ಕ್ರೀಡಾಪಟುಗಳ ಆರೋಗ್ಯ ರಕ್ಷಣೆಗೆ ತಜ್ಞರ ಮಾರ್ಗದರ್ಶನ: ಸುಧಾಕರ್
ಬೆಂಗಳೂರು, ಏಪ್ರಿಲ್ 15: ರಾಜ್ಯದಲ್ಲಿ ಪ್ರತಿಭಾವಂತ ಕ್ರೀಡಾಪಟುಗಳಿದ್ದು, ಇಂಥವರಿಗೆ ಸರಿಯಾದ ತರಬೇತಿ, ಆರೋಗ್ಯದ ಬಗ್ಗೆ ಮಾರ್ಗದರ್ಶನ ನೀಡಲು ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ತಜ್ಞರ ಸಲಹೆ ಪಡೆಯುವ ಕಾರ್ಯಕ್ರಮ ರೂಪಿಸಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಅಧೀನದ ರಾಜ್ಯದ 34 ಕ್ರೀಡಾ ವಸತಿನಿಲಯದ ಕ್ರೀಡಾಪಟುಗಳಿಗೆ ವೈದ್ಯಕೀಯ ಸೌಲಭ್ಯ ಒದಗಿಸುವ ಯೋಜನೆಯನ್ನು ಸರ್ಕಾರ ರೂಪಿಸಿದೆ. ವಿಕಾಸಸೌಧದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಚಿವ ಡಾ.ಕೆ.ಸುಧಾಕರ್ ಅವರ ಉಪಸ್ಥಿತಿಯಲ್ಲಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ, ಬೆಂಗಳೂರು ಮತ್ತು ಕ್ರೀಡಾ ವಿಜ್ಞಾನ ಕೇಂದ್ರಗಳ ನಡುವೆ ಒಪ್ಪಂದಕ್ಕೆ ಸಹಿ ಹಾಕಲಾಯಿತು.
ಯುವಜನರಿಗೆ ಕ್ರೀಡಾ ಚಟುವಟಿಕೆ ಬಹಳ ಮುಖ್ಯ
ನಂತರ ಮಾತನಾಡಿದ ಸಚಿವರು, ಯುವಜನರಿಗೆ ಕ್ರೀಡಾ ಚಟುವಟಿಕೆ ಬಹಳ ಮುಖ್ಯ. ಮಕ್ಕಳಿಗೆ ದೈಹಿಕ ಆರೋಗ್ಯವನ್ನು ಸದೃಢವಾಗಿರಿಸಿಕೊಳ್ಳಲು ಕ್ರೀಡೆ ಅಗತ್ಯ. ಕ್ರೀಡೆಯಲ್ಲಿ ತೊಡಗಿಸಿಕೊಂಡವರು ದೈಹಿಕ ಆರೋಗ್ಯದ ಜೊತೆಗೆ ಮಾನಸಿಕ ಆರೋಗ್ಯವನ್ನು ಕೂಡ ಕಾಪಾಡಿಕೊಳ್ಳಬೇಕು. ಆರೋಗ್ಯವನ್ನು ಉತ್ತಮವಾಗಿರಿಸಿಕೊಳ್ಳಲು ರಾಜ್ಯದ ತಜ್ಞರು ಮಾರ್ಗದರ್ಶನ ನೀಡಲಿದ್ದಾರೆ. ಯಾವ ರೀತಿಯ ಆಹಾರ ಸೇವಿಸಬೇಕು ಎಂಬುದರಿಂದ ಆರಂಭವಾಗಿ, ಯಾವ ವ್ಯಕ್ತಿಯ ದೇಹಕ್ಕೆ ಯಾವ ರೀತಿ ಚಟುವಟಿಕೆ ಬೇಕು ಎಂಬ ಬಗ್ಗೆ ವಿಶ್ಲೇಷಣೆ ಮಾಡಿ, ಸಲಹೆ ನೀಡಲಾಗುತ್ತದೆ ಎಂದು ತಿಳಿಸಿದರು.
