ಬಾರ್ಡರ್-ಗವಾಸ್ಕರ್ ಟ್ರೋಫಿ ಸರಣಿಗೆ ಭಾರತ ತಂಡ ಪ್ರಕಟ: ಇಬ್ಬರು ಕನ್ನಡಿಗರಿಗೆ ಅವಕಾಶ
ಬಹು ನಿರೀಕ್ಷಿತ ಬಾರ್ಡರ್-ಗವಾಸ್ಕರ್ ಟ್ರೋಫಿ ಸರಣಿಗೆ ಬಿಸಿಸಿಐ ಭಾರತ ತಂಡವನ್ನು ಆಯ್ಕೆ ಮಾಡಿದೆ. ಭಾರತ ಆಸ್ಟ್ರೇಲಿಯಾ ನಡುವಿನ ಈ ಪ್ರತಿಷ್ಠಿತ ಟೆಸ್ಟ್ ಸರಣಿ ವಿಶ್ವ ಕ್ರಿಕೆಟ್ ಜಗತ್ತಿನ ಗಮನ ಸೆಳೆಯುತ್ತದೆ. ಐದು ಪಂದ್ಯಗಳ ಟೆಸ್ಟ್ ಸರಣಿ ನವೆಂಬರ್ 22ರಿಂದ ಆರಂಭವಾಗಲಿದ್ದು. ಮೊದಲ ಟೆಸ್ಟ್ ಪರ್ತ್ನಲ್ಲಿ ನಡೆಯಲಿದೆ. ಬಾರ್ಡರ್ ಗವಾಸ್ಕರ್ ಟ್ರೋಫಿ ಸರಣಿಗೆ ಆಯ್ಕೆಯಾದ ಭಾರತ ತಂಡದಲ್ಲಿ ಇಬ್ಬರು ಕನ್ನಡಿಗರು ಅವಕಾಶ ಪಡೆದುಕೊಂಡಿದ್ದಾರೆ.
ರೋಹಿತ್ ಶರ್ಮಾ ತಂಡವನ್ನು ಮುನ್ನಡೆಸಲಿದ್ದು, ಜಸ್ಪ್ರೀತ್ ಬುಮ್ರಾ ಅವರನ್ನು ಉಪನಾಯಕನಾಗಿ ಆಯ್ಕೆ ಮಾಡಲಾಗಿದೆ. ಮುಖ್ಯವಾಗಿ ಹರ್ಷಿತ್ ರಾಣಾ ಮತ್ತು ನಿತೀಶ್ ಕುಮಾರ್ ರೆಡ್ಡಿ ಚೊಚ್ಚಲ ಅಂತಾರಾಷ್ಟ್ರೀಯ ಟೆಸ್ಟ್ ಪಂದ್ಯವನ್ನು ಆಡಲು ಅವಕಾಶ ಪಡೆದುಕೊಂಡಿದ್ದಾರೆ ದೇಶೀಯ ಟೂರ್ನಿಯಲ್ಲಿ ಮಿಂಚಿರುವ ಇವರು ಬಾಂಗ್ಲಾದೇಶ ವಿರುದ್ಧ ನಡೆದ ಟಿ20 ಸರಣಿಗೆ ಆಯ್ಕೆಯಾಗಿದ್ದರು. ಇದೀಗ ಟೆಸ್ಟ್ ತಂಡಕ್ಕೆ ಪದಾರ್ಪಣೆ ಮಾಡಲು ಸಜ್ಜಾಗಿದ್ದಾರೆ.

