ಜಮ್ಮು ಕಾಶ್ಮೀರ ಮೇಘ ಸ್ಫೋಟ: 4 ಸಾವು, 40ಕ್ಕೂ ಹೆಚ್ಚು ಮಂದಿ ನಾಪತ್ತೆ
ಶ್ರೀನಗರ, ಜುಲೈ 28: ಜಮ್ಮು ಮತ್ತು ಕಾಶ್ಮೀರ ಕಣಿವೆಯಲ್ಲಿ ಮೇಘಸ್ಫೋಟ ಸಂಭವಿಸಿದ್ದು, 4 ಮಂದಿ ಮೃತಪಟ್ಟಿದ್ದು 40ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ.
ಕಳೆದ ಒಂದು ವಾರದಿಂದ ಜಮ್ಮುವಿನ ಸುತ್ತ ಮುತ್ತಲ ಪ್ರದೇಶಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ಮುಂದಿನ ಒಂದು ವಾರಗಳ ಇದೇ ಪರಿಸ್ಥಿತಿ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಪ್ರಮುಖವಾಗಿ ನದಿ ಪಾತ್ರದ ಗ್ರಾಮಗಳು ಮತ್ತು ಪ್ರದೇಶಗಳಲ್ಲಿ ವಾಸಿಸುತ್ತಿರುವ ಜನರು ಅಪಾಯದಲ್ಲಿದ್ದು ಅವರನ್ನು ತುರ್ತಾಗಿ ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ.
ಜುಲೈ 31ರವರೆಗೆ ಈ ರಾಜ್ಯಗಳಲ್ಲಿ ಅಧಿಕ ಮಳೆ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ
ಜಮ್ಮು ಮತ್ತು ಕಾಶ್ಮೀರದ ಉಸ್ತುವಾರಿ ಮತ್ತು ಕೇಂದ್ರ ಸಚಿವ ಡಾ.ಜಿತೇಂದ್ರ ಸಿಂಗ್ ಅವರು ಕಣಿವೆ ರಾಜ್ಯಕ್ಕೆ ಅಗತ್ಯವಾದ ಎಲ್ಲ ನೆರವು ನೀಡಲು ಕೇಂದ್ರ ಸರ್ಕಾರ ಸಿದ್ಧವಿದೆ ಎಂದು ಹೇಳಿದ್ದಾರೆ.
ಅಷ್ಟೇ ಅಲ್ಲದೆ, ಅಗತ್ಯಬಿದ್ದರೆ ಸೇನಾ ಹೆಲಿಕಾಪ್ಟರ್ ಗಳನ್ನೂ ಕೂಡ ಕಾರ್ಯಾಚರಣೆಗೆ ಇಳಿಸಲಾಗುತ್ತದೆ. ಈ ಕುರಿತಂತೆ ಡಿಎಂ ಅಶೋಕ್ ಶರ್ಮಾ ಅವರೊಂದಿಗೆ ತಾವು ಮಾತನಾಡಿದ್ದು, ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದೇನೆ ಎಂದು ಹೇಳಿದ್ದಾರೆ.
ವಿಷಯ ತಿಳಿಯುತ್ತಿದ್ದಂತೆಯೇ ರಾಷ್ಟ್ರೀಯ ವಿಪತ್ತು ನಿರ್ವಹಣಾ ದಳ (NDRF) ಸಿಬ್ಬಂದಿಗಳು ಗ್ರಾಮಕ್ಕೆ ದೌಡಾಯಿಸಿದ್ದು, ರಕ್ಷಣಾ ಕಾರ್ಯಾಚರಣೆ ಕೈಗೊಂಡಿದ್ದಾರೆ. ಈ ವೇಳೆ 4 ಮೃತದೇಹಳು ಪತ್ತೆಯಾಗಿದ್ದು, ಇನ್ನೂ 40ಕ್ಕೂ ಹೆಚ್ಚು ಗ್ರಾಮಸ್ಥರು ನಾಪತ್ತೆಯಾಗಿದ್ದಾರೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.
ಜಮ್ಮು ಮತ್ತು ಕಾಶ್ಮೀರದ ಕಿಶ್ತ್ ವಾರ್ ಜಿಲ್ಲೆಯ ಡಚ್ಚನ್ ಟೆಹ್ಸೀಲ್ ಪ್ರಾಂತ್ಯದ ಹೊಂಝಾರ್ ಎಂಬ ಕುಗ್ರಾಮದಲ್ಲಿ ಮೇಘಸ್ಪೋಟ ಸಂಭವಿಸಿದ್ದು, ಪ್ರವಾಹದಲ್ಲಿ ಸಾಕಷ್ಟು ಮನೆಗಳು ಕೊಚ್ಚಿಹೋಗಿವೆ ಎಂದು ತಿಳಿದುಬಂದಿದೆ.
ನಾಪತ್ತೆಯಾಗಿರುವವರ ರಕ್ಷಣೆಗೆ ಕ್ರಮ ಕೈಗೊಳ್ಳಲಾಗಿದ್ದು, ಸುತ್ತಮುತ್ತಲಿನ ಗ್ರಾಮಗಳಲ್ಲಿ ಮತ್ತು ಇಳಿಜಾರು ಪ್ರದೇಶಗಳಲ್ಲಿ ಎನ್ಡಿಆರ್ಎಫ್ ಸಿಬ್ಬಂದಿಗಳು ಶೋಧ ಕಾರ್ಯದಲ್ಲಿ ತೊಡಗಿದ್ದಾರೆ.