ದೈಹಿಕ ಮತ್ತು ಮಾನಸಿಕ ಸಮಸ್ಯೆ ನಿವಾರಣೆಗೆ ಕ್ರೀಡೆ ಸಹಕಾರಿ
ಉಡುಪಿ, ನವೆಂಬರ್ 28; "ಪ್ರತಿಯೊಬ್ಬ ವ್ಯಕ್ತಿ ಎಲ್ಲಾ ರೀತಿಯ ದೈಹಿಕ ಮತ್ತು ಮಾನಸಿಕ ಸಮಸ್ಯೆಗಳ ನಿವಾರಣೆ ಸೇರಿದಂತೆ ಎಲ್ಲಾ ರೀತಿಯ ಸಮಸ್ಯೆಗಳನ್ನು ಎದುರಿಸಲು ಅಗತ್ಯವಿರುವ ಶಕ್ತಿಯನ್ನು ಕ್ರೀಡೆಯಲ್ಲಿ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ತೊಡಗಿಸಿಕೊಳ್ಳುವ ಮೂಲಕ ಪಡೆಯಬಹುದಾಗಿದೆ" ಎಂದು ಸಚಿವ ಡಾ. ಅಶ್ವಥ್ ನಾರಾಯಣ ಹೇಳಿದರು.
ಉನ್ನತ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಐಟಿ & ಬಿಟಿ ಇಲಾಖೆ ಸಚಿವ ಡಾ. ಅಶ್ವಥ್ ನಾರಾಯಣ ಉಡುಪಿ ಪ್ರವಾಸ ಕೈಗೊಂಡಿದ್ದರು. ಕೋಟ ವಿವೇಕ ಹೈಸ್ಕೂಲ್ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದರು.
ಕೋಟತಟ್ಟು ಗ್ರಾಮ ಪಂಚಾಯತಿ ಹಾಗೂ ಡಾ. ಶಿವರಾಮ ಕಾರಂತ ಪ್ರತಿಷ್ಠಾನ (ರಿ) ಕೋಟ ಇವರ ಸಹಯೋಗದಲ್ಲಿ ಡಾ. ಶಿವರಾಮ ಕಾರಂತ ಜನ್ಮದಿನೋತ್ಸವದ ಅಂಗವಾಗಿ ಆಯೋಜನೆ ಮಾಡಿದ್ದ ಹೊಳಪು-2022 ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಪಂಚಾಯತ್ರಾಜ್ ಮತ್ತು ನಗರ ಸ್ಥಳೀಯಾಡಳಿತ ಪ್ರತಿನಿಧಿಗಳ ಕ್ರೀಡೋತ್ಸವ ಹಾಗೂ ಸಾಂಸ್ಕೃತಿಕ ಸ್ಪರ್ಧೆ ಉದ್ಘಾಟಿಸಿದರು.

"ಕ್ರೀಡೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ತೊಡಗಿಸಿಕೊಳ್ಳುವ ಮೂಲಕ ಮಾನಸಿಕ, ದೈಹಿಕ ಶಕ್ತಿಯನ್ನು ಪಡೆಯಬಹುದಾಗಿದೆ. ನಿರಂತರ ಇಂತಹ ಚಟುಚಟಿಕೆಯಲ್ಲಿ ಭಾಗವಹಿಸುವ ಮೂಲಕ ಸಂವಿಧಾನದ ಆಶಯದಂತೆ ಪ್ರತಿಯೊಬ್ಬರಿಗೂ ಸ್ವಾತಂತ್ರ್ಯ ಸಮಾನತೆ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಕ್ರೀಡೆಯ ಮೂಲಕ ಸಮರ್ಥವಾಗಿ ನೀಡಬಹುದಾಗಿದ್ದು, ಸಂವಿಧಾನದ ಆಶಯಗಳಿಗೆ ಎಲ್ಲರೂ ಬದ್ದರಾಗಿರಬೇಕು" ಎಂದು ಸಚಿವರು ಕರೆ ನೀಡಿದರು.
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಪಂಚಾಯತ್ ರಾಜ್ ಮತ್ತು ನಗರ ಸ್ಥಳೀಯಾಡಳಿತ ಪ್ರತಿನಿಧಿಗಳು ಕ್ರೀಡಾಕೂಟದಲ್ಲಿ ಭಾಗವಹಿಸಿದ್ದು, ಅಕರ್ಷಕ ಪಥ ಸಂಚಲನ ನಡೆಸಿದರು. ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ. ಸುನೀಲ್ ಕುಮಾರ್ ಪಥಸಂಚಲನದ ಗೌರವ ಸ್ವೀಕರಿಸಿದರು.

ಸ್ಥಳೀಯ ಕಲೆ ಮತ್ತು ಸಂಸ್ಕೃತಿಯನ್ನು ಬಿಂಬಿಸುವ ಸ್ಥಬ್ದಚಿತ್ರ ಮತ್ತು ವೇಷ ಭೂಷಣಗಳು ಗಮನ ಸೆಳೆದವು. ಭಟ್ಕಳ ಶಾಸಕ ಸುನೀಲ್ ನಾಯಕ್ ಕ್ರೀಡಾಕೂಟದ ಪಥಸಂಚಲನಕ್ಕೆ ಚಾಲನೆ ನೀಡಿದರು. ಕಾಪು ಶಾಸಕ ಲಾಲಾಜಿ ಆರ್ ಮೆಂಡನ್ ಕ್ರೀಡಾ ಪ್ರತಿಜ್ಞಾ ವಿಧಿ ಭೋಧಿಸಿದರು. ವಿಧಾನಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಧ್ವಜಾರೋಹಣ ನೆರವೇರಿಸಿದರು.
ಉಡುಪಿ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಸಂವಿಧಾನ ದಿನದ ಪ್ರಸ್ತಾವನೆ ಭೋದಿಸಿದರು. ಕೋಟತಟ್ಟು ಗ್ರಾಮ ಪಂಚಾಯತಿ ಅಧ್ಯಕ್ಷೆ ಅಶ್ವಿನಿ ದಿನೇಶ್ ಅಧ್ಯಕ್ಷತೆ ವಹಿಸಿದ್ದರು.
ಇದೇ ಕಾರ್ಯಕ್ರಮದಲ್ಲಿ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅತ್ಯುತ್ತಮ ಗ್ರಾಮ ಪಂಚಾಯತಿಗಳಿಗೆ ಪ್ರಶಸ್ತಿ ವಿತರಿಸಿದರು. ಉಡುಪಿ ಶಾಸಕ ರಘುಪತಿ ಭಟ್, ಬೈಂದೂರು ಶಾಸಕ ಬಿ. ಎಂ. ಸುಕುಮಾರ್ ಶೆಟ್ಟಿ , ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಮತ್ತಿತರರು ಉಪಸ್ಥಿತರಿದ್ದರು.












Click it and Unblock the Notifications