ಖೇಲೋ ಇಂಡಿಯಾ ಯೂನಿವರ್ಸಿಟಿ ಗೇಮ್ಸ್ ಪೂರ್ವಭಾವಿ ಸಿದ್ಧತೆ ಪರಿಶೀಲಿಸಿದ ನಾರಾಯಣ ಗೌಡ
ಬೆಂಗಳೂರು, ಅ. 18: ಖೇಲೋ ಇಂಡಿಯಾ ಯುನಿವರ್ಸಿಟಿ ಗೇಮ್ಸ್ 2022ರ ಹಿನ್ನೆಲೆಯಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ. ನಾರಾಯಣಗೌಡ ಅವರು ಬೆಂಗಳೂರಿನ ಕನಕಪುರ ರಸ್ತೆಯ ಜೈನ್ ವಿಶ್ವವಿದ್ಯಾಲಯಕ್ಕೆ ಭೇಟಿ ನೀಡಿ ಪೂರ್ವ ಸಿದ್ಧತೆಗಳನ್ನು ಪರಿಶೀಲನೆ ನಡೆಸಿದರು. ವಿಶ್ವವಿದ್ಯಾಲಯದ ಆವರಣದಲ್ಲಿರುವ ಕ್ರೀಡಾ ಅಂಕಣಗಳಿಗೆ ಸಚಿವ ನಾರಾಯಣ ಗೌಡ ಭೇಟಿ ನೀಡಿದ್ದರು.
2022 ರ ಮಾರ್ಚ್ನಲ್ಲಿ ಖೇಲೋ ಇಂಡಿಯಾದ ಯೂನಿವರ್ಸಿಟಿ ಗೇಮ್ಸ್ ನಡೆಯಲಿದೆ. ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟಿಸಲು ತೀರ್ಮಾನಿಸಲಾಗಿದೆ. ಶೀಘ್ರದಲ್ಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜೊತೆ ತೆರಳಿ ಅಧಿಕೃತವಾಗಿ ಆಹ್ವಾನ ನೀಡಲಾಗುವುದು ಎಂದು ಸಚಿವ ಡಾ. ನಾರಾಯಣ ಗೌಡ ತಿಳಿಸಿದರು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ಉನ್ನತಮಟ್ಟದ ಸಮಿತಿ ರಚಿಸಲಾಗಿದೆ. ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್ ನೇತೃತ್ವದಲ್ಲಿ ಕಾರ್ಯಕಾರಿ ಸಮಿತಿ ರಚಿಸಲಾಗಿದೆ. ಶೀಘ್ರದಲ್ಲೇ ಸಮಿತಿಯ ಸಭೆಗಳನ್ನು ನಡೆಸಿ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ಡಾ. ನಾರಾಯಣಗೌಡ ಇದೇ ವೇಳೆ ತಿಳಿಸಿದ್ದಾರೆ.
ಪ್ರತ್ಯೇಕ ಲೋಗೋ ರಚನೆ, ಥೀಮ್ ಸಾಂಗ್ ರಚಿಸಲು ಸಿದ್ದತೆ ನಡೆದಿದೆ. ಈ ಅಕ್ಟೋಬರ್ ತಿಂಗಳಾಂತ್ಯದಲ್ಲಿ ಲೋಗೋ ಮತ್ತು ಥೀಮ್ ಸಾಂಗ್ ಸಿದ್ದವಾಗಲಿದೆ. ನವೆಂಬರ್ ಎರಡನೇ ವಾರದಲ್ಲಿ ಕೇಂದ್ರ ಕ್ರೀಡಾ ಸಚಿವರ ಉಪಸ್ಥಿತಿಯಲ್ಲಿ ಲೋಗೋ ಮತ್ತು ಥೀಮ್ ಸಾಂಗ್ ಬಿಡಗಡೆ ಮಾಡಲು ಸಿದ್ಧತೆ ಮಾಡಿಕೊಳ್ಳಲಾಗಿದೆ.
20 ಕ್ರೀಡೆಗಳಲ್ಲಿ ಸ್ಪರ್ಧೆ: ಒಟ್ಟು 20 ಕ್ರೀಡೆಗಳು ನಡೆಯಲಿದ್ದು, ಸುಮಾರು 12 ಕ್ರೀಡೆಗಳು ಜೈನ್ ವಿವಿಯಲ್ಲಿ ನಡೆಯಲಿವೆ. ಉಳಿದಂತೆ ಕಂಠೀರವ ಕ್ರೀಡಾಂಗಣ, ಸ್ಪೋರ್ಟ್ ಸ್ಕೂಲ್, ಸಾಯ್ನಲ್ಲಿ ವಿವಿಧ ಕ್ರೀಡೆಗಳು ನಡೆಯಲಿವೆ. ಅದಕ್ಕೆ ಅಗತ್ಯವಿರುವ ಮೂಲ ಸೌಕರ್ಯ ಒದಗಿಸುವ ಬಗ್ಗೆ ಸಚಿವ ಡಾ. ನಾರಾಯಣ ಗೌಡ ಅವರು ಮಾಹಿತಿ ಪಡೆದರು.
ವಿಜಯಪುರದಲ್ಲಿ ಸೈಕ್ಲಿಂಗ್ ನಡೆಸಲು ಸಾಧ್ಯಾಸಾಧ್ಯತೆ ಬಗ್ಗೆ ವರದಿ ನೀಡುವಂತೆ ಸೂಚಿಸಲಾಗಿದೆ. ಸಾಧ್ಯವಾದರೇ ಸೈಕ್ಲಿಂಗ್ ಸ್ಪರ್ಧೆಯನ್ನು ವಿಜಯಪುರದಲ್ಲೇ ಆಯೋಜಿಸಲು ಅಗತ್ಯವಿರುವ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸಚಿವ ನಾರಾಯಣ ಗೌಡ ಇದೇ ಸಂದರ್ಭದಲ್ಲಿ ಸೂಚಿಸಿದರು.
ಪ್ರಧಾನಿ ನರೇಂದ್ರ ಮೋದಿ ಅವರ ಕನಸಿನ ಯೋಜನೆ ಇದಾಗಿದೆ. ಯಶಸ್ವಿಗೊಳಿಸಿದರೆ ಕರ್ನಾಟಕಕ್ಕೆ ಉತ್ತಮ ಹೆಸರು ಬರಲಿದೆ. ಆ ನಿಟ್ಟಿನಲ್ಲಿ ನಾವೆಲ್ಲರೂ ಕೆಲಸ ಮಾಡೋಣ. ಖೇಲೋ ಇಂಡಿಯಾ ಎರಡನೇ ಆವೃತ್ತಿಯನ್ನು ಯಶಸ್ವಿಗೊಳಿಸಲು ಹಣಕಾಸು ಸೇರಿದಂತೆ ರಾಜ್ಯ ಸರ್ಕಾರದಿಂದ ಎಲ್ಲಾ ರೀತಿಯ ನೆರವು ನೀಡಲಾಗುತ್ತದೆ ಎಂದು ಸಚಿವ ನಾರಾಯಣ ಗೌಡ ಅವರು ತಿಳಿಸಿದ್ದಾರೆ.
ಯುವ ಸಬಲೀಕರಣ, ಕ್ರೀಡಾ ಇಲಾಖೆ ಆಯುಕ್ತ ಗೋಪಾಲಕೃಷ್ಣ, ಜೈನ್ ವಿವಿ ಪ ಕುಲಪತಿ ಚೆನ್ರಾಜ್ ರಾಯ್ಚಂದ್ ಸೇರಿದಂತೆ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.