Siddaramaiah: ಸಿಎಂ ಬದಲಾವಣೆ ಚರ್ಚೆ ಹೊತ್ತಲ್ಲೇ ಹೈಕಮಾಂಡ್ ನಾಯಕರು ಬೆಂಗಳೂರಿಗೆ!
ಬೆಂಗಳೂರು, ಅಕ್ಟೋಬರ್ 15: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಬದಲಿ ನಿವೇಶನ ಹಂಚಿಕೆ ಪ್ರಕರಣದಲ್ಲಿ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ತನಿಖೆ ನಡೆಯುತ್ತಿದೆ. ನಿವೇಶನಗಳನ್ನು ವಾಪಸ್ ನೀಡಿದರೂ ಸಹ ಇಡಿಯಲ್ಲಿ ಪ್ರಕರಣ ದಾಖಲಾಗಿದೆ. ಈ ಬೆಳವಣಿಗೆ ಬಳಿಕ ಸಚಿವರ ಸರಣಿ ಸಭೆ, ಹೇಳಿಕೆಗಳು, ಮುಖ್ಯಮಂತ್ರಿ ಬದಲಾವಣೆ ವಿಚಾರದ ಕುರಿತು ಚರ್ಚೆಗಳು ನಡೆಯುತ್ತಿವೆ. ಇಂತಹ ಹೊತ್ತಿನಲ್ಲಿ ಹೈಕಮಾಂಡ್ ನಾಯಕರು ಬೆಂಗಳೂರಿಗೆ ಆಗಮಿಸುತ್ತಿದ್ದಾರೆ.
ಎಐಸಿಸಿ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಕೆ. ಸಿ. ವೇಣುಗೋಪಾಲ್ ಅಕ್ಟೋಬರ್ 15ರ ಮಂಗಳವಾರ ಬೆಂಗಳೂರಿಗೆ ಆಗಮಿಸುತ್ತಿದ್ದಾರೆ. ಸದ್ಯದ ಮಾಹಿತಿ ಪ್ರಕಾರ ಅವರು ನಗರದಲ್ಲಿ ಎರಡು ದಿನ ವಾಸ್ತವ್ಯ ಹೂಡಲಿದ್ದಾರೆ. ಹೈಕಮಾಂಡ್ ಮಟ್ಟದಲ್ಲಿ ಪ್ರಭಾವಿ ನಾಯಕರಾಗಿರುವ ಅವರ ರಾಜ್ಯ ಭೇಟಿ ಕಾಂಗ್ರೆಸ್ ವಲಯದಲ್ಲಿ ಕುತೂಹಲಕ್ಕೆ ಕಾರಣವಾಗಿದೆ.

ಕಾಂಗ್ರೆಸ್ ಆಡಳಿತ ನಡೆಸುತ್ತಿರುವ ರಾಜ್ಯ ಕರ್ನಾಟಕ. ಮುಖ್ಯಮಂತ್ರಿ ಬದಲಾವಣೆ ಕುರಿತು ರಾಜ್ಯದಲ್ಲಿ ಬಹಿರಂಗವಾಗಿಯೇ ಚರ್ಚೆಗಳು ನಡೆಯುತ್ತಿರುವಾಗ ಹೈಕಮಾಂಡ್ ನಾಯಕರ ಭೇಟಿ ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿದೆ. ಕೆ. ಸಿ. ವೇಣುಗೋಪಾಲ್ ಅವರನ್ನು ಯಾವ ಸಚಿವರು, ಯಾವ ಶಾಸಕರು ಭೇಟಿ ಮಾಡಲಿದ್ದಾರೆ? ಎಂಬುದು ಈಗ ಪ್ರಶ್ನೆಯಾಗಿದೆ.
ಪಕ್ಷ ಹೇಳುವುದೇನು?; ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ. ಸಿ. ವೇಣುಗೋಪಾಲ್ ಭೇಟಿ ಬಗ್ಗೆ ಕಾಂಗ್ರೆಸ್ ಪಕ್ಷ ಖಚಿತಪಡಿಸಿದೆ. ಆದರೆ ಪಕ್ಷದ ವತಿಯಿಂದ ಅವರು ಪಾಲ್ಗೊಳ್ಳುವ ಯಾವುದೇ ಸಭೆಗಳು ನಿಗದಿಯಾಗಿಲ್ಲ ಎಂದು ಸ್ಪಷ್ಟಪಡಿಸಿದೆ.
ಕೆ. ಸಿ. ವೇಣುಗೋಪಾಲ್ ಸಂಸತ್ ಸದಸ್ಯರು. ಅವರು ಸಾರ್ವಜನಿಕ ಲೆಕ್ಕಪತ್ರ ಸಮಿತಿ (ಪಿಎಸಿ)ಯ ಮುಖ್ಯಸ್ಥರು ಹೌದು. ಆದ್ದರಿಂದ ಸಮಿತಿಯ ಕಾರ್ಯಗಳ ಮೇಲೆ ಬೆಂಗಳೂರಿಗೆ ಆಗಮಿಸುತ್ತಿದ್ದಾರೆ. ಈ ಭೇಟಿಯ ಹಿಂದೆ ಯಾವುದೇ ರಾಜಕೀಯವಿಲ್ಲ ಎಂದು ಕಾಂಗ್ರೆಸ್ ನಾಯಕರು ಹೇಳಿದ್ದಾರೆ.
