ಏಷ್ಯನ್ ಪ್ಯಾರಾ ಗೇಮ್ಸ್ಗೆ ಆಯ್ಕೆಯಾದ ಕೆಲವೇ ದಿನಗಳಲ್ಲಿ ಪ್ಯಾರಾ ಅಥ್ಲೀಟ್ ಚಿರಾಗ್ ತ್ಯಾಗಿ ಶವವಾಗಿ ಪತ್ತೆ
ದೇಶವೇ ಹೆಮ್ಮೆಪಡುವಂತಹ ಸಾಧನೆ ಮಾಡಿದ ಕೆಲವೇ ದಿನಗಳಲ್ಲಿ ತಾಯ್ನಾಡಿನಲ್ಲೇ ರಾಷ್ಟ್ರೀಯ ಮಟ್ಟದ ಪ್ಯಾರಾ ಅಥ್ಲೀಟ್ ಒಬ್ಬರನ್ನು ಅತ್ಯಂತ ಕ್ರೂರವಾಗಿ ಶೂಟ್ ಮಾಡಿ ಕೊಲೆ ಮಾಡಲಾಗಿರುವ ಆಘಾತಕಾರಿ ಘಟನೆಯೊಂದು ಉತ್ತರ ಪ್ರದೇಶದ ಗಾಜಿಯಾಬಾದ್ನಲ್ಲಿ ನಡೆದಿದೆ. ಜಪಾನ್ನಲ್ಲಿ ನಡೆಯಲಿರುವ ಪ್ರತಿಷ್ಠಿತ ಏಷ್ಯನ್ ಪ್ಯಾರಾ ಗೇಮ್ಸ್ಗೆ (Asian Para Games) ಅರ್ಹತೆ ಪಡೆದ ಕೆಲವೇ ದಿನಗಳಲ್ಲಿ ಈ ದುರಂತ ಸಂಭವಿಸಿದ್ದು, ಕ್ರೀಡಾಲೋಕವನ್ನು ಸ್ತಬ್ಧಗೊಳಿಸಿದೆ.
ಬೆಂಗಳೂರಿನಲ್ಲಿ ಚಿನ್ನ ಗೆದ್ದು ಇತಿಹಾಸ ಸೃಷ್ಟಿಸಿದ್ದ ಚಿರಾಗ್
ಕೊಲೆಯಾದ ದುರ್ದೈವಿಯನ್ನು ಉತ್ತರ ಪ್ರದೇಶದ ಮುರಾದ್ನಗರದ ನಿವಾಸಿ, ರಾಷ್ಟ್ರೀಯ ಪ್ಯಾರಾ ಕ್ರೀಡಾಪಟು ಚಿರಾಗ್ ತ್ಯಾಗಿ ಎಂದು ಗುರುತಿಸಲಾಗಿದೆ. ಪ್ಯಾರಾ ಅಥ್ಲೀಟ್ ಚಿರಾಗ್ ತ್ಯಾಗಿ ಇತ್ತೀಚೆಗಷ್ಟೇ ಬೆಂಗಳೂರಿನಲ್ಲಿ ನಡೆದ ರಾಷ್ಟ್ರೀಯ ಚಾಂಪಿಯನ್ಶಿಪ್ನ 400 ಮೀಟರ್ ಓಟದ ಸ್ಪರ್ಧೆಯಲ್ಲಿ ಚಿನ್ನದ ಪದಕ ಮುಡಿಗೇರಿಸಿಕೊಂಡಿದ್ದರು. ಈ ಅದ್ಭುತ ಪ್ರದರ್ಶನದ ಆಧಾರದ ಮೇಲೆ, ಈ ವರ್ಷದ ಕೊನೆಯಲ್ಲಿ ಜಪಾನ್ನಲ್ಲಿ ನಡೆಯಲಿರುವ ಏಷ್ಯನ್ ಪ್ಯಾರಾ ಗೇಮ್ಸ್ಗೆ ಭಾರತವನ್ನು ಪ್ರತಿನಿಧಿಸಲು ಅವರು ಅರ್ಹತೆ ಪಡೆದುಕೊಂಡಿದ್ದರು. ಈ ಸಾಧನೆಯ ಖುಷಿಯಲ್ಲಿದ್ದಾಗಲೇ ಶನಿವಾರ ಗಾಜಿಯಾಬಾದ್ನ ಸಾಯಿ ಉಪವನ್ ಎಂಬ ನಿರ್ಜನ ಪ್ರದೇಶದಲ್ಲಿ ಚಿರಾಗ್ ಅವರ ಮೃತದೇಹ ಪತ್ತೆಯಾಗಿದೆ.

