ಶನಿವಾರ ಉಡುಪಿಗೆ ಕೇಂದ್ರ ಸಚಿವ ಅನುರಾಗ್ ಸಿಂಗ್ ಠಾಕೂರ್ ಭೇಟಿ
ಉಡುಪಿ, ಡಿಸೆಂಬರ್ 23; ಕೇಂದ್ರ ಮಾಹಿತಿ ಮತ್ತು ಪ್ರಸಾರ ಹಾಗೂ ಯುವ ವ್ಯವಹಾರಗಳು ಮತ್ತು ಕ್ರೀಡಾ ಇಲಾಖೆ ಸಚಿವ ಅನುರಾಗ್ ಸಿಂಗ್ ಠಾಕೂರ್ ಡಿಸೆಂಬರ್ 24ರ ಶನಿವಾರ ಉಡುಪಿಗೆ ಭೇಟಿ ನೀಡಲಿದ್ದಾರೆ.
ಶನಿವಾರ ಸಂಜೆ 6.30ಕ್ಕೆ ಅಜ್ಜರಕಾಡು ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಕ್ರೀಡಾ ವಿಜ್ಞಾನ ಕೇಂದ್ರ ಉದ್ಘಾಟನೆ ಮಾಡಲಿದ್ದಾರೆ. ನಂತರ ಎಂ.ಜಿ.ಎಂ ಕಾಲೇಜಿನ ಮೈದಾನದಲ್ಲಿ ಅಟಲ್ ಉತ್ಸವದ ಅಂಗವಾಗಿ ಆಯೋಜಿಸಲಾದ ಪ್ರೋ ಕಬಡ್ಡಿ ಪಂದ್ಯಾವಳಿಯ ಉದ್ಘಾಟಿಸಲಿದ್ದಾರೆ.
ಕರ್ನಾಟಕದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ. ನಾರಾಯಣ ಗೌಡ, ಉಡುಪಿ ಶಾಸಕ ರಘುಪತಿ ಭಟ್ ಮುಂತಾದ ಗಣ್ಯರು ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿರುತ್ತಾರೆ. ಡಾ. ನಾರಾಯಣ ಗೌಡ ಅವರು ಡಿಸೆಂಬರ್ 24 ಹಾಗೂ 25 ರಂದು ಉಡುಪಿ ಜಿಲ್ಲೆಯ ಪ್ರವಾಸದಲ್ಲಿರುತ್ತಾರೆ.
ಈ ಕಾರ್ಯಕ್ರಮದಲ್ಲಿ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಅಂಗಾರ, ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ರಾಜ್ಯ ಖಾತೆ ಸಚಿವೆ ಶೋಭಾ ಕರಂದ್ಲಾಜೆ, ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ. ಸುನೀಲ್ ಕುಮಾರ್ ಭಾಗವಹಿಸಲಿದ್ದಾರೆ.

ಏನಿದು ಕ್ರೀಡಾ ವಿಜ್ಞಾನ ಕೇಂದ್ರ?; ಕ್ರೀಡಾಪಟುಗಳು ದೇಹ ಸದೃಢತೆ ಆಧಾರಿತ ಕ್ರೀಡೆಯಲ್ಲಿ ಭಾಗವಹಿಸುವಿಕೆ, ಕ್ರೀಡಾ ಸಂದರ್ಭದಲ್ಲಿ ಆಗುವ ಅವಘಡಗಳ ಚಿಕಿತ್ಸೆಗೆ ನೆರವಾಗುವ ಕ್ರೀಡಾ ವಿಜ್ಞಾನ ಕೇಂದ್ರವನ್ನು 2 ಕೋಟಿ ರೂ. ವೆಚ್ಚದಲ್ಲಿ ಉಡುಪಿಯ ಅಜ್ಜರಕಾಡು ಜಿಲ್ಲಾ ಕ್ರೀಡಾಂಗಣದಲ್ಲಿ ನಿರ್ಮಾಣ ಮಾಡಲಾಗಿದೆ.
ಕ್ರೀಡಾಪಟುಗಳಿಗೆ ಉತ್ತೇಜನ ನೀಡುವ ಜೊತೆಗೆ ಅವರು ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಮಟ್ಟದ ಕ್ರೀಡೆಗಳಲ್ಲಿ ಭಾಗವಹಿಸಿ, ಉತ್ತಮ ಪ್ರದರ್ಶನ ನೀಡುವುದರೊಂದಿಗೆ ಸ್ಪರ್ಧೆಗಳಲ್ಲಿ ವಿಜೇತರಾಗಿ ಪ್ರಶಸ್ತಿ ಹಾಗೂ ಬಹುಮಾನ ಪಡೆಯುವಂತೆ ಅನುಕೂಲ ಮಾಡುವ ಉದ್ದೇಶದಿಂದ ಉಡುಪಿ ನಗರದಲ್ಲಿ ಕ್ರೀಡಾ ವಿಜ್ಞಾನ ಕೇಂದ್ರವನ್ನು ಸ್ಥಾಪಿಸಲಾಗಿದೆ.
ಈ ಕ್ರೀಡಾ ವಿಜ್ಞಾನ ಕೇಂದ್ರದಿಂದ ಕ್ರೀಡಾಪಟುಗಳು ತಮ್ಮ ದೈನಂದಿನ ಕ್ರೀಡಾ ಚಟುವಟಿಕೆಗಳಲ್ಲಿ ಉತ್ತಮ ತರಬೇತಿ, ಸೂಕ್ಷ್ಮ ಸಲಹೆ ಸೇರಿದಂತೆ ಮತ್ತಿತರ ಕ್ರೀಡಾ ಕೌಶಲ್ಯಗಳನ್ನು ನೀಡುವುದರ ಜೊತೆಗೆ ಕ್ರೀಡಾ ಪ್ರದರ್ಶನದಲ್ಲಿ ಆಗುವ ಆಕಸ್ಮಿಕ ಅಪಘಾತಗಳ ಚಿಕಿತ್ಸೆಗೆ ಈ ಕೇಂದ್ರ ನೆರವಾಗಲಿದೆ.
