Vijay Hazare Trophy: ಕರ್ನಾಟಕ ತಂಡಕ್ಕೆ ಕೆಎಲ್ ರಾಹುಲ್ ವಾಪಸ್?
ಬಾರ್ಡರ್ ಗವಾಸ್ಕರ್ ಟ್ರೋಫಿ ಸರಣಿ ಮುಕ್ತಾಯವಾಗಿದ್ದು 10 ವರ್ಷಗಳ ಬಳಿಕ ಭಾರತ ಬಿಜಿಟಿ ಸರಣಿಯಲ್ಲಿ ಸೋಲು ಕಂಡಿದೆ. ಭಾರತ ತಂಡದ ಪ್ರದರ್ಶನದ ಬಗ್ಗೆ ಟೀಕೆಗಳು ವ್ಯಕ್ತವಾಗುತ್ತಿದ್ದು, ಸ್ಟಾರ್ ಆಟಗಾರರು ಕೂಡ ದೇಶೀಯ ಟೂರ್ನಿಗಳಲ್ಲಿ ಆಡುವುದು ಕಡ್ಡಾಯ ಮಾಡಬೇಕು ಎನ್ನಲಾಗುತ್ತಿದೆ. ಈ ಬೆನ್ನಲ್ಲೇ ಕನ್ನಡಿಗ ಕೆಎಲ್ ರಾಹುಲ್ ಕರ್ನಾಟಕ ತಂಡಕ್ಕೆ ಬರುವ ಸೂಚನೆ ಸಿಕ್ಕಿದೆ.
ಸದ್ಯ ನಡೆಯುತ್ತಿರುವ ವಿಜಯ್ ಹಜಾರೆ ಟ್ರೋಫಿ ಪಂದ್ಯಾವಳಿಯಲ್ಲಿ ಕರ್ನಾಟಕ ಲೀಗ್ ಹಂತದಲ್ಲಿ ಭರ್ಜರಿ ಪ್ರದರ್ಶನ ನೀಡಿದ್ದು ಕ್ವಾರ್ಟರ್ ಫೈನಲ್ಗೆ ಅರ್ಹತೆ ಪಡೆದುಕೊಂಡಿದೆ. ಜನವರಿ 11ರಂದು ಕ್ವಾರ್ಟರ್ ಫೈನಲ್ ಪಂದ್ಯ ನಡೆಯಲಿದ್ದು ಕರ್ನಾಟಕ ಬರೋಡಾ ತಂಡವನ್ನು ಎದುರಿಸಲಿದೆ.

ಆಸ್ಟ್ರೇಲಿಯಾದಿಂದ ಭಾರತ ತಂಡ ಶೀಘ್ರದಲ್ಲೇ ವಾಪಸಾಗಲಿದ್ದು ಕೆಎಲ್ ರಾಹುಲ್, ಕರ್ನಾಟಕ ತಂಡಕ್ಕಾಗಿ ಆಡುತ್ತಾರೆ ಎನ್ನಲಾಗಿದೆ. ವಿಜಯ್ ಹಜಾರೆ ಟ್ರೋಫಿ ಕ್ವಾರ್ಟರ್ ಫೈನಲ್ ವೇಳೆಗೆ ಕರ್ನಾಟಕ ತಂಡವನ್ನು ಸೇರಿಕೊಳ್ಳುವ ಸಾಧ್ಯತೆ ಇದೆ. ಪ್ರಶಸ್ತಿ ಗೆಲ್ಲುವ ವಿಶ್ವಾಸದಲ್ಲಿರುವ ಕರ್ನಾಟಕ ತಂಡಕ್ಕೆ ಬ್ಯಾಟಿಂಗ್ಗೆ ಹೆಚ್ಚಿನ ಬಲ ಬರಲಿದೆ.
ವಿಶ್ರಾಂತಿ ಬೇಕೆಂದ ಕೆಎಲ್ ರಾಹುಲ್
ಕೆಲವು ವರದಿಗಳ ಪ್ರಕಾರ ಕೆಎಲ್ ರಾಹುಲ್ ವಿಶ್ರಾಂತಿ ಬೇಕೆಂದು ಕೇಳಿದ್ದು, ವಿಜಯ್ ಹಜಾರೆ ಟ್ರೋಫಿ ಕ್ವಾರ್ಟರ್ ಫೈನಲ್ನಲ್ಲಿ ಆಡುವ ಸಾಧ್ಯತೆ ಕಡಿಮೆ ಇದೆ. ಐದೂ ಟೆಸ್ಟ್ ಪಂದ್ಯಗಳಲ್ಲಿ ಆಡಿರುವ ಕೆಎಲ್ ರಾಹುಲ್ ದಣಿದಿದ್ದಾರೆ. ಈಗ ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಯವರೆಗೆ ವಿಶ್ರಾಂತಿ ಬೇಕೆಂದು ಕೇಳಿದ್ದಾರೆ.
