Vaibhav Sooryavanshi: ವೈಭವ್ ಕ್ರಿಕೆಟ್ ಲೋಕದ ಲಿಯೋನೆಲ್ ಮೆಸ್ಸಿ: ಎದುರಾಳಿ ಬೌಲರ್ಗಳಿಗೆ ಲಲಿತ್ ಮೋದಿ ಎಚ್ಚರಿಕೆ ಕಿವಿಮಾತು
Lalit Modi: ಐಪಿಎಲ್ 2026ರಲ್ಲಿ ರಾಜಸ್ಥಾನ್ ರಾಯಲ್ಸ್ ಪರ ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್ ಪ್ರದರ್ಶನ ಮಾಡಿ ಎದುರಾಳಿ ಬೌಲರ್ಗಳಿಗೆ ನಡುಕ ಹುಟ್ಟಿಸಿ ಕ್ರಿಕೆಟ್ ದಿಗ್ಗಜರ ಗಮನ ಸೆಳೆದಿದ್ದರು. ಇನ್ನು ಇದೀಗ ಟೀಮ್ ಇಂಡಿಯಾ ಟಿ20 ಕ್ರಿಕೆಟ್ ತಂಡದಲ್ಲಿ ಸ್ಥಾನ ಗಿಟ್ಟಿಸಿಕೊಂಡಿರುವ ಈ 15 ವರ್ಷದ ಬಾಲಕನ ಬಗ್ಗೆ ಐಪಿಎಲ್ ಮಾಜಿ ಕಮಿಷನರ್ ಲಲಿತ್ ಮೋದಿ ಮಹತ್ವದ ಮಾಹಿತಿ ಹಂಚಿಕೊಂಡಿದ್ದಾರೆ.
ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ)ಯು ಮುಂಬರುವ ಟಿ20 ಸರಣಿಗೆ ಯುವ ಸ್ಟಾರ್ ಬ್ಯಾಟರ್ ವೈಭವ್ ಸೂರ್ಯವಂಶಿ ಅವರನ್ನು ಚೊಚ್ಚಲ ಬಾರಿಗೆ ಭಾರತ ತಂಡಕ್ಕೆ ಆಯ್ಕೆ ಮಾಡಿದೆ. ಇದರ ಬೆನ್ನಲ್ಲೇ ಐಪಿಎಲ್ ಸ್ಥಾಪಕ ಮತ್ತು ಮಾಜಿ ಕಮಿಷನರ್ ಲಲಿತ್ ಮೋದಿ ಅವರು ಈ ಯುವ ಆಟಗಾರನನ್ನು ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ. ಅಷ್ಟೇ ಅಲ್ಲದೆ ವೈಭವ್ ಸೂರ್ಯವಂಶಿ ಅವರ ಪ್ರತಿಭೆಯನ್ನು ಜಗತ್ತಿನ ಸಾರ್ವಕಾಲಿಕ ಶ್ರೇಷ್ಠ ಫುಟ್ಬಾಲ್ ಆಟಗಾರ ಲಿಯೋನೆಲ್ ಮೆಸ್ಸಿಗೆ ಹೋಲಿಸಿ ಗಮನ ಸೆಳೆದಿದ್ದಾರೆ.

ಲಲಿತ್ ಮೋದಿ ಹೇಳಿದ್ದೇನು?
2028ರ ಲಾಸ್ ಏಂಜಲೀಸ್ ಒಲಿಂಪಿಕ್ಸ್ ಮತ್ತು ಮುಂದಿನ ಟಿ20 ವಿಶ್ವಕಪ್ ಅನ್ನು ಗಮನದಲ್ಲಿಟ್ಟುಕೊಂಡು ಆಯ್ಕೆಗಾರರು ಕೈಗೊಂಡಿರುವ ಈ ಮಹತ್ವದ ನಿರ್ಧಾರದ ಬಗ್ಗೆ ಲಲಿತ್ ಮೋದಿ ಅವರ ಪ್ರತಿಕ್ರಿಯಿಸಿದ್ದಾರೆ. ವೈಭವ್ ಸೂರ್ಯವಂಶಿ ಭಾರತ ತಂಡಕ್ಕೆ ಆಯ್ಕೆಯಾಗುತ್ತಿದ್ದಂತೆ ಲಲಿತ್ ಮೋದಿ ಅವರು ತಮ್ಮ ಟ್ವಿಟರ್ ಖಾತೆಯಲ್ಲಿ, ಅವರ ಆಟದ ಶೈಲಿ ಮತ್ತು ಅದ್ಭುತ ಪ್ರತಿಭೆಯನ್ನು ಕೊಂಡಾಡಿದ್ದಾರೆ.