ಕಾಂಗ್ರೆಸ್ ನಾಯಕರ ಪ್ರಕಾರ ಕೆ. ಸಿ. ವೇಣುಗೋಪಾಲ್ ಸಾರ್ವಜನಿಕ ಲೆಕ್ಕಪತ್ರ ಸಮಿತಿ (ಪಿಎಸಿ)ಯ ಸಭೆಗಾಗಿ ಆಗಮಿಸಿದ್ದಾರೆ. ಪಕ್ಷದ ವತಿಯಿಂದ ಅವರ ಯಾವುದೇ ಸಭೆ ನಿಗದಿಯಾಗಿಲ್ಲ. ಎರಡು ದಿನ ಅವರು ಬೆಂಗಳೂರಿನಲ್ಲಿ ಇರಲಿದ್ದು, ಅವರನ್ನು ವೈಯಕ್ತಿಕವಾಗಿ ಭೇಟಿ ಮಾಡುವುದು ಪಕ್ಷದ ನಾಯಕರಿಗೆ ಬಿಟ್ಟ ವಿಚಾರವಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಕೆ. ಸಿ. ವೇಣುಗೋಪಾಲ್ ಅವರನ್ನು ಸೌಹಾರ್ದಯುತವಾಗಿ ಭೇಟಿ ಮಾಡಿ ವಿವಿಧ ವಿಚಾರಗಳ ಕುರಿತು ಚರ್ಚಿಸುವ ನಿರೀಕ್ಷೆ ಇದೆ. ಉಳಿದಂತೆ ಯಾವ ನಾಯಕರು ಭೇಟಿಯಾಗಲಿದ್ದಾರೆ? ಎಂಬುದು ಪ್ರಶ್ನೆ.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕರ್ನಾಟಕದವರು. ರಾಜ್ಯದ ರಾಜಕೀಯ ಪರಿಸ್ಥಿತಿ ಬಗ್ಗೆ ಅವರಿಗೆ ಚೆನ್ನಾಗಿ ಅರಿವಿದೆ. ಕಳೆದ ವಾರ ಅವರು ಬೆಂಗಳೂರಿಗೆ ಭೇಟಿ ನೀಡಿದ್ದರು. ಆದರೆ ಈಗ ರಾಹುಲ್ ಗಾಂಧಿ ಆಪ್ತ ಬಳಗದಲ್ಲಿ ಗುರುತಿಸಿಕೊಂಡಿರುವ ಕೆ. ಸಿ. ವೇಣುಗೋಪಾಲ್ ರಾಜ್ಯಕ್ಕೆ ಭೇಟಿ ನೀಡುತ್ತಿರುವುದು ಚರ್ಚೆಗೆ ಕಾರಣವಾಗಿದೆ.
ಮುಡಾ ಪ್ರಕರಣದ ಬಳಿಕ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ಪ್ರತಿಪಕ್ಷಗಳಾದ ಬಿಜೆಪಿ, ಜೆಡಿಎಸ್ ಒತ್ತಾಯಿಸುತ್ತಿವೆ. ಸಚಿವರಾದ ಪರಮೇಶ್ವರ, ಡಾ. ಹೆಚ್. ಸಿ. ಮಹಾದೇವಪ್ಪ ಹಾಗೂ ಸತೀಶ್ ಜಾರಕಿಹೊಳಿ ಕಳೆದ ವಾರ ಸಭೆಗಳನ್ನು ನಡೆಸಿ ರಾಜ್ಯ ರಾಜಕೀಯದ ಬಿಸಿಯನ್ನು ಹೆಚ್ಚಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ. ಕೆ. ಶಿವಕುಮಾರ್ ಕೆ. ಸಿ. ವೇಣುಗೋಪಾಲ್ ಭೇಟಿ ಮಾಡಿ ಮುಖ್ಯಮಂತ್ರಿ ಬದಲಾವಣೆ ಬಗ್ಗೆ ನಡೆಯುತ್ತಿರುವ ಚರ್ಚೆ, ನಾಯಕರ ಹೇಳಿಕೆಗಳಿಗೆ ತಡೆ ಹಾಕಲು ಹೈಕಮಾಂಡ್ ಮಟ್ಟದಿಂದಲೇ ಸೂಚನೆ ನೀಡುವಂತೆ ಮನವಿ ಮಾಡುವ ನಿರೀಕ್ಷೆ ಇದೆ.
ದಸರಾ ಸಮಯದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, "ಕರ್ನಾಟಕ ರಾಜ್ಯವನ್ನು ವಾಮಮಾರ್ಗ ಮತ್ತು ಮೋಸದಿಂದ ಅಸ್ಥಿರಗೊಳಿಸಲು ಪ್ರಯತ್ನಿಸುತ್ತಿರುವ ದುಷ್ಟಶಕ್ತಿಗಳನ್ನು ನಿಗ್ರಹಿಸಿ, ನಾಡವಾಸಿಗಳಿಗೆ ಸುಖ - ಶಾಂತಿಯನ್ನು ಕರುಣಿಸಲಿ ಎಂದು ತಾಯಿ ಚಾಮುಂಡೇಶ್ವರಿಯಲ್ಲಿ ಪ್ರಾರ್ಥಿಸುತ್ತೇನೆ" ಎಂದು ವಿರೋಧ ಪಕ್ಷಗಳಿಗೆ ಟಾಂಗ್ ನೀಡಿದ್ದರು.












Click it and Unblock the Notifications