ಫಿಕ್ಸಿಂಗ್ ಆರೋಪ: ಐಪಿಎಸ್ ಅಧಿಕಾರಿ ವಿರುದ್ಧ ಧೋನಿ ಸಲ್ಲಿಸಿದ್ದ ಅರ್ಜಿ ವಿಚಾರಣೆಗೆ ಮದ್ರಾಸ್ ಹೈಕೋರ್ಟ್ ಸಮ್ಮತಿ
ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಜಿ.ಸಂಪತ್ ಕುಮಾರ್ ವಿರುದ್ಧ ಕ್ರಿಕೆಟಿಗ ಮಹೇಂದ್ರ ಸಿಂಗ್ ಧೋನಿ ಸಲ್ಲಿಸಿರುವ ನ್ಯಾಯಾಂಗ ನಿಂದನೆ ಅರ್ಜಿಯನ್ನು ಜೂನ್ 15 ರಂದು ವಿಚಾರಣೆ ಮಾಡುವುದಾಗಿ ಮದ್ರಾಸ್ ಹೈಕೋರ್ಟ್ ತಿಳಿಸಿದೆ.
ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿ ವಿರುದ್ಧ ಸಂಪತ್ ಕುಮಾರ್ ಮ್ಯಾಚ್ ಫಿಕ್ಸಿಂಗ್ ಆರೋಪ ಮಾಡಿದ್ದರು. ತಮ್ಮ ಮೇಲೆ ಆರೋಪ ಆಧಾರ ರಹಿತ ಎಂದಿದ್ದ ಧೋನಿ, ಅಧಿಕಾರಿಯ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕೋರ್ಟ್ ಮೆಟ್ಟಿಲೇರಿದ್ದರು.

ನ್ಯಾಯಮೂರ್ತಿಗಳಾದ ಎಂ.ಸುಂದರ್ ಮತ್ತು ಕೆ.ಗೋವಿಂದರಾಜನ್ ತಿಲಕವಾಡಿ ಅವರು ಎಂಎಸ್ ಧೋನಿ ಪರ ವಕೀಲರಾದ ಪಿ.ಆರ್.ರಾಮನ್ ಮತ್ತು ಜಿ.ಸಂಪತ್ ಕುಮಾರ್ ಪರ ವಕೀಲ ಪೆರುಂಬುಲವಿಲ್ ರಾಧಾಕೃಷ್ಣನ್ ಅವರಿಗೆ ಮಾಹಿತಿ ನೀಡಿದ್ದು, ಪ್ರತಿ ಗುರುವಾರ ನ್ಯಾಯಾಂಗ ನಿಂದನೆ ಅರ್ಜಿಗಳ ವಿಚಾರಣೆ ಕೈಗೆತ್ತಿಕೊಳ್ಳುವುದಾಗಿ ತಿಳಿಸಿದ್ದು, ಗುರುವಾರ ಧೋನಿ ಅರ್ಜಿ ವಿಚಾರಣೆ ಕೂಡ ನಡೆಯಲಿದೆ ಎಂದು ಹೇಳಿದ್ದಾರೆ.
2014 ರಲ್ಲಿ ಐಪಿಎಸ್ ಅಧಿಕಾರಿ ವಿರುದ್ಧ ಎಂಎಸ್ ಧೋನಿ 100 ಕೋಟಿ ರೂಪಾಯಿ ಮಾನನಷ್ಟ ಮೊಕದ್ದಮೆ ಹೂಡಿದ್ದರು. ಐಪಿಎಲ್ ಬೆಟ್ಟಿಂಗ್ ಹಗರಣಕ್ಕೆ ಸಂಬಂಧಪಟ್ಟಂತೆ ತಮ್ಮ ವಿರುದ್ಧ ಮಾಡಿರುವ ಆಧಾರ ರಹಿತ ರಹಿತ ಆರೋಪಗಳಿಗಾಗಿ ಐಪಿಎಸ್ ಅಧಿಕಾರಿ ಜಿ.ಸಂಪತ್ ಕುಮಾರ್ ಅವರನ್ನು ಶಿಕ್ಷಿಸುವಂತೆ ಮನವಿ ಮಾಡಿಕೊಂಡಿದ್ದಾರೆ.