'ವೈಭವ್ ಕ್ರಿಕೆಟ್ ಲೋಕದ ಲಿಯೋನೆಲ್ ಮೆಸ್ಸಿ'
'ವೈಭವ್ ಕೇವಲ 13ನೇ ವಯಸ್ಸಿನಲ್ಲಿಯೇ ಪ್ರಥಮ ದರ್ಜೆ ಕ್ರಿಕೆಟ್ಗೆ ಪದಾರ್ಪಣೆ ಮಾಡಿ ಇತಿಹಾಸ ಸೃಷ್ಟಿಸಿದ್ದರು. ಅವರಲ್ಲಿರುವ ಅಸಾಧಾರಣ ಪ್ರತಿಭೆ ಮತ್ತು ಬ್ಯಾಟಿಂಗ್ ಶೈಲಿಯನ್ನು ನೋಡಿದರೆ ಅವರು ಕ್ರಿಕೆಟ್ ಲೋಕದ ಲಿಯೋನೆಲ್ ಮೆಸ್ಸಿ ರೀತಿಯಲ್ಲಿ ಕಾಣಿಸುತ್ತಾರೆ. ಇಷ್ಟು ಚಿಕ್ಕ ವಯಸ್ಸಿನಲ್ಲಿಯೇ ರಾಷ್ಟ್ರೀಯ ತಂಡಕ್ಕೆ ಆಯ್ಕೆಯಾಗಿರುವುದು ಅವರಲ್ಲಿರುವ ವಿಶಿಷ್ಟ ಸಾಮರ್ಥ್ಯಕ್ಕೆ ಹಿಡಿದ ಕೈಗನ್ನಡಿ. ಭಾರತೀಯ ಕ್ರಿಕೆಟ್ನ ಭವಿಷ್ಯದ ದೃಷ್ಟಿಯಿಂದ ಇದೊಂದು ಅದ್ಭುತ ನಿರ್ದಾರ,' ಎಂದು ಲಲಿತ್ ಮೋದಿ ಅವರು ತಮ್ಮ ಟ್ವಿಟರ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ. ಇದು ಎದುರಾಳಿ ತಂಡದ ಬೌಲರ್ಗಳಿಗೆ ಎಚ್ಚರಿಕೆ ನೀಡಿದಂತಿದೆ.
ಟಿ20 ತಂಡದ ನಾಯಕತ್ವದಲ್ಲಿ ದೊಡ್ಡ ಬದಲಾವಣೆ
ರಾಷ್ಟ್ರೀಯ ಆಯ್ಕೆ ಸಮಿತಿಯು ಸದ್ಯ ಟಿ20 ತಂಡದ ನಾಯಕತ್ವದಲ್ಲಿ ದೊಡ್ಡ ಬದಲಾವಣೆ ಮಾಡಿದ್ದು, ಸೂರ್ಯಕುಮಾರ್ ಯಾದವ್ ಅವರ ಬದಲಿಗೆ ಶ್ರೇಯಸ್ ಅಯ್ಯರ್ ಅವರಿಗೆ ನಾಯಕತ್ವದ ಪಟ್ಟ ಕಟ್ಟಿದೆ. ಇದರೊಂದಿಗೆ ಭವಿಷ್ಯದ ಬಲಿಷ್ಠ ತಂಡವನ್ನು ರೂಪಿಸುವ ಮಹತ್ತರ ಯೋಜನೆಯ ಭಾಗವಾಗಿ ವೈಭವ್ ಸೂರ್ಯವಂಶಿ ಅವರಿಗೆ ಮೊದಲ ಬಾರಿಗೆ ಟಿ20 ತಂಡದಲ್ಲಿ ಸ್ಥಾನ ನೀಡಲಾಗಿದೆ. ಕೇವಲ 15ನೇ ವಯಸ್ಸಿನಲ್ಲೇ ದೇಶೀಯ ಕ್ರಿಕೆಟ್ನಲ್ಲಿ ಅಬ್ಬರಿಸಿರುವ ಈ ಬಾಲಕ ಮುಂಬರುವ ಐರ್ಲೆಂಡ್ ಮತ್ತು ಇಂಗ್ಲೆಂಡ್ ಪ್ರವಾಸದ ಸರಣಿಗಳಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ಪದಾರ್ಪಣೆ ಮಾಡಲು ಸಜ್ಜಾಗಿದ್ದಾರೆ.
