ದಸರಾ ಕ್ರೀಡಾಕೂಟವನ್ನು ಉದ್ಘಾಟಿಸಲಿರುವ ಒಲಿಂಪಿಕ್ಸ್ ಪದಕ ವಿಜೇತ ಕುಸ್ತಿಪಟು ಸಾಕ್ಷಿ ಮಲಿಕ್
ಮೈಸೂರು, ಸೆಪ್ಟೆಂಬರ್ 29: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಹಮ್ಮಿಕೊಂಡಿರುವ ರಾಜ್ಯಮಟ್ಟದ ದಸರಾ ಕ್ರೀಡಾಕೂಟದ ಜ್ಯೋತಿಯನ್ನು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ತಾಯಿ ಚಾಮುಂಡೇಶ್ವರಿ ಸನ್ನಿಧಿಯಲ್ಲಿ ಬೆಳಗಿಸಿದರು.
ಈ ವೇಳೆ ಮಾತನಾಡಿದ ಸಚಿವರು, ತಾಯಿ ಚಾಮುಂಡೇಶ್ವರಿ ದೇವಿಗೆ ಪೂಜೆ ಸಲ್ಲಿಸಿ ಕ್ರೀಡಾಜ್ಯೋತಿ ಬೆಳಗಿಸಲಾಗಿದೆ. ಒಲಿಂಪಿಕ್ ಪದಕ ವಿಜೇತ ಕುಸ್ತಿಪಟು ಸಾಕ್ಷಿ ಮಲ್ಲಿಕ್, ಕ್ರೀಡಾ ಸಚಿವರಾದ ನಾರಾಯಣಗೌಡ ಗುರುವಾರ ಸಂಜೆ ದಸರಾ ಕ್ರೀಡಾಕೂಟ ಉದ್ಘಾಟಿಸಲಿದ್ದಾರೆ. ರಾಜ್ಯದ ನಾನಾ ಜಿಲ್ಲೆಗಳಿಂದ ಸುಮಾರು 4,500 ಕ್ರೀಡಾಪಟುಗಳು ಆಗಮಿಸಿದ್ದಾರೆ. ಕ್ರೀಡಾಕೂಟದಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ ಸೂಕ್ತ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಹೇಳಿದರು.
ನಾಲ್ಕು ದಿನಗಳಲ್ಲಿ ವಿವಿಧ ಕ್ರೀಡಾಂಗಣಗಳಲ್ಲಿ 27 ಸ್ಪರ್ಧೆಗಳು ನಡೆಯಲಿವೆ. ಅಥ್ಲೆಟಿಕ್ಸ್, ಆರ್ಚರಿ, ಬ್ಯಾಡ್ಮಿಂಟನ್, ಬಾಲ್ ಬ್ಯಾಡ್ಮಿಂಟನ್, ಬ್ಯಾಸ್ಕೆಟ್ಬಾಲ್, ಬಾಕ್ಸಿಂಗ್, ಸೈಕ್ಲಿಂಗ್, ಫೆನ್ಸಿಂಗ್, ಫುಟ್ಬಾಲ್, ಜಿಮ್ನಾಸ್ಟಿಕ್ಸ್, ಹ್ಯಾಂಡ್ಬಾಲ್, ಹಾಕಿ, ಜೂಡೋ, ಕಬಡ್ಡಿ, ಖೋಖೋ, ಟೆನಿಸ್, ನೆಟ್ಬಾಲ್, ಶೂಟಿಂಗ್, ಈಜು, ಟೇಬಲ್ ಟೆನಿಸ್, ಟೆಕ್ವಾಂಡೊ, ಥ್ರೋಬಾಲ್, ವಾಲಿಬಾಲ್, ವೇಟ್ಲಿಫ್ಟಿಂಗ್, ಕುಸ್ತಿ, ವುಶು, ಯೋಗ ಸ್ಪರ್ಧೆಗಳನ್ನು ಆಯೋಜಿಸಲಾಗುತ್ತಿದೆ. ಇದೇ ಮೊದಲ ಬಾರಿಗೆ ಶೂಟಿಂಗ್ ಮತ್ತು ಈಜು ಸ್ಪರ್ಧೆ ನಡೆಯುತ್ತಿದೆ.