ತಂಡದಲ್ಲಿ ಇಬ್ಬರು ಕನ್ನಡಿಗರು
ನ್ಯೂಜಿಲೆಂಡ್ ವಿರುದ್ಧದ ಸರಣಿಯ ಮೊದಲ ಪಂದ್ಯದಲ್ಲಿ ಉತ್ತಮ ಪ್ರದರ್ಶನ ನೀಡದ ಕೆಎಲ್ ರಾಹುಲ್ ಎರಡನೇ ಟೆಸ್ಟ್ನಲ್ಲಿ ಪ್ಲೇಯಿಂಗ್ ಇಲೆವೆನ್ನಲ್ಲಿ ಸ್ಥಾನ ಕಳೆದುಕೊಂಡರು. ಅಸ್ಥಿರ ಪ್ರದರ್ಶನದಿಂದ ಟೀಕೆಗಳನ್ನು ಎದುರಿಸುತ್ತಿದ್ದರೂ, ಅವರ ಅನುಭವವನ್ನು ಪರಿಗಣಿಸಿ ಬಾರ್ಡರ್ ಗವಾಸ್ಕರ್ ಟ್ರೋಫಿ ಸರಣಿಗೆ ಆಯ್ಕೆ ಮಾಡಲಾಗಿದೆ. ಕೆಎಲ್ ರಾಹುಲ್ ಜೊತೆ ಮತ್ತೊಬ್ಬ ಕನ್ನಡಿಗ ಪ್ರಸಿದ್ಧ್ ಕೃಷ್ಣ ಕೂಡ ಆಯ್ಕೆಯಾಗಿದ್ದಾರೆ. ಆಸ್ಟ್ರೇಲಿಯಾ ವೇಗದ ಬೌಲರ್ ಗಳಿಗೆ ನೆರವು ನೀಡುವ ಪಿಚ್ಗಳಾಗಿರುವ ಕಾರಣ ಪ್ರಸಿದ್ಧ್ ಕೃಷ್ಣ ಅವರನ್ನು ಆಯ್ಕೆಗೆ ಪರಿಗಣಿಸಲಾಗಿದೆ.
ನ್ಯೂಜಿಲೆಂಡ್ ವಿರುದ್ಧ ಆಡುತ್ತಿರುವ ಟೆಸ್ಟ್ ತಂಡವನ್ನೇ ಬಹುತೇಕ ಆಯ್ಕೆ ಮಾಡಲಾಗಿದೆ. ಕುಲದೀಪ್ ಯಾದವ್ ಗಾಯದ ಸಮಸ್ಯೆಯಿಂದ ಬಳಲುತ್ತಿರುವ ಕಾರಣ ಅವರನ್ನು ಆಯ್ಕೆಗೆ ಪರಿಗಣಿಸಿಲ್ಲ ಎಂದು ಬಿಸಿಸಿಐ ತಿಳಿಸಿದೆ. ಮೊಹಮ್ಮದ್ ಶಮಿ ಇನ್ನೂ ಸಂಪೂರ್ಣವಾಗಿ ಚೇತರಿಸಿಕೊಳ್ಳದ ಕಾರಣ ಅವರನ್ನು ಕೂಡ ಆಯ್ಕೆ ಮಾಡಿಲ್ಲ. ರಣಜಿ ಟ್ರೋಫಿ ಪಂದ್ಯಾವಳಿಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡುತ್ತಿರುವ ಟೆಸ್ಟ್ ಸ್ಪೆಷಲಿಸ್ಟ್ ಅಭಿಮನ್ಯು ಈಶ್ವರನ್ ಅವಕಾಶ ಪಡೆದುಕೊಂಡಿದ್ದಾರೆ.
ಬಾರ್ಡರ್-ಗವಾಸ್ಕರ್ ಟ್ರೋಫಿ ಸರಣಿಗೆ ಭಾರತ ತಂಡ
ರೋಹಿತ್ ಶರ್ಮಾ (ನಾಯಕ), ಜಸ್ಪ್ರೀತ್ ಬುಮ್ರಾ (ಉಪನಾಯಕ), ಯಶಸ್ವಿ ಜೈಸ್ವಾಲ್, ಅಭಿಮನ್ಯು ಈಶ್ವರನ್, ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಕೆಎಲ್ ರಾಹುಲ್, ರಿಷಭ್ ಪಂತ್ (ವಿಕೆಟ್ ಕೀಪರ್), ಸರ್ಫರಾಜ್ ಖಾನ್, ಧ್ರುವ್ ಜುರೆಲ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಮೊಹಮ್ಮದ್ ಸಿರಾಜ್, ಆಕಾಶ್ ದೀಪ್, ಪ್ರಸಿದ್ಧ್ ಕೃಷ್ಣ, ಹರ್ಷಿತ್ ರಾಣಾ, ನಿತೀಶ್ ಕುಮಾರ್ ರೆಡ್ಡಿ, ವಾಷಿಂಗ್ಟನ್ ಸುಂದರ್.












Click it and Unblock the Notifications