ಅಫ್ಘಾನಿಸ್ತಾನ ವಿರುದ್ಧದ ಏಕದಿನ ಸರಣಿಯಿಂದ ಟೀಮ್ ಇಂಡಿಯಾ ಸ್ಟಾರ್ ವಿರಾಟ್ ಕೊಹ್ಲಿ ಔಟ್.. ಯುವ ಆಟಗಾರನಿಗೆ ಸ್ಥಾನ
Team India: ಅಫ್ಘಾನಿಸ್ತಾನ ವಿರುದ್ಧದ ಮುಂಬರುವ ಏಕದಿನ ಕ್ರಿಕೆಟ್ ಸರಣಿಯಿಂದ ಭಾರತ ತಂಡದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಅವರು ಸಂಪೂರ್ಣವಾಗಿ ಹೊರಗುಳಿದಿದ್ದಾರೆ. ಇವರ ಸ್ಥಾನಕ್ಕೆ ಯಶಸ್ವಿ ಜೈಸ್ವಾಲ್ ಅವರನ್ನು ಬಿಸಿಸಿಐ ಆಯ್ಕೆ ಮಾಡಿದೆ. ಈ ಕುರಿತ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಇತ್ತೀಚೆಗಷ್ಟೇ ಮುಕ್ತಾಯಗೊಂಡ 2026ರ ಐಪಿಎಲ್ ಫೈನಲ್ ಪಂದ್ಯದ ವೇಳೆ ಗಾಯಗೊಂಡಿದ್ದ ಟೀಮ್ ಇಂಡಿಯಾದ ರನ್ ಮಷಿನ್ ವಿರಾಟ್ ಕೊಹ್ಲಿ ಅಫ್ಘಾನಿಸ್ತಾನ ವಿರುದ್ಧದ ಮುಂಬರುವ ಏಕದಿನ ಸರಣಿಯಿಂದ ಸಂಪೂರ್ಣವಾಗಿ ಹೊರಗುಳಿದಿದ್ದಾರೆ. ಕೊಹ್ಲಿ ಅವರ ಗಾಯದ ಗಂಭೀರತೆಯನ್ನು ಪರಿಶೀಲಿಸಿರುವ ಬಿಸಿಸಿಐ ಅವರ ಸ್ಥಾನಕ್ಕೆ ಯುವ ಎಡಗೈ ಬ್ಯಾಟರ್ ಯಶಸ್ವಿ ಜೈಸ್ವಾಲ್ ಅವರನ್ನು ಬದಲಿ ಆಟಗಾರನನ್ನಾಗಿ ಅಧಿಕೃತವಾಗಿ ಘೋಷಿಸಿದೆ.

ಐಪಿಎಲ್ ವೇಳೆ ಕೊಹ್ಲಿಗೆ ಗಾಯ
ಐಪಿಎಲ್ನ ಮುಕ್ತಾಯದ ಹಂತದಲ್ಲಿ ವಿರಾಟ್ ಕೊಹ್ಲಿ ತೀವ್ರ ಸ್ನಾಯು ಸೆಳೆತದಿಂದ ಬಳಲುತ್ತಿದ್ದರು. ಇತ್ತೀಚೆಗೆ ನಡೆಸಲಾದ ವೈದ್ಯಕೀಯ ಸ್ಕ್ಯಾನಿಂಗ್ನಲ್ಲಿ ಕೊಹ್ಲಿ ಅವರ ಮೊಣಕಾಲಿನ ಹಿಂಭಾಗಕ್ಕೆ ಪೆಟ್ಟು ಬಿದ್ದಿರುವುದು ಪತ್ತೆಯಾಗಿದೆ ಎಂದು ಬಿಸಿಸಿಐ ಮೂಲಗಳು ಖಚಿತಪಡಿಸಿವೆ. ಅವರು ಸರಣಿಗೆ ಮುನ್ನ ಸಂಪೂರ್ಣ ಫಿಟ್ನೆಸ್ ಕಾಯ್ದುಕೊಳ್ಳುವುದು ಅನುಮಾನ ಎನ್ನಲಾಗಿದೆ.