ಧೋನಿ ವಿರುದ್ಧ ಗಂಭೀರ ಆರೋಪ ಮಾಡಿದ್ದ ಸಂಪತ್ ಕುಮಾರ್
2013ರಲ್ಲಿ ಐಪಿಎಸ್ ಅಧಿಕಾರಿ ಸಂಪತ್ ಕುಮಾರ್ ಇಂಡಿಯನ್ ಪ್ರೀಮಿಯರ್ ಲೀಗ್ ಸ್ಪಾಟ್ ಫಿಕ್ಸಿಂಗ್ ಮತ್ತು ಬೆಟ್ಟಿಂಗ್ ಹಗರಣದ ತನಿಖೆ ನಡೆಸುತ್ತಿದ್ದರು. ತನಿಖೆಯ ಸಂದರ್ಭದಲ್ಲಿ ಧೋನಿ ವಿರುದ್ಧ ಹೇಳಿಕೆ ನೀಡಿದ್ದ ಸಂಪತ್ ಕುಮಾರ್, ಮ್ಯಾಚ್ ಫಿಕ್ಸಿಂಗ್ ಆರೋಪ ಕೂಡ ಮಾಡುವ ಮೂಲಕ ಸುದ್ದಿಯಾಗಿದ್ದರು.
ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ 2016 ಮತ್ತು 2017 ರಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಜಸ್ಥಾನ ರಾಯಲ್ಸ್ ತಂಡಗಳನ್ನು ಐಪಿಎಲ್ನಿಂದ ನಿಷೇಧಿಸಲಾಗಿತ್ತು. ಸಿಎಸ್ಕೆ ತಂಡದ ನಾಯಕ ಧೋನಿ ಈ ಪ್ರಕರಣದಲ್ಲಿ ನನ್ನ ಪಾತ್ರವಿಲ್ಲ ಎಂದು ವಾದ ಮುಂದಿಟ್ಟಿದ್ದಾರೆ. ಕೋರ್ಟ್ ಕೂಡ ತಂಡಗಳನ್ನು ನಿಷೇಧಿಸಿತ್ತೇ ಹೊರತು, ಯಾವುದೇ ಆಟಗಾರರ ಮೇಲೆ ನಿಷೇಧ ಹೇರಿರಲಿಲ್ಲ.
ಸಂಪತ್ ಕುಮಾರ್ ವಿರುದ್ಧ ಕಾನೂನು ಹೋರಾಟ
ಮ್ಯಾಚ್ ಫಿಕ್ಸಿಂಗ್ ಪ್ರಕರಣದಲ್ಲಿ ನನ್ನ ಪಾತ್ರ ಇಲ್ಲದೇ ಇದ್ದರೂ ಗಂಭೀರ ಆರೋಪ ಮಾಡಿರುವ ಐಪಿಎಸ್ ಅಧಿಕಾರಿ ಸಂಪತಗ ಕುಮಾರ್ ವಿರುದ್ಧ 2014ರಲ್ಲಿ 100 ಕೋಟಿ ರೂಪಾಯಿ ಮಾನನಷ್ಟ ಮೊಕದ್ದಮೆ ಹೂಡಿದ್ದರು. ಈ ಸಂಬಂಧ ವಿಚಾರಣೆ ನಡೆಸಲು ಮದ್ರಾಸ್ ಹೈಕೋರ್ಟ್ ಮುಂದಾಗಿದ್ದು, ಜೂನ್ 15ರಿಂದ ವಿಚಾರಣೆ ಆರಂಭವಾಗಲಿದೆ.












Click it and Unblock the Notifications