ಸಹ ಕ್ರೀಡಾಪಟುವಿನಿಂದಲೇ ಕೊಲೆ ಶಂಕೆ
ಪೊಲೀಸರ ಪ್ರಾಥಮಿಕ ತನಿಖೆಯ ಪ್ರಕಾರ, ಚಿರಾಗ್ ತ್ಯಾಗಿ ಅವರು ಶನಿವಾರ ದೆಹಲಿಯ ಹಾಸ್ಟೆಲ್ನಿಂದ ತಮ್ಮ ಸ್ವಗ್ರಾಮಕ್ಕೆ ಹೋಗುವುದಾಗಿ ಹೇಳಿ ಹೊರಟಿದ್ದರು. ಆದರೆ ಸಂಜೆ 3 ಗಂಟೆಯ ಸುಮಾರಿಗೆ ಸಾಯಿ ಉಪವನ್ ಪ್ರದೇಶದಲ್ಲಿ ಅವರು ಗುಂಡೇಟಿನಿಂದ ರಕ್ತದ ಮಡುವಿನಲ್ಲಿ ಬಿದ್ದಿರುವ ಮಾಹಿತಿ ಪೊಲೀಸರಿಗೆ ಲಭ್ಯವಾಗಿದೆ. ಘಟನಾ ಸ್ಥಳದ ಸುತ್ತಮುತ್ತಲಿನ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ ಪೊಲೀಸರಿಗೆ ಮಹತ್ವದ ಸುಳಿವು ಸಿಕ್ಕಿದೆ. ಚಿರಾಗ್ ಜೊತೆ ಕ್ರೀಡಾಕೂಟಗಳಲ್ಲಿ ಭಾಗವಹಿಸುತ್ತಿದ್ದ ಅವರದ್ದೇ ಸಹವರ್ತಿ, ಮತ್ತೊಬ್ಬ ಪ್ಯಾರಾ ಅಥ್ಲೀಟ್ ಸಿಸಿಟಿವಿ ದೃಶ್ಯದಲ್ಲಿ ಶಂಕಾಸ್ಪದವಾಗಿ ಓಡಾಡುತ್ತಿರುವುದು ಪತ್ತೆಯಾಗಿದೆ.
ಸಿಸಿಟಿವಿ ಆಧಾರದ ಮೇಲೆ ತಕ್ಷಣವೇ ಕಾರ್ಯಪ್ರವೃತ್ತರಾದ ಪೊಲೀಸರು, ಆರೋಪಿ ಪ್ಯಾರಾ ಅಥ್ಲೀಟ್ನನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. ಕ್ರೀಡಾ ರಂಗದ ವೈಷಮ್ಯ ಅಥವಾ ವೈಯಕ್ತಿಕ ದ್ವೇಷ ಈ ಕೊಲೆಗೆ ಕಾರಣವೇ ಎಂಬ ಆಯಾಮದಲ್ಲಿ ತನಿಖೆ ಮುಂದುವರಿದಿದೆ. ಭಾರತಕ್ಕೆ ಕೀರ್ತಿ ತರಬೇಕಾಗಿದ್ದ ಯುವ ಪ್ರತಿಭೆಯೊಬ್ಬ ತಾಯ್ನಾಡಿನಲ್ಲೇ ಹಂತಕರ ಗುಂಡಿಗೆ ಬಲಿಯಾಗಿರುವುದು ಕ್ರೀಡಾ ಅಭಿಮಾನಿಗಳಲ್ಲಿ ತೀವ್ರ ಆಕ್ರೋಶ ಮತ್ತು ಬೇಸರ ಮೂಡಿಸಿದೆ. ಸದ್ಯ ಚಿರಾಗ್ ತ್ಯಾಗಿ ಅವರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಪೊಲೀಸರು ಅವರ ಕುಟುಂಬಸ್ಥರಿಗೆ ಮಾಹಿತಿ ನೀಡಿದ್ದಾರೆ. ಕುಟುಂಬದವರ ಹೇಳಿಕೆಯನ್ನು ದಾಖಲಿಸಿಕೊಂಡು, ಕೊಲೆಯ ಹಿಂದಿನ ಅಸಲಿ ಕಾರಣ ಹಾಗೂ ಉದ್ದೇಶವನ್ನು ಶೀಘ್ರದಲ್ಲೇ ಬಹಿರಂಗಪಡಿಸುವುದಾಗಿ ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಘಟನೆ ವಿವರ ಹಂಚಿಕೊಂಡ ಡಿಸಿಪಿ