ರನ್ ಮಳೆ ಸುರಿಸಿದ ಕಿಂಗ್
37 ವರ್ಷದ ವಿರಾಟ್ ಕೊಹ್ಲಿ ಫಿಟ್ನೆಸ್ ಕಾಯ್ದುಕೊಳ್ಳುವುದರಲ್ಲಿ ಹೆಸರಾದವರು. ಗಾಯದ ಕಾರಣಕ್ಕೆ ಅವರು ಸರಣಿಯೊಂದನ್ನು ತಪ್ಪಿಸಿಕೊಳ್ಳುತ್ತಿರುವುದು ಅತ್ಯಂತ ಅಪರೂಪದ ಘಟನೆಯಾಗಿದೆ. ಐಪಿಎಲ್ 2026ರಲ್ಲಿ ಉತ್ತಮ ಫಾರ್ಮ್ನಲ್ಲಿದ್ದ ಕೊಹ್ಲಿ ಒಂದು ಶತಕ ಹಾಗೂ 5 ಅರ್ಧಶತಕಗಳ ನೆರವಿನಿಂದ 675 ರನ್ ಚಚ್ಚಿದ್ದರು. ಅದರಲ್ಲೂ ಗುಜರಾತ್ ಟೈಟಾನ್ಸ್ ವಿರುದ್ಧದ ಫೈನಲ್ ಪಂದ್ಯದಲ್ಲಿ ಅಜೇಯ ಅರ್ಧಶತಕ ಸಿಡಿಸಿ ತಂಡದ ಗೆಲುವಿಗೆ ಪ್ರಮುಖ ಪಾತ್ರವಹಿಸಿದ್ದರು.
ರೋಹಿತ್ ಶರ್ಮಾ ಆಡುವುದು ಅನುಮಾನ
ಈ ಏಕದಿನ ಸರಣಿಗೆ ಭಾರತ ತಂಡಕ್ಕೆ ಮತ್ತೊಂದು ಹಿನ್ನಡೆಯಾಗುವ ಸಾಧ್ಯತೆಯಿದೆ. ಐಪಿಎಲ್ ವೇಳೆ ಗಾಯಕ್ಕೆ ಒಳಗಾಗಿದ್ದ ಮತ್ತೊಬ್ಬ ಸ್ಟಾರ್ ಬ್ಯಾಟರ್ ರೋಹಿತ್ ಶರ್ಮಾ ಇನ್ನೂ ಸಂಪೂರ್ಣ ಗುಣಮುಖರಾಗಿಲ್ಲ. ಅವರ ಫಿಟ್ನೆಸ್ ಆಧರಿಸಿ ಮಾತ್ರ ಅಂತಿಮ ನಿರ್ಧಾರ ಕೈಗೊಳ್ಳಲಾಗುತ್ತದೆ. ಇದರೊಂದಿಗೆ ಸ್ಟಾರ್ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಅವರ ಲಭ್ಯತೆಯ ಮೇಲೂ ಸದ್ಯಕ್ಕೆ ಅನಿಶ್ಚಿತತೆಯ ನೆರಳು ಆವರಿಸಿದೆ ಎನ್ನಲಾಗುತ್ತಿದೆ.
