IPL 2023 RCB Vs LSG: ಚಿನ್ನಸ್ವಾಮಿ ಕ್ರೀಡಾಂಗಣದ ಸುತ್ತ ಪಾರ್ಕಿಂಗ್ ಸ್ಥಳಗಳ ಬಗ್ಗೆ ಮಾಹಿತಿ
ಏಪ್ರಿಲ್ 10ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಲಕ್ನೋ ಸೂಪರ್ ಜೈಂಟ್ಸ್ ನಡುವೆ ಐಪಿಎಲ್ ಪಂದ್ಯ ನಡೆಯಲಿದೆ. ಸಂಜೆ 7.30ಕ್ಕೆ ಪಂದ್ಯ ಆರಂಭವಾಗಲಿದ್ದು, 40 ಸಾವಿರಕ್ಕೂ ಹೆಚ್ಚು ಪ್ರೇಕ್ಷಕರು ಪಂದ್ಯ ನೋಡಲು ಮೈದಾನಕ್ಕೆ ಆಗಮಿಸಲಿದ್ದಾರೆ. ಈ ಹಿನ್ನಲೆಯಲ್ಲಿ ಬೆಂಗಳೂರು ಸಂಚಾರ ಪೊಲೀಸರು ಪಾರ್ಕಿಂಗ್ ಸ್ಥಳಗಳ ಬಗ್ಗೆ ಮಾರ್ಗಸೂಚಿ ಬಿಡುಗಡೆ ಮಾಡಿದ್ದಾರೆ.
ಏಪ್ರಿಲ್ 10ರ ಸೋಮವಾರ ಸಂಜೆ 4 ಗಂಟೆಯಿಂದ ರಾತ್ರಿ 10 ಗಂಟೆಯವರೆಗೂ ಚಿನ್ನಸ್ವಾಮಿ ಸುತ್ತಮುತ್ತ ಹಲವು ಸ್ಥಳಗಳಲ್ಲಿ ಪಾರ್ಕಿಂಗ್ ಮಾಡುವುದನ್ನು ನಿಷೇಧಿಸಿದ್ದಾರೆ. ಪಂದ್ಯ ನೋಡಲು ಬರುವ ವೀಕ್ಷಕರಿಗೆ ಎಲ್ಲೆಲ್ಲಿ ಪಾರ್ಕಿಂಗ್ ಮಾಡಬೇಕು ಎನ್ನುವುದರ ಕುರಿತು ಮಾಹಿತಿ ನೀಡಿದ್ದಾರೆ. ಸೋಮವಾರ ಜನಜಂಗುಳಿ ಇರುವ ಕಾರಣ ಟ್ರಾಫಿಕ್ ಸಮಸ್ಯೆ ಉಂಟಾಗದಂತೆ ಮಾಡಲು ಮುಂಜಾಗ್ರತಾ ಕ್ರಮವಾಗಿ ಈ ಸೂಚನೆ ನೀಡಲಾಗಿದೆ.

ಪಂದ್ಯ ವೀಕ್ಷಣೆ ಮಾಡಲು ಬರುವವರು ಯುಬಿ ಸಿಟಿ ಪಾರ್ಕಿಂಗ್ ಲಾಟ್, ಕಿಂಗ್ಸ್ ರೋಡ್, ಬಿಆರ್ ವಿ ಗ್ರೌಂಡ್ ಮೆಟ್ರೋ ಮಾರ್ಗದ ಕೆಳಗಡೆ, ಕಂಠೀರವ ಸ್ಟೇಡಿಯಂ ನಲ್ಲಿ ವಾಹನಗಳನ್ನು ಪಾರ್ಕಿಂಗ್ ಮಾಡಲು ಅವಕಾಶ ನೀಡಲಾಗಿದೆ. ಇದನ್ನು ಹೊರತುಪಡಿಸಿ ಶಿವಾಜಿನಗರದಲ್ಲಿರುವ ಬಿಎಂಟಿಸಿ ಬಸ್ ನಿಲ್ದಾಣದಲ್ಲಿರುವ ಪಾರ್ಕಿಂಗ್ ಸ್ಥಳದಲ್ಲಿ ಮತ್ತು ಹಳೆ ಕೆಜಿಐಡಿ ಬಿಲ್ಡಿಂಗ್ನಲ್ಲಿ ಪಾರ್ಕಿಂಗ್ಗೆ ಅವಕಾಶ ಇರುತ್ತದೆ.

