India vs England: ಭಾರತ ಟೆಸ್ಟ್ ತಂಡದಲ್ಲಿ ಮೂವರು ಕನ್ನಡಿಗರಿಗೆ ಅವಕಾಶ!
ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಗೆ ಭಾರತ ತಂಡವನ್ನು ಬಿಸಿಸಿಐ ಶೀಘ್ರದಲ್ಲೇ ಘೋಷಣೆ ಮಾಡುವ ಸಾಧ್ಯತೆ ಇದೆ. ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಅವರು ಟೆಸ್ಟ್ ಕ್ರಿಕೆಟ್ಗೆ ನಿವೃತ್ತಿ ಘೋಷಣೆ ಮಾಡಿರುವ ಬೆನ್ನಲ್ಲೇ ಅವರ ಸ್ಥಾನ ಯಾರು ತುಂಬಲಿದ್ದಾರೆ ಎನ್ನುವ ಪ್ರಶ್ನೆ ಕೂಡ ಇದೆ. ದೇಶೀಯ ಕ್ರಿಕೆಟ್ ಮತ್ತು ಐಪಿಎಲ್ನಲ್ಲಿ ಉತ್ತಮ ಪ್ರದರ್ಶನ ನೀಡಿರುವ ಹಲವು ಆಟಗಾರರು ಮತ್ತೊಮ್ಮೆ ಭಾರತ ತಂಡದಲ್ಲಿ ಅವಕಾಶ ಪಡೆಯುವ ವಿಶ್ವಾಸದಲ್ಲಿದ್ದಾರೆ.
ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಗೆ ಕರ್ನಾಟಕದ ಮೂವರು ಆಟಗಾರರು ಆಯ್ಕೆಯಾಗುವುದು ಬಹುತೇಕ ಖಚಿತವಾಗಿದೆ. ರಣಜಿ ಟ್ರೋಫಿಯಲ್ಲಿ ಅಮೋಘ ಪ್ರದರ್ಶನ ನೀಡಿರುವ ಕರುಣ್ ನಾಯರ್ ಭಾರತ ಎ ತಂಡಕ್ಕೆ ಆಯ್ಕೆಯಾಗಿದ್ದು ಮುಖ್ಯ ತಂಡದಲ್ಲಿ ಕೂಡ ಅವಕಾಶ ಪಡೆಯುವ ಸಾಧ್ಯತೆ ಇದೆ. ಇದರ ಜೊತೆ ಕೆಎಲ್ ರಾಹುಲ್ ತಂಡದ ನಾಯಕತ್ವದ ಸ್ಪರ್ಧೆಯಲ್ಲಿದ್ದಾರೆ. ಶುಭಮನ್ ಗಿಲ್ ನಾಯಕರಾದರೆ ಕೆಎಲ್ ರಾಹುಲ್ ಅವರಿಗೆ ಉಪನಾಯಕನ ಜವಾಬ್ದಾರಿ ಸಿಗಬಹುದು ಎಂದು ನಿರೀಕ್ಷೆ ಮಾಡಲಾಗಿದೆ.

ತಂಡ ಸೇರ್ತಾರ ಮಾರಕ ಬೌಲರ್?
ಮತ್ತೊಬ್ಬ ಕರ್ನಾಟಕದ ಆಟಗಾರ ವೇಗದ ಬೌಲರ್ ಪ್ರಸಿದ್ಧ್ ಕೃಷ್ಣ ಐಪಿಎಲ್ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡುತ್ತಿದ್ದಾರೆ. ಈ ಬಾರಿ ಐಪಿಎಲ್ನಲ್ಲಿ ಈವರೆಗೆ ಆಡಿರುವ 13 ಪಂದ್ಯಗಳಲ್ಲಿ 19.67 ಸರಾಸರಿಯಲ್ಲಿ 21 ವಿಕೆಟ್ ಪಡೆಯುವ ಮೂಲಕ ಪರ್ಪಲ್ ಕ್ಯಾಪ್ ರೇಸ್ನಲ್ಲಿ ಮುಂಚೂಣಿಯಲ್ಲಿದ್ದಾರೆ. 8.10 ಎಕಾನಮಿ ಕೂಡ ಹೊಂದಿದ್ದು ಗುಜರಾತ್ ಟೈಟಾನ್ಸ್ನ ಪ್ರಮುಖ ವಿಕೆಟ್ ಟೇಕರ್ ಆಗಿದ್ದಾರೆ.
ಪ್ರಸಿದ್ಧ್ ಕೃಷ್ಣ ಅವರ ಮಾರಕ ಬೌಲಿಂಗ್ ಬಿಸಿಸಿಐ ಆಯ್ಕೆದಾರರ ಗಮನ ಸೆಳೆದಿದೆ. ಅವರ ಎತ್ತರ ಕೂಡ ಅವರಿಗೆ ವರದಾನವಾಗಿದ್ದು ಇಂಗ್ಲೆಂಡ್ನಲ್ಲಿ ಅವರು ಮತ್ತಷ್ಟು ಮಾರಕವಾಗುವ ಸಾಧ್ಯತೆ ಇದೆ. ಇದನ್ನು ಆಯ್ಕೆದಾರರು ಕೂಡ ಗಮನಿಸಿದ್ದು ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಪ್ರಸಿದ್ಧ್ ಕೃಷ್ಣ ಆಯ್ಕೆಯಾಗುವುದು ಬಹುತೇಕ ಖಚಿತವಾಗಿದೆ.
ಐಪಿಎಲ್ ಮುಗಿದ ಬಳಿಕ ಭಾರತ ಟೆಸ್ಟ್ ತಂಡ ಇಂಗ್ಲೆಂಡ್ಗೆ ಪ್ರಯಾಣ ಬೆಳೆಸಲಿದೆ. ಜೂನ್ 13ರಂದು ಭಾರತ ತಂಡ 4 ದಿನಗಳ ಅಭ್ಯಾಸ ಪಂದ್ಯ ಆಡಲಿದೆ. ಮೊದಲ ಟೆಸ್ಟ್ ಪಂದ್ಯ ಜೂನ್ 20 ರಂದು ಆರಂಭವಾಗಲಿದೆ. ಈ ಸರಣಿಯೊಂದಿಗೆ ಭಾರತದ 2025-2027ರ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಪ್ರಯಾಣ ಆರಂಭವಾಗಲಿದೆ.












Click it and Unblock the Notifications