India vs Srilanka: ಟಿ20 ತಂಡಕ್ಕೆ ಸೂರ್ಯ ಸಾರಥಿ; ಶ್ರೀಲಂಕಾ ವಿರುದ್ಧ ಅಬ್ಬರಿಸಲು ರೋಹಿತ್-ಕೊಹ್ಲಿ ಜೊತೆ ಸಜ್ಜಾದ ಕನ್ನಡಿಗ
ಜುಲೈ 27ರಿಂದ ಶುರುವಾಗಲಿರುವ ಶ್ರೀಲಂಕಾ ವಿರುದ್ಧದ ಸರಣಿಗೆ ಭಾರತ ತಂಡವನ್ನು ಪ್ರಕಟಿಸಲಾಗಿದೆ. ಶ್ರೀಲಂಕಾ ವಿರುದ್ಧದ ಟಿ20 ಸರಣಿಯಲ್ಲಿ ಸೂರ್ಯಕುಮಾರ್ ಯಾದವ್ ಭಾರತ ತಂಡದ ನಾಯಕತ್ವ ವಹಿಸಿಕೊಂಡಿದ್ದು, ಏಕದಿನ ತಂಡಕ್ಕೆ ರೋಹಿತ್ ಮತ್ತು ಕೊಹ್ಲಿ ಲಭ್ಯರಾಗಿದ್ದಾರೆ.
ಮುಖ್ಯ ಕೋಚ್ ಆಗಿ ಗೌತಮ್ ಗಂಭೀರ್ ಅವರಿಗೆ ಇದು ಮೊದಲ ಸರಣಿಯಾಗಿದ್ದು, ಅವರ ಮನವಿ ಮೇರೆಗೆ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಶ್ರೀಲಂಕಾ ವಿರುದ್ಧ ಏಕದಿನ ಸರಣಿಗೆ ತಾವು ಲಭ್ಯ ಎಂದು ಹೇಳಿದ್ದು, ಯುವ ಆಟಗಾರರ ಜೊತೆ ಅಬ್ಬರಿಸಲು ಸಜ್ಜಾಗಿದ್ದಾರೆ.

ಶ್ರೇಯಸ್ ಅಯ್ಯರ್, ರಿಷಭ್ ಪಂತ್, ಶಿವಂ ದುಬೆ, ಖಲೀಲ್ ಅಹ್ಮದ್ ಮತ್ತು ವಾಷಿಂಗ್ಟನ್ ಸುಂದರ್ ಅವರು ಏಕದಿನ ತಂಡಕ್ಕೆ ವಾಪಸಾಗಿದ್ದಾರೆ. ಹರ್ಷಿತ್ ರಾಣಾ ಮತ್ತು ರಿಯಾನ್ ಪರಾಗ್ ಮೊದಲ ಬಾರಿಗೆ ಭಾರತ ತಂಡದ ಪರ ಆಡಲು ಅವಕಾಶ ಗಿಟ್ಟಿಸಿಕೊಂಡಿದ್ದಾರೆ.
ಟಿ20 ತಂಡಕ್ಕೆ ಸೂರ್ಯ ಸಾರಥಿ
ಟಿ20 ಸ್ಪೆಷಲ್ ಬ್ಯಾಟರ್ ಸೂರ್ಯಕುಮಾರ್ ಯಾದವ್ ಶ್ರೀಲಂಕಾ ವಿರುದ್ಧದ ಸರಣಿಯಲ್ಲಿ ಭಾರತ ತಂಡಕ್ಕೆ ನಾಯಕರಾಗಿದ್ದಾರೆ. ಟಿ20 ವಿಶ್ವಕಪ್ನಲ್ಲಿ ಭಾರತ ತಂಡದ ಉಪನಾಯಕರಾಗಿದ್ದ ಹಾರ್ದಿಕ್ ಪಾಂಡ್ಯಗೆ ಶಾಕ್ ನೀಡಿದ್ದು, ಅವರು ತಂಡಕ್ಕೆ ಆಯ್ಕೆಯಾದರೂ ನಾಯಕತ್ವ ನೀಡಿಲ್ಲ. ಜಿಂಬಾಬ್ವೆ ವಿರುದ್ಧದ ಸರಣಿಯಲ್ಲಿ ಭಾರತ ತಂಡದ ನಾಯಕನಾಗಿ ಸರಣಿ ಗೆದ್ದ ಶುಭಮನ್ ಗಿಲ್ಗೆ ಉಪನಾಯಕನ ಜವಾಬ್ದಾರಿ ವಹಿಸಲಾಗಿದೆ.
