ಪ್ಯಾರಿಸ್ ಒಲಿಂಪಿಕ್ಸ್ಗೆ ರಾಜ್ಯದ ಭರ್ಜರಿ ತಯಾರಿ; 75 ಕ್ರೀಡಾಪಟುಗಳ ಆಯ್ಕೆ!
ಬೆಂಗಳೂರು, ಅ. 24: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸ್ವಾತಂತ್ರ್ಯ ಅಮೃತ ಮಹೋತ್ಸವದ ಭಾಷಣದಲ್ಲಿ ಘೋಷಣೆ ಮಾಡಿದಂತೆ 'ಅಮೃತ ಕ್ರೀಡಾ ದತ್ತು ಯೋಜನೆ'ಯಡಿ 75 ಕ್ರೀಡಾಪಟುಗಳನ್ನು ರಾಜ್ಯ ಕ್ರಿಡಾ ಇಲಾಖೆ ಆಯ್ಕೆ ಮಾಡಿದೆ.
ಮುಂದಿನ ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ ಭಾಗವಹಿಸಿ ಹೆಚ್ಚಿನ ಪದಕ ಗೆಲ್ಲಲು ಅನುವಾಗುವ ನಿಟ್ಟಿನಲ್ಲಿ ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ವ್ಯಾಪ್ತಿಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಳೆದ ಆಗಸ್ಟ್ 15ರಂದು ಅಮೃತ ಕ್ರೀಡಾ ದತ್ತು ಯೋಜನೆಯನ್ನು ಘೋಷಿಸಿದ್ದರು. ಅದರಂತೆ ಇದೀಗ ಕ್ರೀಡಾಪಟುಗಳನ್ನು ತರಬೇತಿಗಾಗಿ ಆಯ್ಕೆ ಮಾಡಲಾಗಿದೆ.
ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ ಭರ್ಜರಿ ಪ್ರದರ್ಶನಕ್ಕೆ ಪ್ರಯತ್ನ!
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಈ ಹಿಂದೆಯೇ ಘೋಷಣೆ ಮಾಡಿದಂತೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ. ನಾರಾಯಣ ಗೌಡ ಅವರ ಅಧ್ಯಕ್ಷತೆಯ ಉನ್ನಾತಾಧಿಕಾರ ಸಮಿತಿಯು ವಿವಿಧ ಕ್ರೀಡಾಕೂಟಗಳಲ್ಲಿ ಭಾಗವಹಿಸಿದ ಪ್ರತಿಭಾನ್ವಿತ 75 ಕ್ರೀಡಾಪಟುಗಳನ್ನು ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ ಭಾಗವಹಿಸಲು ತಯಾರಿ ಮಾಡಲು ಆಯ್ಕೆ ಮಾಡಿದೆ. ಜೊತೆಗೆ 20 ಕಾಯ್ದಿರಿಸಿದ ಪ್ರತಿಭಾನ್ವಿತ ಕ್ರೀಡಾಪಟುಗಳನ್ನೂ ಕೂಡ ಆಯ್ಕೆ ಮಾಡಲಾಗಿದೆ. ಅವರೆಲ್ಲರಿಗೂ ಅಂತಾರಾಷ್ಟ್ರೀಯ ದರ್ಜೆಯ ತರಬೇತಿ ಸಿಗುವಂತೆ ಮಾಡುವುದು ಸರ್ಕಾರದ ಗುರಿಯಾಗಿದೆ.
ಟೋಕಿಯೋ ಒಲಂಪಿಕ್, ಕಾಮನ್ವೆಲ್ತ್ ಗೇಮ್ಸ್, ಏಷ್ಯನ್ ಗೇಮ್ಸ್ ಸೇರಿದಂತೆ ರಾಷ್ಟ್ರೀಯ, ಅಂತಾರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸಿದ 75 ಕ್ರೀಡಾಪಟುಗಳನ್ನು ಅಮೃತ ಕ್ರೀಡಾ ದತ್ತು ಯೋಜನೆಯಡಿ ತರಬೇತಿಗೆ ಆಯ್ಕೆ ಮಾಡಲಾಗಿದೆ.
ಟೋಕಿಯೋ ಒಲಿಂಪಿಕ್ಸ್ನಲ್ಲಿ ಭಾಗವಹಿಸಿದ್ದವರೂ ಆಯ್ಕೆ!
ಟೋಕಿಯೋ ಒಲಿಂಪಿಕ್ಸ್ನಲ್ಲಿ ಭಾಗವಹಿಸಿದ್ದ ಗಾಲ್ಫ್ ಆಟಗಾರ್ತಿ ಅದಿತಿ ಅಶೋಕ್, ಈಜುಪಟು ಶ್ರೀಹರಿ ನಟರಾಜ್, ಪ್ಯಾರಾ ಈಜುಪಟು ನಿರಂಜನ್, ಫೌದಾ ಮಿರ್ಜಾ, ಷಕೀನಾ ಖಾತೂನ್ ಸೇರಿದಂತೆ ವಿವಿಧ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದ 75 ಕ್ರೀಡಾಪಟುಗಳನ್ನು ಗುರುತಿಸಿ ಆಯ್ಕೆ ಮಾಡಲಾಗಿದೆ. ಈಗಾಗಲೇ ಅಂತಾರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸಿದ್ದವರಿಗೆ ಹೆಚ್ಚಿನ ಹಾಗೂ ಗುಣಮಟ್ಟದ ತರಬೇತಿ ಕೊಡಲು ರಾಜ್ಯ ಸರ್ಕಾರ ಮುಂದಾಗಿದೆ. ಕಳೆದ ಒಲಿಂಪಿಕ್ಸ್ನಲ್ಲಿ ಭಾರತದ ಕ್ರೀಡಾಪಟುಗಳ ಸಾಧನೆಯ ಪ್ರಭಾವದಿಂದ ರಾಜ್ಯ ಸರ್ಕಾರ ಈ ಯೋಜನೆ ಜಾರಿಗೆ ತಂದಿತ್ತು. ಇದೀಗ ಕ್ರೀಡಾಪಟುಗಳ ಆಯ್ಕೆಯನ್ನೂ ಮಾಡಲಾಗಿದೆ.