ಚಿರಾಗ್ ತ್ಯಾಗಿ ಅವರ ಭೀಕರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿರಿಯ ಪೊಲೀಸ್ ಅಧಿಕಾರಿ (DCP) ಧವಳ್ ಜೈಸ್ವಾಲ್ ಅವರು ಮಹತ್ವದ ಅಧಿಕೃತ ಮಾಹಿತಿ ನೀಡಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ ಕ್ಷಣದಿಂದ ಹಿಡಿದು ಸದ್ಯ ಆರೋಪಿಯನ್ನು ಕಸ್ಟಡಿಗೆ ಪಡೆದಿರುವ ವಿವರಗಳನ್ನು ಅವರು ಹಂಚಿಕೊಂಡಿದ್ದಾರೆ. ಶನಿವಾರ ಮಧ್ಯಾಹ್ನ ಸುಮಾರು 3 ಗಂಟೆಯ ಸುಮಾರಿಗೆ ಕೊತ್ವಾಲಿ ಪೊಲೀಸ್ ಠಾಣೆ ವ್ಯಾಪ್ತಿಯ ಸಾಯಿ ಕುಂಜ್ ಪ್ರದೇಶದಲ್ಲಿ ವ್ಯಕ್ತಿಯೊಬ್ಬರ ಮೃತದೇಹ ಬಿದ್ದಿರುವ ಬಗ್ಗೆ ನಮಗೆ ಮಾಹಿತಿ ಲಭ್ಯವಾಯಿತು. ಮಾಹಿತಿ ಸಿಕ್ಕ ತಕ್ಷಣವೇ ಪೊಲೀಸ್ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದರು. ಮೃತದೇಹವನ್ನು ಮುಂದಿನ ಕಾನೂನು ಪ್ರಕ್ರಿಯೆಗಳಿಗಾಗಿ ತಕ್ಷಣವೇ ಆಸ್ಪತ್ರೆಗೆ ರವಾನಿಸಲಾಯಿತು. ನಂತರ ಮೃತರನ್ನು ಪ್ಯಾರಾ ಅಥ್ಲೀಟ್ ಚಿರಾಗ್ ತ್ಯಾಗಿ ಎಂದು ಗುರುತಿಸಲಾಗಿದೆ ಎಂದಿದ್ದಾರೆ.
ಮೇಲ್ನೋಟಕ್ಕೆ ಇದು ಸ್ಪಷ್ಟವಾಗಿ ಕೊಲೆ ಪ್ರಕರಣ ಎಂದು ಕಂಡುಬರುತ್ತಿದೆ. ಘಟನೆ ನಡೆದ ಸುತ್ತಮುತ್ತಲಿನ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದ ನಂತರ, ಅದರ ಆಧಾರದ ಮೇಲೆ ಪೊಲೀಸರು ಒಬ್ಬ ಶಂಕಿತ ವ್ಯಕ್ತಿಯನ್ನು ವಶಕ್ಕೆ ಪಡೆದಿದ್ದಾರೆ. ಸದ್ಯ ಆತನನ್ನು ರಹಸ್ಯ ಸ್ಥಳದಲ್ಲಿ ಇರಿಸಲಾಗಿದ್ದು, ತೀವ್ರ ವಿಚಾರಣೆಗೆ ಒಳಪಡಿಸಲಾಗಿದೆ ಎಂದು ಡಿಸಿಪಿ ತಿಳಿಸಿದ್ದಾರೆ.
ಕೊಲೆಯ ಹಿಂದಿನ ಅಸಲಿ ಕಾರಣವನ್ನು ಪತ್ತೆಹಚ್ಚಲು ಪೊಲೀಸರು ತನಿಖೆಯನ್ನು ತೀವ್ರಗೊಳಿಸಿದ್ದಾರೆ. ಮೃತ ಕ್ರೀಡಾಪಟು ಚಿರಾಗ್ ತ್ಯಾಗಿ ಅವರ ಕುಟುಂಬದ ಸದಸ್ಯರೊಂದಿಗೆ ಮಾತುಕತೆ ನಡೆಸಲಾಗುತ್ತಿದೆ. ಅವರು ನೀಡುವ ಲಿಖಿತ ದೂರಿನ ಆಧಾರದ ಮೇಲೆ ಪ್ರಕರಣವನ್ನು ದಾಖಲಿಸಿಕೊಳ್ಳಲಾಗುತ್ತಿದ್ದು, ಅದರಂತೆ ಮುಂದಿನ ಕಠಿಣ ಕಾನೂನು ಕ್ರಮಗಳನ್ನು ಜರುಗಿಸಲಾಗುವುದು ಎಂದಿದ್ದಾರೆ.













Click it and Unblock the Notifications