ಈ ಸ್ಥಳಗಳಲ್ಲಿ ಪಾರ್ಕಿಂಗ್ ಮಾಡಿದ್ರೆ ಭಾರಿ ದಂಡ
ಇನ್ನು ಪ್ರಮುಖ ರಸ್ತೆಗಳಲ್ಲಿ ಪಾರ್ಕಿಂಗ್ ಮಾಡುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ. ಕ್ವೀನ್ಸ್ ರಸ್ತೆ, ಮಹಾತ್ಮ ಗಾಂಧಿ ರಸ್ತೆ, ಎಂಜಿ ರಸ್ತೆಯಿಂದ ಕಬ್ಬನ್ ರೋಡ್, ರಾಜಭವನ ರಸ್ತೆ, ಸೆಂಟ್ರಲ್ ಸ್ಟ್ರೀಟ್ ರಸ್ತೆ, ಕಬ್ಬನ್ ರಸ್ತೆ, ಸೇಂಟ್ ಮಾರ್ಕ್ಸ್ ರಸ್ತೆ, ಮ್ಯೂಸಿಯಂ ರಸ್ತೆ, ಕಸ್ತೂರಿಬಾ ರಸ್ತೆ, ಅಂಬೇಡ್ಕರ್ ವೀದಿ ರಸ್ತೆ, ಟ್ರಿನಿಟಿ ಜಂಕ್ಷನ್, ಲ್ಯಾವೆಲ್ಲೆ ರಸ್ತೆ, ವಿಠ್ಠಲ್ ಮಲ್ಯ ರಸ್ತೆ, ನೃಪತುಂಗ ರಸ್ತೆಯಲ್ಲಿ ವಾಹನಗಳನ್ನು ನಿಲ್ಲಿಸದಂತೆ ಸೂಚನೆ ನೀಡಲಾಗಿದೆ.
ಸಾರ್ವಜನಿಕ ಸಾರಿಗೆ ಬಳಸಿ
ಪಂದ್ಯದ ಸಮಯದಲ್ಲಿ ಟ್ರಾಫಿಕ್ ಕಿರಿಕಿರಿಯನ್ನು ತಪ್ಪಿಸಲು ಸಾರ್ವಜನಿಕ ಸಾರಿಗೆ ಬಳಸುವಂತೆ ಪೊಲೀಸರು ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಕೂಡ ಮನವಿ ಮಾಡಿದೆ. ರಾತ್ರಿ 11 ಗಂಟೆಯವರೆಗೂ ಬಿಎಂಟಿಸಿ ಬಸ್ಗಳು ಸಂಚಾರ ಇರುತ್ತದೆ. ಪಂದ್ಯದ ದಿನ ವಿಶೇಷವಾಗಿ ಮೆಟ್ರೋ ರೈಲುಗಳು ಕೂಡ ಸಂಚರಿಸಲಿವೆ. ಮಧ್ಯರಾತ್ರಿ 1.30ರವರೆಗೆ ಮೆಟ್ರೋ ರೈಲುಗಳ ಓಡಾಟ ಇರಲಿದೆ. ಸಾರ್ವಜನಿಕರು ಈ ಸೇವೆಯನ್ನು ಬಳಸಿಕೊಳ್ಳಲು ಮನವಿ ಮಾಡಲಾಗಿದೆ.

ಹೈವೋಲ್ಟೇಜ್ ಪಂದ್ಯಕ್ಕೆ ಆರ್ ಸಿಬಿ ಸಜ್ಜು
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಈ ಬಾರಿ ಐಪಿಎಲ್ನ ಮೂರನೇ ಪಂದ್ಯವನ್ನಾಡಲು ಸಜ್ಜಾಗಿದೆ. ತವರಿನಲ್ಲಿ ಆಡಿದ ಮೊದಲನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ 8 ವಿಕೆಟ್ಗಳ ಭರ್ಜರಿ ಗೆಲುವು ಸಾಧಿಸಿತ್ತು. ನಂತರ ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಅಂಗಳದಲ್ಲಿ ನಡೆದ ಕೆಕೆಆರ್ ವಿರುದ್ಧದ ಪಂದ್ಯದಲ್ಲಿ ಹೀನಾಯ ಸೋಲನುಭವಿಸಿತ್ತು. ಈ ಬಾರಿ ತವರಿನ ಅಂಗಳದಲ್ಲಿ ಎರಡನೇ ಪಂದ್ಯವನ್ನಾಡಲು ಸಜ್ಜಾಗಿದೆ.
ಲಕ್ನೋ ಸೂಪರ್ ಜೈಂಟ್ಸ್ ತಂಡದಲ್ಲಿ ಕರ್ನಾಟಕದ ಆಟಗಾರರಾದ ಕೆಎಲ್ ರಾಹುಲ್ ಮತ್ತು ಕೃಷ್ಣಪ್ಪ ಗೌತಮ್ ಇರುವುದು ವಿಶೇಷ. ವಿರಾಟ್ ಕೊಹ್ಲಿ ಆಟವನ್ನು ನೋಡಲು ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ. ಟ್ರಾಫಿಕ್ ಕಿರಿಕಿರಿ ಇಲ್ಲದೆ ಆಟದ ಮಜಾವನ್ನು ಅನುಭವಿಸಲು ನಿಯಮಗಳನ್ನು ಪಾಲಿಸಲು ಪೊಲೀಸರು ಮನವಿ ಮಾಡಿದ್ದಾರೆ.












Click it and Unblock the Notifications