ಖಾಸಗಿ ಕಂಪನಿಗಳಿಂದಲೂ ಸಹಾಯದ ನಿರೀಕ್ಷೆ!
ಅಮೃತ ಕ್ರೀಡಾದತ್ತು ಯೋಜನೆಯಲ್ಲಿ ವಾರ್ಷಿಕ ಐದು ಲಕ್ಷ ರೂಪಾಯಿ ನೀಡಲಾಗುತ್ತದೆ. ಅಗತ್ಯ ತರಬೇತಿ ಹಾಗೂ ಪ್ರೋತ್ಸಾಹ ನೀಡುವ ಮೂಲಕ ಮುಂದಿನ ಒಲಿಂಪಿಕ್ಸ್ನಲ್ಲಿ ಹೆಚ್ಚಿನ ಪದಕಗಳನ್ನು ಗೆಲ್ಲುವ ನಿಟ್ಟಿನಲ್ಲಿ ಕ್ರೀಡಾಪಟುಗಳನ್ನು ಸಜ್ಜುಗೊಳಿಸಲಾಗುತ್ತದೆ. ಅದರ ಜೊತೆಗೆ ಕ್ರೀಡಾಪಟುಗಳಿಗೆ ಮತ್ತಷ್ಟು ಹೆಚ್ಚಿನ ಪ್ರೋತ್ಸಾಹ ನೀಡುವ ಸಲುವಾಗಿ ಸಿಎಸ್ಆರ್ ಅಡಿಯಲ್ಲಿ ದತ್ತು ತೆಗೆದುಕೊಳ್ಳಲು 150ಕ್ಕೂ ಕಂಪನಿಗಳಿಗೆ ಪತ್ರ ಬರೆದು ಚರ್ಚಿಸಲಾಗಿದೆ. ಈಗಾಗಲೇ 50 ಕ್ಕೂ ಹೆಚ್ಚು ಕಂಪನಿಗಳು ಮುಂದೆ ಬಂದಿವೆ ಎಂದು ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ. ನಾರಾಯಣ ಗೌಡ ಅವರು ತಿಳಿಸಿದ್ದಾರೆ.
ಪ್ರೋತ್ಸಾಹ ಧನ ವಿತರಿಸಲಿದ್ದಾರೆ ಸಿಎಂ ಬೊಮ್ಮಾಯಿ!
ಈ ಬಗ್ಗೆ ಮಾಹಿತಿ ನೀಡಿರುವ ಕ್ರೀಡಾ ಇಲಾಖೆ ಸಚಿವ ಡಾ. ಕೆ.ಸಿ. ನಾರಾಯಣಗೌಡ ಅವರು, "ಬರುವ ನವೆಂಬರ್ ಮೊದಲನೇ ವಾರದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕ್ರೀಡಾ ದತ್ತು ಯೋಜನೆಯಲ್ಲಿ ಆಯ್ಕೆ ಆಗಿರುವ ಎಲ್ಲಾ ಕ್ರೀಡಾಪಟುಗಳಿಗೆ ಪ್ರೋತ್ಸಾಹ ಧನ ವಿತರಿಸಲಿದ್ದಾರೆ" ಎಂದು ತಿಳಿಸಿದ್ದಾರೆ.
ಯೋಜನೆಯಡಿ ಗಾಲ್ಫ್ - 1, ಸ್ವಿಮ್ಮಿಂಗ್ -5, ಅಥ್ಲೆಟಿಕ್ಸ್- 12, ಪ್ಯಾರಾ ಅಥ್ಲೆಟಿಕ್ಸ್- 3, ಸೈಕ್ಲಿಂಗ್- 8, ಬ್ಯಾಸ್ಕೆಟ್ಬಾಲ್- 7, ಕುಸ್ತಿ- 4, ಟೆನ್ನಿಸ್-3, ಟೇಬಲ್ ಟೆನ್ನಿಸ್-2, ಹಾಕಿ- 5, ಬ್ಯಾಡ್ಮಿಂಟನ್- 9 ಸೇರಿದಂತೆ ವಿವಿಧ ಕ್ರೀಡೆಗಳಲ್ಲಿ ಸ್ಪರ್ಧಿಸುವ 75 ಪ್ರತಿಭಾವಂತ ಕ್ರೀಡಾಪಟುಗಳನ್ನು ಆಯ್ಕೆ ಮಾಡಲಾಗಿದೆ.