ಗ್ರಾಮೀಣ ಭಾಗದ ಕ್ರೀಡಾ ಪ್ರತಿಭೆಗಳಿಗೆ ಸಿಹಿ ಸುದ್ದಿ ಕೊಟ್ಟ ರಾಜ್ಯ ಕ್ರೀಡಾ ಇಲಾಖೆ!
ಬೆಂಗಳೂರು, ಸೆ.09: ತಳಮಟ್ಟದಿಂದಲೇ ಕ್ರೀಡಾಪಟುಗಳನ್ನು ತಯಾರು ಮಾಡಲು ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ತೆಗೆದುಕೊಂಡಿದೆ. ರಾಜ್ಯದಲ್ಲಿ 1,666 ದೈಹಿಕ ಶಿಕ್ಷಕರಿಗೆ ಗುಣಮಟ್ಟದ ವೈಜ್ಞಾನಿಕ ತರಬೇತಿ ನೀಡಲು ಯೋಜನೆ ಸಿದ್ಧಪಡಿಸಲಾಗಿದ್ದು, ಶೀಘ್ರದಲ್ಲೇ ತರಬೇತಿ ಆರಂಭಿಸಲು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ. ನಾರಾಯಣಗೌಡ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳಲಾಗಿದೆ.
ಕ್ರೀಡಾಪಟುಗಳಿಗೆ ಉತ್ತೇಜನ ನೀಡಲು ಸರ್ಕಾರ ಈಗಾಗಲೆ ವಿವಿಧ ಯೋಜನೆ ಜಾರಿಗೆ ತರಲಾಗಿದೆ. ಅದಕ್ಕಿಂತ ಮುಖ್ಯವಾಗಿ ತಳಮಟ್ಟದಲ್ಲೇ ಕ್ರೀಡಾಪಟುಗಳನ್ನು ಗುರುತಿಸಿ ಸೂಕ್ತ ತರಬೇತಿ ನೀಡಲು ದೈಹಿಕ ಶಿಕ್ಷರಿಗೇ ಕ್ರೀಡಾ ಇಲಾಖೆಯಿಂದ ವೈಜ್ಞಾನಿಕ ತರಬೇತಿ ನೀಡಲು ತೀರ್ಮಾನಿಸಲಾಗಿದೆ.
ಜೊತೆಗೆ ಗ್ರಾಮೀಣ ಭಾಗದ ಕ್ರೀಡಾ ಪಟುಗಳಲ್ಲಿನ ಪ್ರತಿಭೆಯನ್ನು ಹೊರ ತರಲು ರಾಜ್ಯ ಕ್ರೀಡಾ ಇಲಾಖೆ ಮಹತ್ವದ ತೀರ್ಮಾನ ತೆಗೆದುಕೊಂಡಿದೆ. ಅದರಿಂದ ಮುಂದಿನ ಪ್ಯಾರಿಸ್ ಒಲಿಂಪಿಕ್ಸ್ ಸಿದ್ಧತೆಗೆ ರಾಜ್ಯ ಕ್ರೀಡಾ ಇಲಾಖೆ ಭರ್ಜರಿ ಸಿದ್ಧತೆ ನಡೆಸಿದಂತಾಗಿದೆ.

ಗ್ರಾಮೀಣ ಭಾಗದ ಕ್ರೀಡಾ ಪ್ರತಿಭೆಗಳಿಗೆ ಅನುಕೂಲ!
ವಿಕಾಸಸೌಧದಲ್ಲಿ ಇಂದು ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಈ ಬಗ್ಗೆ ಚರ್ಚಿಸಿ ತೀರ್ಮಾನ ಮಾಡಲಾಗಿದೆ. ಕ್ರೀಡಾ ವಿಜ್ಞಾನ ಕೇಂದ್ರದ ಮೂಲಕ ಗ್ರಾಮೀಣ ಮಟ್ಟದ ಕ್ರೀಡಾ ಪ್ರತಿಭೆಗಳನ್ನು ಗುರುತಿಸಲಾಗುತ್ತಿದೆ. ಅಂಥವರಿಗೆ ತರಬೇತಿ ಪಡೆದ 1,666 ಪರಿಣಿತ ದೈಹಿಕ ಶಿಕ್ಷಕರಿಂದ ತರಬೇತಿ ನೀಡಲಾಗುವುದು. ಶಿಕ್ಷಣ ಇಲಾಖೆಯಿಂದ ಈಗಾಗಲೆ ದೈಹಿಕ ಶಿಕ್ಷಕರ ಪಟ್ಟಿ ಪಡೆಯಲಾಗಿದ್ದು, ಈ ತಿಂಗಳ ಕೊನೆಗೆ ಕ್ರೀಡಾ ಇಲಾಖೆಯಿಂದ ತರಬೇತಿ ನೀಡಲು ಆರಂಭಿಸಲಾಗುವುದು.