ಹಿರಿಯ ಆಟಗಾರರ ಗಾಯದ ಸಮಸ್ಯೆಯ ಹಿನ್ನೆಲೆಯಲ್ಲಿ ಬಿಸಿಸಿಐ ಯುವ ಬ್ಯಾಟರ್ ಶುಭಮನ್ ಗಿಲ್ ಅವರಿಗೆ ನಾಯಕತ್ವದ ಜವಾಬ್ದಾರಿ ವಹಿಸಿದೆ. ಮಧ್ಯಮ ಕ್ರಮಾಂಕದ ಭರವಸೆಯ ಆಟಗಾರ ಶ್ರೇಯಸ್ ಅಯ್ಯರ್ ಉಪನಾಯಕರಾಗಿ ಕಾರ್ಯನಿರ್ವಹಿಸಲಿದ್ದಾರೆ. ಪ್ರಸ್ತುತ ಭಾರತ ತಂಡವು ಅಫ್ಘಾನಿಸ್ತಾನ ವಿರುದ್ಧ ಒಂದು ಟೆಸ್ಟ್ ಪಂದ್ಯವನ್ನು ಆಡುತ್ತಿದ್ದು, ನಂತರ ಮೂರು ಪಂದ್ಯಗಳ ಏಕದಿನ ಸರಣಿ ಆರಂಭ ಆಗಲಿದೆ. ಜೈಸ್ವಾಲ್, ಇಶಾನ್ ಕಿಶನ್ ಹಾಗೂ ಪ್ರಿನ್ಸ್ ಯಾದವ್ ಅವರಂತಹ ಯುವ ಆಟಗಾರರಿಗೆ ತಮ್ಮ ಸಾಮರ್ಥ್ಯ ನಿರೂಪಿಸಲು ಇದೊಂದು ಉತ್ತಮ ಅವಕಾಶವಾಗಿದೆ.
ಭಾರತ ತಂಡ: ಶುಭಮನ್ ಗಿಲ್ (ನಾಯಕ), ಶ್ರೇಯಸ್ ಅಯ್ಯರ್ (ಉಪನಾಯಕ), ರೋಹಿತ್ ಶರ್ಮಾ, ಯಶಸ್ವಿ ಜೈಸ್ವಾಲ್, ಕೆಎಲ್ ರಾಹುಲ್ (ವಿಕೆ ಕೀಪರ್), ಇಶಾನ್ ಕಿಶನ್, ವಾಷಿಂಗ್ಟನ್ ಸುಂದರ್, ಕುಲದೀಪ್ ಯಾದವ್, ಹಾರ್ದಿಕ್ ಪಾಂಡ್ಯ, ಪ್ರಿನ್ಸ್ ಯಾದವ್, ಪ್ರಸಿದ್ಧ್ ಕೃಷ್ಣ, ಹರ್ಷ್ ದುಬೆ, ನಿತೀಶ್ ಕುಮಾರ್ ರೆಡ್ಡಿ, ಅರ್ಷದೀಪ್ ಸಿಂಗ್, ಗುರ್ನೂರ್ ಬ್ರಾರ್.
ಸೂರ್ಯಕುಮಾರ್ ಯಾದವ್ ಔಟ್
ಮತ್ತೊಂದೆಡೆ ಮಂಬರುವ ಟಿ20 ಕ್ರಿಕೆಟ್ನಿಂದ ಸೂರ್ಯಕುಮಾರ್ ಯಾದವ್ ಅವರನ್ನು ಕೈಬಿಡಲಾಗಿದೆ. ಅವರ ನಾಯಕತ್ವ ಸ್ಥಾನವನ್ನು ಶ್ರೇಯಸ್ ಅಯ್ಯರ್ಗೆ ನೀಡಲಾಗಿದ್ದು, ಉಪನಾಯಕನ ಪಟ್ಟವನ್ನು ತಿಲಕ್ ವರ್ಮಾಗೆ ಕಟ್ಟಲಾಗಿದೆ. ವಿಶೇಷ ಅಂದ್ರೆ ಈ ಟೂರ್ನಿಗೆ ಬಾಲಕ ವೈಭವ್ ಸೂರ್ಯವಂಶಿ ಅವರನ್ನು ಆಯ್ಕೆ ಮಾಡಿರುವುದು.












Click it and Unblock the Notifications