ವೈಯಕ್ತಿಕ ವಿಭಾಗದಲ್ಲಿ ಸ್ಫರ್ಧೆಯಲ್ಲಿ ಪ್ರಥಮ ಬಹುಮಾನವಾಗಿ 8 ಸಾವಿರ, 2ನೇ ಸ್ಥಾನ ಪಡೆದವರಿಗೆ 5 ಸಾವಿರ ಹಾಗೂ 3ನೇ ಬಹುಮಾನವಾಗಿ 2,500 ನೀಡಲಾಗುತ್ತಿದೆ. ಗುಂಪು ಕ್ರೀಡೆಯಲ್ಲಿ ವಿಜೇತರಾದವರ ನಗದು ಪುರಸ್ಕಾರವನ್ನು 4 ಸಾವಿರಕ್ಕೆ ಹೆಚ್ಚಿಸಲಾಗಿದೆ.ಇನ್ನೂ ಕ್ರೀಡಾಕೂಟದಲ್ಲಿ ನೂತನ ದಾಖಲೆ ಬರೆದರೆ ನೀಡಲಾಗುತ್ತಿದ್ದ ನಗದು ಪುರಸ್ಕಾರವನ್ನು 10 ಸಾವಿರರಿಂದ 20 ಸಾವಿರಕ್ಕೆ ಹೆಚ್ಚಿಸಲಾಗಿದೆ.
ದಸರಾ ಪಾರಂಪರಿಕ ಸೈಕಲ್ ಸವಾರಿಗೆ ಚಾಲನೆ
ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರಯುಕ್ತ ನಗರದ ಟೌನ್ ಹಾಲ್ ಎದುರು ಪುರಾತತ್ವ, ಸಂಗ್ರಹಾಲಯ ಮತ್ತು ಪರಂಪರೆ ಇಲಾಖೆ ವತಿಯಿಂದ ಆಯೋಜಿಸಿದ್ದ ಪಾರಂಪರಿಕ ಸೈಕಲ್ ಸವಾರಿ(ಟ್ರಿನ್-ಟ್ರಿನ್) ಕಾರ್ಯಕ್ರಮಕ್ಕೆ ಹಸಿರು ನಿಶಾನೆ ತೋರಿಸುವ ಮೂಲಕ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ. ಸೋಮಶೇಖರ್ ಅವರು ಚಾಲನೆ ನೀಡಿದರು.
ಸೈಕಲ್ ಸವಾರಿಗೆ ಚಾಲನೆ ನೀಡಿ ಮಾತನಾಡಿದ ಅವರು, ನಾಡಹಬ್ಬ ದಸರಾ ಅಂಗವಾಗಿ ಪುರಾತತ್ವ, ಸಂಗ್ರಹಾಲಯ ಮತ್ತು ಪರಂಪರೆ ಇಲಾಖೆಯವರು ಮೈಸೂರಿನಲ್ಲಿರುವ ಪಾರಂಪರಿಕ ಕಟ್ಟಡಗಳ ವೀಕ್ಷಣೆಗಾಗಿ ಸೈಕಲ್ ಸವಾರಿಯನ್ನು ಏರ್ಪಡಿಸಿದ್ದಾರೆ. ಈ ಕಾರ್ಯಕ್ರಮದಲ್ಲಿ ಯುವಕರು, ಹಿರಿಯರು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದಾರೆ. ಸೈಕಲ್ ಸವಾರಿಗೆ ಸೂಕ್ತ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದರು.

ಸೈಕಲ್ ಸವಾರಿಯಲ್ಲಿ 60 ವರ್ಷದ ಒಳಗಿನ ಸಾರ್ವಜನಿಕರು ಹಾಗೂ 15 ವರ್ಷ ಮೇಲ್ಪಟ್ಟ ಶಾಲಾ-ಕಾಲೇಜು ವಿದ್ಯಾರ್ಥಿಗಳು ಮೈಸೂರು, ಮಂಡ್ಯ, ಕೊಡಗು, ಬೆಂಗಳೂರು ಸೇರಿದಂತೆ ಇತರೆ ಜಿಲ್ಲೆಗಳಿಂದ ಸುಮಾರು ನೂರಕ್ಕೂ ಹೆಚ್ಚು ಮಂದಿ ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಶಾಸಕ ಎಲ್.ನಾಗೇಂದ್ರ ಸೇರಿದಂತೆ ಪುರಾತತ್ವ, ಸಂಗ್ರಹಾಲಯ ಮತ್ತು ಪರಂಪರೆ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.












Click it and Unblock the Notifications