ಖೇಲೊ ಇಂಡಿಯಾ; ಸಚಿವರು ಗರಂ!
ಇದೇ ವೇಳೆ ಖೇಲೊ ಇಂಡಿಯಾ ಕೇಂದ್ರದ ಬಗ್ಗೆ ಚರ್ಚಿಸಿದ ಸಚಿವರು, ಅಧಿಕಾರಿಗಳ ಕಾರ್ಯವೈಖರಿಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ರಾಜ್ಯದಲ್ಲಿ 31 ಖೇಲೊ ಇಂಡಿಯಾ ಕೇಂದ್ರಗಳನ್ನು ಸ್ಥಾಪಿಸಲು ಕೇಂದ್ರ ಸರ್ಕಾರ ಈಗಾಗಲೆ ಅನುದಾನ ನೀಡಿದೆ. ಪ್ರತಿ ಕೇಂದ್ರದ ಮೂಲಕ ಸೌಕರ್ಯಕ್ಕೆ 5 ಲಕ್ಷ ರೂ. ಹಾಗೂ ತರಬೇತಿಗೆ 5 ಲಕ್ಷ ರೂ. ನೀಡಲಾಗಿದೆ. ಆದರೆ ಈ ವರೆಗೆ ಯಾವುದೇ ಪ್ರಕ್ರಿಯೆ ಆರಂಭವಾಗಿಲ್ಲ. ಕೇವಲ ಘೋಷಣೆಗೆ ಯೋಜನೆ ಸೀಮಿತವಾದರೆ ಹೇಗೆ? ತಕ್ಷಣ ಕೆಲಸ ಆರಂಭಿಸದಿದ್ದರೆ ಸುಮ್ಮನಿರವುದಿಲ್ಲ. ಕಠಿಣ ಕ್ರಮ ತೆಗೆದುಕೊಳ್ಳುತ್ತೇನೆ ಎಂದು ಸಚಿವ ಡಾ. ನಾರಾಯಣ ಗೌಡ ಅವರು ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ.

ವೈಮಾನಿಕ ತರಬೇತಿ ಶಾಲೆ ಪುನಾರಂಭ
ಸರ್ಕಾರಿ ವೈಮಾನಿಕ ತರಬೇತಿ ಶಾಲೆ ಆರಂಭ ಆಗಲೇಬೇಕು. ಇನ್ನಷ್ಟು ಸಮಯ ನೀಡಲು ಸಾಧ್ಯವಿಲ್ಲ. ಅಧಿವೇಶನ ಮುಗಿದ ಮಾರನೆ ದಿನ ವೈಮಾನಿಕ ತರಬೇತಿ ಶಾಲೆ ಪುನಾರಂಭ ಆಗಬೇಕು. ಮುಖ್ಯಮಂತ್ರಿಗಳನ್ನು ಆಹ್ವಾನಿಸಿ, ಉದ್ಘಾಟಿಸಲಾಗುವುದು ಎಂದು ಸಚಿವ ಡಾ. ನಾರಾಯಣಗೌಡ ತಿಳಿಸಿದರು. 45 ಹಳೆ ವಿದ್ಯಾರ್ಥಿಗಳಿದ್ದು, ಈಗಾಗಲೆ 35 ವಿದ್ಯಾರ್ಥಿಗಳು ತರಬೇತಿ ಪಡೆಯಲು ಬರುವುದಾಗಿ ತಿಳಿಸಿದ್ದಾರೆ. ಹಿಂದಿನ ಶುಲ್ಕ ದರದಲ್ಲೇ ತರಬೇತಿ ನೀಡಲಾಗುವುದು. ಹೊಸದಾಗಿ ಪ್ರವೇಶ ಪಡೆಯುವವರಿಗೆ ಪರಿಷ್ಕೃತ ದರ ನಿಗದಿ ಮಾಡಲು ಸಭೆಯಲ್ಲಿ ತೀರ್ಮಾನಿಸಲಾಗಿದೆ.

ಬೆಂಗಳೂರಿನಲ್ಲಿ ಖೇಲೊ ಇಂಡಿಯಾ ಗೇಮ್
ಮುಂದಿನ ಮಾರ್ಚ್ 5 ರಿಂದ ಖೇಲೊ ಇಂಡಿಯಾ ಯಿನಿವರ್ಸಿಟಿ ಗೇಮ್ ಬೆಂಗಳೂರಿನಲ್ಲಿ ಆರಂಭವಾಗಲಿದೆ. ಕ್ರೀಡೆಯ ಆಯೋಜನೆಗೆ ರೂ. 25 ಕೋಟಿ ಅನುದಾನ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಮೂಲ ಸೌಕರ್ಯಕ್ಕಾಗಿ ರೂ. 18 ಅನುದಾನ ಕೋರಿ ಪ್ರಸ್ತಾವನೆ ಸಲ್ಲಿಸಲಾಗಿದೆ. ರಾಜ್ಯ ಸರ್ಕಾರಕ್ಕೂ ರೂ. 22 ಕೋಟಿ ಅನುದಾನ ಕೋರಿ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಅರ್ಥಿಕ ಇಲಾಖೆ ಪರಿಶೀಲನೆಯಲ್ಲಿದೆ ಎಂದು ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು. ಅಲ್ಲದೆ ಅತಿ ಶೀಘ್ರದಲ್ಲಿ ಖೇಲೊ ಇಂಡಿಯಾ ಯುನಿವರ್ಸಿಟಿ ಗೇಮ್ಸ್ ನ ಲೋಗೋ, ಥೀಮ್ ಸಾಂಗ್, ಜೆರ್ಸಿ ಲಾಂಚ್ ಆಗಬೇಕು ಎಂದು ಸಚಿವ ನಾರಾಯಣಗೌಡ ಅವರು ತಿಳಿಸಿದ್ದಾರೆ.
ಸಭೆಯಲ್ಲಿ ಅಪರಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ಕ್ರೀಡಾ ಇಲಾಖೆ ಆಯುಕ್ತ ವೆಂಕಟೇಶ್, ಇಲಾಖೆ ಅಧಿಕಾರಿಗಳು ಉಪಸ್ಥಿರಿದ್ದರು.












Click it and Unblock the Notifications