ಕೆಎಲ್ ರಾಹುಲ್ ವಿಶ್ರಾಂತಿ ಪಡೆದರೂ ಆಸ್ಟ್ರೇಲಿಯಾ ಪ್ರವಾಸದಲ್ಲಿ ಭಾರತ ತಂಡದ ಭಾಗವಾಗಿದ್ದ ವೇಗಿ ಪ್ರಸಿದ್ಧ್ ಕೃಷ್ಣ ಮತ್ತು ಎಡಗೈ ಬ್ಯಾಟರ್ ದೇವದತ್ ಪಡಿಕ್ಕಲ್ ಕರ್ನಾಟಕ ತಂಡವನ್ನು ಸೇರಿಕೊಳ್ಳಲಿದ್ದಾರೆ. ಇವರಿಬ್ಬರೂ ಕ್ವಾರ್ಟರ್ ಫೈನಲ್ನಲ್ಲಿ ಕಣಕ್ಕಿಳಿಯುವ ಸಾಧ್ಯತೆ ಇದೆ.
ದೇವದತ್ ಪಡಿಕ್ಕಲ್ ಬಾರ್ಡರ್ ಗವಾಸ್ಕರ್ ಟ್ರೋಫಿ ಸರಣಿಯ ಮೊದಲನೇ ಪಂದ್ಯದಲ್ಲಿ ಆಡಿದ್ದರು. ಉಳಿದ ನಾಲ್ಕು ಪಂದ್ಯಗಳಲ್ಲಿ ಅವರಿಗೆ ತಂಡದಲ್ಲಿ ಅವಕಾಶ ಸಿಕ್ಕಿರಲಿಲ್ಲ. ಪ್ರಸಿದ್ಧ್ ಕೃಷ್ಣ ಸಿಡ್ನಿಯಲ್ಲಿ ನಡೆದ ಕೊನೆಯ ಟೆಸ್ಟ್ ಪಂದ್ಯದಲ್ಲಿ ಆಡಲು ಅವಕಾಶ ಪಡೆದಿದ್ದರು.
ಕರ್ನಾಟಕದ ಪ್ರಮುಖ ವೇಗದ ಬೌಲರ್ ವಿಜಯ್ ಕುಮಾರ್ ವೈಶಾಖ್ ಗಾಯದ ಕಾರಣದಿಂದ ಕ್ವಾರ್ಟರ್ ಫೈನಲ್ ಪಂದ್ಯದಿಂದ ಹೊರಗುಳಿಯಲಿದ್ದಾರೆ. ಶನಿವಾರ ನಡೆಯಲಿರುವ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಕರ್ನಾಟಕ ಬರೋಡಾವನ್ನು ಎದುರಿಸಲಿದೆ.
ನಾಯಕ ಮಯಾಂಕ್ ಅಗರ್ವಾಲ್ ಉತ್ತಮ ಫಾರ್ಮ್ನಲ್ಲಿದ್ದು ಈಗಾಗಲೇ ಪಂದ್ಯಾವಳಿಯಲ್ಲಿ ನಾಲ್ಕು ಶತಕ ಬಾರಿಸಿದ್ದಾರೆ. ಕರ್ನಾಟಕ ಬ್ಯಾಟಿಂಗ್ ಮತ್ತು ಬೌಲಿಂಗ್ನಲ್ಲಿ ಉತ್ತಮ ಪ್ರದರ್ಶನ ನೀಡುತ್ತಿದ್ದು ಕ್ವಾರ್ಟರ್ ಫೈನಲ್ನಲ್ಲಿ ಬರೋಡಾ ವಿರುದ್ದ ಗೆಲುವು ಸಾಧಿಸುವ ವಿಶ್ವಾಸದಲ್ಲಿದೆ.
ಕರ್ನಾಟಕ ತಂಡ
ಮಯಾಂಕ್ ಅಗರ್ವಾಲ್ (ನಾಯಕ), ದೇವದತ್ ಪಡಿಕ್ಕಲ್, ನಿಕಿನ್ ಜೋಸ್, ಕೆವಿ ಅನೀಶ್, ಆರ್ ಸ್ಮರಣ್, ಕೆಎಲ್ ಶ್ರೀಜಿತ್, ಅಭಿನವ್ ಮನೋಹರ್, ಶ್ರೇಯಸ್ ಗೋಪಾಲ್, ಹಾರ್ದಿಕ್ ರಾಜ್, ಪ್ರಸಿದ್ಧ್ ಕೃಷ್ಣ, ವಾಸುಕಿ ಕೌಶಿಕ್, ವಿದ್ಯಾಧರ್ ಪಾಟೀಲ್, ಅಭಿಲಾಶ್ ಶೆಟ್ಟಿ, ಪ್ರವೀಣ್ ದುಬೆ, ಲವ್ನಿತ್ ಸಿಸೋಡಿಯಾ, ಯಶೋವರ್ಧನ್ ಪರಂತಾಪ್.












Click it and Unblock the Notifications