ಭಾರತ ವಿರುದ್ಧ ಜಿಂಬಾಬ್ವೆ ಸರಣಿಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ರುತುರಾಜ್ ಗಾಯಕ್ವಾಡ್ ಮತ್ತು ಅಭಿಷೇಕ್ ಶರ್ಮಾ ಶ್ರೀಲಂಕಾ ವಿರುದ್ಧದ ಸರಣಿಯಲ್ಲಿ ಅವಕಾಶ ಪಡೆದಿಲ್ಲ. ಆದರೆ ರಿಯಾನ್ ಪರಾಗ್, ಸರಣಿಯಲ್ಲಿ ವಿಫಲವಾಗಿದ್ದರೂ, ಏಕದಿನ ಮತ್ತು ಟಿ20 ತಂಡಗಳಲ್ಲಿ ಸ್ಥಾನ ಪಡೆದಿದ್ದಾರೆ.
ಜಸ್ಪ್ರೀತ್ ಬುಮ್ರಾಗೆ ವಿಶ್ರಾಂತಿ
ಶ್ರೀಲಂಕಾ ವಿರುದ್ಧದ ಸರಣಿಯಲ್ಲಿ ಜಸ್ಪ್ರೀತ್ ಬುಮ್ರಾ ಅವರಿಗೆ ವಿಶ್ರಾಂತಿ ನೀಡಲಾಗಿದೆ. ಗಾಯಕ್ಕೆ ತುತ್ತಾಗುವ ಭಯ ಇರುವ ಕಾರಣ ಅವರನ್ನು ತಂಡದಿಂದ ಹೊರಗಿಡಲಾಗಿದೆ. ಟೆಸ್ಟ್ ಸರಣಿ ಮತ್ತು ಚಾಂಪಿಯನ್ಸ್ ಟ್ರೋಫಿಯಲ್ಲಿ ಬುಮ್ರಾ ಅಗತ್ಯ ತಂಡಕ್ಕಿದ್ದು, ಅವರ ಮೇಲೆ ಒತ್ತಡ ಹಾಕದಿರಲು ಆಯ್ಕೆದಾರರು ನಿರ್ಧರಿಸಿದ್ದಾರೆ. ಕುಲದೀಪ್ ಯಾದವ್ ಅವರಿಗೆ ಟಿ20 ಸರಣಿಯಲ್ಲಿ ವಿಶ್ರಾಂತಿ ನೀಡಿದ್ದು, ಏಕದಿನ ಸರಣಿಯನ್ನು ಆಡಲಿದ್ದಾರೆ.
ಭಾರತ ಟಿ20 ತಂಡ : ಸೂರ್ಯಕುಮಾರ್ ಯಾದವ್ (ನಾಯಕ), ಹುಬ್ಮನ್ ಗಿಲ್ (ಉಪನಾಯಕ), ಯಶಸ್ವಿ ಜೈಸ್ವಾಲ್, ರಿಂಕು ಸಿಂಗ್, ರಿಯಾನ್ ಪರಾಗ್, ರಿಷಭ್ ಪಂತ್ (ವಿಕೆಟ್ ಕೀಪರ್), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ರವಿ ಬಿಷ್ಣೋಯ್, ಅರ್ಷದೀಪ್ ಸಿಂಗ್, ಖಲೀಲ್ ಅಹ್ಮದ್, ಮೊಹಮ್ಮದ್ ಸಿರಾಜ್.
ಏಕದಿನ ತಂಡ: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್ (ಉಪನಾಯಕ), ವಿರಾಟ್ ಕೊಹ್ಲಿ, ಕೆಎಲ್ ರಾಹುಲ್ (ವಿಕೆಟ್ ಕೀಪರ್), ರಿಷಬ್ ಪಂತ್ (ವಿಕೆಟ್ ಕೀಪರ್), ಶ್ರೇಯಸ್ ಅಯ್ಯರ್, ಶಿವಂ ದುಬೆ, ಕುಲದೀಪ್ ಯಾದವ್, ಮೊಹಮ್ಮದ್. ಸಿರಾಜ್, ವಾಷಿಂಗ್ಟನ್ ಸುಂದರ್, ಅರ್ಷದೀಪ್ ಸಿಂಗ್, ರಿಯಾನ್ ಪರಾಗ್, ಅಕ್ಷರ್ ಪಟೇಲ್, ಖಲೀಲ್ ಅಹ್ಮದ್, ಹರ್ಷಿತ್ ರಾಣಾ.












Click it and Unblock the Notifications