ವಿಶ್ವವಿದ್ಯಾಲಯದ ನೆರವು ಪಡೆಯಲಾಗುತ್ತಿದೆ
130 ಕೋಟಿ ಜನರಿರುವ ದೇಶದಲ್ಲಿ ಒಲಿಂಪಿಕ್ಸ್ ಮೊದಲಾದ ಕ್ರೀಡಾಸ್ಪರ್ಧೆಗಳಲ್ಲಿ ಎಷ್ಟು ಪದಕ ಪಡೆಯುತ್ತಿದ್ದೇವೆ ಎಂದು ಪ್ರಶ್ನಿಸಿಕೊಳ್ಳಬೇಕಿದೆ. ನಮ್ಮಲ್ಲಿ ಎಲ್ಲ ರೀತಿಯ ಪ್ರತಿಭಾವಂತರಿದ್ದಾರೆ. ಆದರೆ ಇಂತಹವರಿಗೆ ಸರಿಯಾದ ತರಬೇತಿ, ಮಾರ್ಗದರ್ಶನ ನೀಡಬೇಕಿದೆ. ಕ್ರೀಡಾ ಇಲಾಖೆಯವರು ಮಕ್ಕಳಲ್ಲಿ ಹೊಸತನ ಮೂಡಿಸುವ ಕೆಲಸ ಮಾಡುತ್ತಿದ್ದಾರೆ. ಇದಕ್ಕಾಗಿ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ನೆರವು ಪಡೆಯಲಾಗುತ್ತಿದೆ. 34 ಕ್ರೀಡಾ ವಸತಿ ಶಾಲೆಗಳ ಮಕ್ಕಳು ಇದರ ಸದುಪಯೋಗ ಪಡೆಯಬೇಕು. ಇಂತಹ ಒಳ್ಳೆಯ ಉದ್ದೇಶದಿಂದ ಉತ್ತಮ ಫಲಿತಾಂಶ ದೊರೆಯಲಿದೆ. ನಮ್ಮ ರಾಜ್ಯದ ಮಕ್ಕಳು ವೈಯಕ್ತಿಕವಾಗಿ ಹಾಗೂ ದೇಶಕ್ಕಾಗಿ ಹೆಸರು ತಂದು ಕೀರ್ತಿ ಸಂಪಾದಿಸಲು ಇದು ನೆರವಾಗಲಿದೆ ಎಂದರು.
ಗ್ರಾಮೀಣ ಭಾಗದ ಕ್ರೀಡಾಪಟುಗಳಿಗೆ ಹೆಚ್ಚಿನ ವೈದ್ಯಕೀಯ ಚಿಕಿತ್ಸೆ
ರಾಜ್ಯದ 30 ಜಿಲ್ಲೆಗಳ ಕ್ರೀಡಾ ವಸತಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಗ್ರಾಮೀಣ ಭಾಗದ ಕ್ರೀಡಾಪಟುಗಳಿಗೆ ಹೆಚ್ಚಿನ ವೈದ್ಯಕೀಯ ಚಿಕಿತ್ಸೆ, ಆರೋಗ್ಯ ಶಿಕ್ಷಣ, ಆರೋಗ್ಯ ಮಾಹಿತಿ, ದೈಹಿಕ ಆರೋಗ್ಯ ಹಾಗೂ ಮಾನಸಿಕ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸಲು ಈ ಕಾರ್ಯಕ್ರಮ ಸಹಕಾರಿ.
ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ಹಲವಾರು ಸಂಶೋಧನೆ, ಚಿಕಿತ್ಸೆಗಳಿಗೆ ಜನಪ್ರಿಯ. ಈ ಸಂಸ್ಥೆಯ ತಜ್ಞರನ್ನು ಬಳಸಿಕೊಂಡು ಕ್ರೀಡಾಪಟುಗಳಿಗೆ ಆರೋಗ್ಯ ಮಾರ್ಗದರ್ಶನ ನೀಡಲಾಗುತ್ತದೆ.
ಮಾನಸಿಕ ಆರೋಗ್ಯವನ್ನು ಉತ್ತಮವಾಗಿರಿಸಿಕೊಳ್ಳುವುದು
ಪ್ರತಿ ದಿನ ವೈದ್ಯಕೀಯ ತಪಾಸಣೆ, ಗಾಯಗಳ ಬಗ್ಗೆ ಮಾಹಿತಿ ಹಾಗೂ ಚಿಕಿತ್ಸಾ ವಿಧಾನ, ಆರೋಗ್ಯವನ್ನು ಸದಾ ಉತ್ತಮವಾಗಿರಿಸಿಕೊಳ್ಳಲು ಅನುಸರಿಸಬೇಕಾದ ಕ್ರಮ, ಪೌಷ್ಠಿಕ ಆಹಾರ ಸೇವನೆ, ಮಾನಸಿಕ ಆರೋಗ್ಯವನ್ನು ಉತ್ತಮವಾಗಿರಿಸಿಕೊಳ್ಳುವುದು ಮೊದಲಾದವುಗಳ ಬಗ್ಗೆ ಮಾರ್ಗದರ್ಶನ ನೀಡಲಾಗುತ್ತದೆ.
ಪ್ರತಿ ಜಿಲ್ಲೆಗಳಲ್ಲಿ ಮೆಡಿಕಲ್ ಕಾಲೇಜುಗಳ ವಿವಿಧ ವಿಭಾಗಗಳ ತಜ್ಞರ ಸಹಾಯವನ್ನು ವಸತಿ ಶಾಲೆಗಳು ಪಡೆಯಬಹುದು. ಕ್ರೀಡಾಪಟುಗಳ ಆರೋಗ್ಯ ತಪಾಸಣೆ ಮಾಡಬಹುದು.