿಂದ ವಿಶೇಷ ಅನುದಾನ ಮಂಜೂರು ಮಾಡಬೇಕು ಎಂದು ಕೇಳಿಕೊಂಡಿದ್ದಾರೆ.












Click it and Unblock the Notifications