ಜಿಲ್ಲೆಯ ಕ್ರೀಡಾ ಪಟುಗಳಿಗೆ ಮತ್ತಷ್ಟು ಸ್ಫೂರ್ತಿ ತುಂಬಲು ಅನುಕೂಲವಾಗುವಂತೆ ನಗರದಲ್ಲಿ ಕ್ರೀಡಾವಿಜ್ಞಾನ ಸಂಶೋಧನಾ ಕೇಂದ್ರವನ್ನು ಸ್ಥಾಪಿಸಲು ಬೇಡಿಕೆಯ ಪ್ರಸ್ತಾವನೆಯನ್ನು ಕೇಂದ್ರ ಸಚಿವರಿಗೆ ಸಲ್ಲಿಸಲಾಗುವುದು ಎಂದು ಶಾಸಕ ರಘುಪತಿ ಭಟ್ ಹೇಳಿದ್ದಾರೆ.
ಕ್ರೀಡಾ ಸಚಿವರು ಕಾರ್ಯಕ್ರಮ ಮುಗಿದ ಬಳಿಕ ಕ್ರೀಡಾಪಟುಗಳ ಜೊತೆ ಮಾತುಕತೆ ನಡೆಸಲಿದ್ದಾರೆ. ಕಾರ್ಯಕ್ರಮದಲ್ಲಿ ಜಿಲ್ಲೆಯ ಕ್ರೀಡಾಪಟುಗಳು, ಕ್ರೀಡಾ ತಂಡಗಳು ಮತ್ತು ಕ್ರೀಡಾ ಸಂಘಟನೆಗಳ ಸದಸ್ಯರು ಹಾಗೂ ವಿವಿಧ ಕ್ರೀಡೆಯಲ್ಲಿ ತೊಡಗಿಕೊಂಡಿರುವ ವಿದ್ಯಾರ್ಥಿಗಳು ಸೇರಿದಂತೆ ಕ್ರೀಡಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲಿದ್ದಾರೆ.
ಕ್ರೀಡಾಪಟುಗಳಿಗೆ ಅನುಕೂಲ; ಉಡುಪಿ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಮಾತನಾಡಿ, "ಜಿಲ್ಲೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳೂ ಸೇರಿದಂತೆ ಕ್ರೀಡಾ ಚಟುವಟಿಕೆಗಳು ನಿತ್ಯೋತ್ಸವಗಳ ರೀತಿಯಲ್ಲಿ ನಿತ್ಯವೂ ನಡೆಯುತ್ತಿದೆ. ಜಿಲ್ಲೆಯ ಅನೇಕ ಕ್ರೀಡಾಪಟುಗಳು ರಾಜ್ಯ, ರಾಷ್ಟ್ರ ಹಾಗೂ ಅಂತಾರಾಷ್ಟ್ರಿಯ ಮಟ್ಟದಲ್ಲಿಯೂ ಭಾಗವಹಿಸಿ ಜಯಶೀಲರಾಗುವುದರೊಂದಿಗೆ ಜಿಲ್ಲೆಗೆ ಕೀರ್ತಿ ತಂದಿದ್ದಾರೆ. ಈ ಕ್ರೀಡಾ ವಿಜ್ಞಾನ ಕೇಂದ್ರ ಪ್ರಾರಂಭದಿಂದ ಈ ಭಾಗದ ಕ್ರೀಡಾಪಟುಗಳಿಗೆ ಹೆಚ್ಚಿನ ಅನುಕೂಲವಾಗಲಿದೆ" ಎಂದು ಹೇಳಿದರು.
ಉಡುಪಿ ಜಿಲ್ಲಾ ರಜತ ಉತ್ಸವ ಕಾರ್ಯಕ್ರಮದ ಸಮಾರೋಪ ಸಮಾರಂಭವು ಜನವರಿ 20 ರಿಂದ 22 ರವರೆಗೆ ಮಲ್ಪೆ ಬೀಚ್ನಲ್ಲಿ ನಡೆಸುವ ಬಗ್ಗೆ ಚರ್ಚಿಸಲಾಗಿದೆ. ಉತ್ಸವದ ಅಂಗವಾಗಿ ಸಮುದ್ರದಲ್ಲಿ ಈಜುವ ಸ್ಪರ್ಧೆ, ಬೀಚ್ ಕಬಡ್ಡಿ, ವಾಲಿಬಾಲ್, ಮರಳು ಶಿಲ್ಪ ರಚನೆ, ಗಾಳಿಪಟ ಉತ್ಸವ, ವೈನ್ ಮೇಳ, ಶ್ವಾನ ಪ್ರದರ್ಶನ, ಹಗ್ಗ ಜಗ್ಗಾಟ ಸ್ಪರ್ಧೆ, ಛಾಯಾಚಿತ್ರ ಸ್ಪರ್ಧೆ, ಹೆಲಿಕ್ಯಾಪ್ಟರ್ ಪ್ರವಾಸ, ಛಾಯಾಚಿತ್ರ ಸ್ಪರ್ಧೆ ಮತ್ತಿತರ ಕಾರ್ಯಕ್ರಮಗಳು ನಡೆಯಲಿವೆ.












Click it and Unblock the Notifications