ಯಾರು ಈ ವೈಭವ್ ಸೂರ್ಯವಂಶಿ?
ಬಿಹಾರ ಮೂಲದ ವೈಭವ್ ಸೂರ್ಯವಂಶಿ ಅತ್ಯಂತ ಚಿಕ್ಕ ವಯಸ್ಸಿನಲ್ಲಿಯೇ ಕ್ರಿಕೆಟ್ ಜಗತ್ತಿನ ಗಮನ ಸೆಳೆದ ಅಪ್ರತಿಮ ಯುವ ಎಡಗೈ ಬ್ಯಾಟರ್ ಆಗಿದ್ದಾರೆ. ಕೇವಲ 12 ವಯಸ್ಸಿನಲ್ಲೇ ಬಿಹಾರ ಪರ ರಣಜಿ ಟ್ರೋಫಿ ಆಡುವ ಮೂಲಕ ಸಚಿನ್ ತೆಂಡೂಲ್ಕರ್ ಮತ್ತು ಯುವರಾಜ್ ಸಿಂಗ್ ಅವರಂತಹ ದಿಗ್ಗಜರ ದಾಖಲೆಯನ್ನು ಮುರಿದರು. ಅತಿ ಕಿರಿಯ ವಯಸ್ಸಿನಲ್ಲಿ ಪ್ರಥಮ ದರ್ಜೆ ಕ್ರಿಕೆಟ್ ಆಡಿದ ಭಾರತದ ಯುವ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ಆಸ್ಟ್ರೇಲಿಯಾ ಅಂಡರ್-19 ತಂಡದ ವಿರುದ್ಧದ ಪಂದ್ಯದಲ್ಲಿ ಕೇವಲ 58 ಎಸೆತಗಳಲ್ಲಿ ಭರ್ಜರಿ ಶತಕ ಸಿಡಿಸುವ ಮೂಲಕ ಅಂತಾರಾಷ್ಟ್ರೀಯ ಮಟ್ಟದಲ್ಲಿ ತಾವೊಬ್ಬ ರನ್ ಮಷೀನ್ ಎಂಬುದನ್ನು ಸಾಬೀತುಪಡಿಸಿದ್ದರು. ಇನ್ನೂ ಐಪಿಎಲ್ನಲ್ಲೂ ರಾಜಸ್ಥಾನ್ ರಾಯಲ್ಸ್ ಪರ ಆಡಿ ಎದುರಾಳಿ ಬೌಲರ್ಗಳ ಮೇಲೆ ಸವಾರಿಯನ್ನು ಕೂಡ ಮಾಡಿದರು.
ಒಟ್ಟಿನಲ್ಲಿ ಹೇಳುವುದಾದರೆ ಲಲಿತ್ ಮೋದಿ ಅವರ ಈ ಹೋಲಿಕೆ ಮತ್ತು ಶ್ಲಾಘನೆಯು ವೈಭವ್ ಸೂರ್ಯವಂಶಿ ಅವರ ಮೇಲಿನ ನಿರೀಕ್ಷೆಯನ್ನು ದುಪ್ಪಟ್ಟು ಮಾಡಿದೆ. ಜೂನ್ ಕೊನೆಯ ವಾರದಲ್ಲಿ ಆರಂಭವಾಗಲಿರುವ ಇಂಗ್ಲೆಂಡ್ ಪ್ರವಾಸದಲ್ಲಿ ಈ ಯುವ ಆಟಗಾರ ಭಾರತದ ಪರ ಹೇಗೆ ಅಬ್ಬರಿಸಲಿದ್ದಾನೆ ಎಂಬುದನ್ನು ನೋಡಲು ಕ್ರಿಕೆಟ್ ಅಭಿಮಾನಿಗಳು ಕಾತುರರಾಗಿದ್ದಾರೆ.












Click it and Unblock the Notifications