Maharaja Trophy: ಗುಲ್ಬರ್ಗ ಮಿಸ್ಟಿಕ್ಸ್ ವಿರುದ್ಧ ಭರ್ಜರಿ ಗೆಲುವು; ಫೈನಲ್ ಪ್ರವೇಶಿಸಿದ ಬೆಂಗಳೂರು ಬ್ಲಾಸ್ಟರ್ಸ್
ಮಹಾರಾಜ ಟ್ರೋಫಿ ಪಂದ್ಯಾವಳಿಯ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಗುಲ್ಬರ್ಗ ಮಿಸ್ಟಿಕ್ಸ್ ವಿರುದ್ಧ ಬೆಂಗಳೂರು ಬ್ಲಾಸ್ಟರ್ಸ್ 9 ವಿಕೆಟ್ಗಳ ಭರ್ಜರಿ ಗೆಲುವು ಸಾಧಿಸುವ ಮೂಲಕ ಫೈನಲ್ಗೆ ಪ್ರವೇಶಿಸಿದೆ. ಎಲ್ ಆರ್ ಚೇತನ್ ಅವರ ಅಮೋಘ ಅರ್ಧಶತಕದ ನೆರವಿನಿಂದ ಬೆಂಗಳೂರು ಬ್ಲಾಸ್ಟರ್ಸ್ 1 ವಿಕೆಟ್ ಕಳೆದುಕೊಂಡು ಯಶಸ್ವಿಯಾಗಿ 156 ರನ್ಗಳ ಗುರಿಯನ್ನು ತಲುಪಿದ್ದು, ಫೈನಲ್ಗೆ ಎಂಟ್ರಿ ಕೊಟ್ಟಿದೆ. ಬ್ಯಾಟಿಂಗ್ ಮತ್ತು ಬೌಲಿಂಗ್ ವಿಭಾಗದಲ್ಲಿ ಉತ್ತಮ ಪ್ರದರ್ಶನ ನೀಡದ ಗುಲ್ಬರ್ಗ ಮಿಸ್ಟಿಕ್ಸ್ ಸೆಮಿಫೈನಲ್ನಲ್ಲಿ ಸೋತು ಪಂದ್ಯಾವಳಿಯಿಂದ ಹೊರಬಿದ್ದಿದೆ.
ಟಾಸ್ ಗೆದ್ದ ಬೆಂಗಳೂರು ಬ್ಲಾಸ್ಟರ್ಸ್ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿತು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಗುಲ್ಬರ್ಗ ಮಿಸ್ಟಿಕ್ಸ್ 19.5 ಓವರ್ ಗಳಲ್ಲಿ 155 ರನ್ ಗಳಿಸುವಷ್ಟರಲ್ಲಿ ಆಲೌಟ್ ಆಯಿತು. ಲವನಿತ್ ಸಿಸೋಡಿಯಾ 20 ಎಸೆತಗಳಲ್ಲಿ 41 ರನ್ ಗಳಿಸಿದರೆ, ದೇವದತ್ ಪಡಿಕ್ಕಲ್ 7 ಎಸೆತಗಳಲ್ಲಿ 13 ರನ್ ಗಳಿಸಿದರು.

ಪ್ರವೀಣ್ ದುಬೆ 17 ಎಸೆತಗಳಲ್ಲಿ 26 ರನ್ ಗಳಿಸಿದ್ದು ಬಿಟ್ಟರೆ ಇನ್ಯಾರಿಂದಲೂ ದೊಡ್ಡ ಇನ್ನಿಂಗ್ಸ್ ಬರಲಿಲ್ಲ. ಅಂತಿಮವಾಗಿ ಗುಲ್ಬರ್ಗ ಮಿಸ್ಟಿಕ್ಸ್ 155 ರನ್ಗಳಿಗೆ ಆಲೌಟ್ ಆಯಿತು. ಬೆಂಗಳೂರು ಬ್ಲಾಸ್ಟರ್ಸ್ ಪರ, ಮೊಹ್ಸಿನ್ ಖಾನ್, ಲವಿಶ್ ಕುಶಲ್, ಕ್ರಾಂತಿ ಕುಮಾರ್, ಶುಭಂಗ್ ಹೆಗಡೆ ತಲಾ ಎರಡು ವಿಕೆಟ್ ಪಡೆದುಕೊಂಡರು.
ಮಯಾಂಕ್, ಚೇತನ್ ಭರ್ಜರಿ ಆಟ
ಈ ಸವಾಲಿನ ಮೊತ್ತವನ್ನು ಬೆನ್ನತ್ತಿದ ಬೆಂಗಳೂರು ಬ್ಲಾಸ್ಟರ್ಸ್ 17.1 ಓವರ್ ಗಳಲ್ಲಿ 1 ವಿಕೆಟ್ ಕಳೆದುಕೊಂಡು 159 ರನ್ ಗಳಿಸುವ ಮೂಲಕ 9 ವಿಕೆಟ್ಗಳ ಭರ್ಜರಿ ಗೆಲುವು ಸಾಧಿಸಿತು. ಎಲ್ಆರ್ ಚೇತನ್ 51 ಎಸೆತಗಳಲ್ಲಿ 9 ಬೌಂಡರಿ 4 ಸಿಕ್ಸರ್ ಸಹಿತ ಅಜೇಯ 89 ರನ್ ಗಳಿಸಿದರು. ಮಯಾಂಕ್ ಅಗರ್ವಾಲ್ 37 ಎಸೆತಗಳಲ್ಲಿ 6 ಬೌಂಡರಿ, 1 ಸಿಕ್ಸರ್ ಸಹಿತ 52 ರನ್ ಗಳಿಸಿದರು. ಭುವನ್ ರಾಜು 15 ಎಸೆತಗಳಲ್ಲಿ 13 ರನ್ ಗಳಿಸಿದರು.
ಬೆಂಗಳೂರು ಬ್ಲಾಸ್ಟರ್ಸ್ ಇದೀಗ ಫೈನಲ್ ತಲುಪಿದೆ. ನಾಳೆ ಮತ್ತೊಂದು ಸೆಮಿಫೈನಲ್ ಪಂದ್ಯ ನಡೆಯಲಿದ್ದು ಮೈಸೂರು ವಾರಿಯರ್ಸ್ ಹುಬ್ಬಳ್ಳಿ ಟೈಗರ್ಸ್ ಮುಖಾಮುಖಿಯಾಗಲಿವೆ. ಈ ಪಂದ್ಯದಲ್ಲಿ ಗೆಲ್ಲುವ ತಂಡ ಫೈನಲ್ನಲ್ಲಿ ಬೆಂಗಳೂರು ಬ್ಲಾಸ್ಟರ್ಸ್ ತಂಡವನ್ನು ಎದುರಿಸಲಿದೆ.












Click it and Unblock the Notifications