ಪುಲ್ವಾಮದಲ್ಲಿ ಎನ್ ಕೌಂಟರ್: ಸೇನೆಯ ದಾಳಿಗೆ ಮೂವರು ಉಗ್ರರು ಹತ
ಶ್ರೀನಗರ, ಏಪ್ರಿಲ್ 2: ಶುಕ್ರವಾರ ಬೆಳ್ಳಂಬೆಳಗ್ಗೆ ಜಮ್ಮು-ಕಾಶ್ಮೀರದ ಪುಲ್ವಾಮ ಜಿಲ್ಲೆಯಲ್ಲಿ ಭದ್ರತಾ ಪಡೆ ಹಾಗೂ ಭಯೋತ್ಪಾದಕರ ನಡುವೆ ಎನ್ ಕೌಂಟರ್ ನಡೆಯುತ್ತಿದ್ದು, ಮೂವರು ಉಗ್ರರನ್ನು ಹೊಡೆದುರುಳಿಸಲಾಗಿದೆ.
ಸದ್ಯದ ವರದಿಗಳ ಪ್ರಕಾರ, ಜಮ್ಮು-ಕಾಶ್ಮೀರದ ಪುಲ್ವಾಮ ಜಿಲ್ಲೆಯ ಕಾಕ್ಪೋರಾದಲ್ಲಿ ಮೂವರು ಉಗ್ರರನ್ನು ಭದ್ರತಾ ಪಡೆಗಳು ಗುಂಡಿಕ್ಕಿ ಕೊಂದಿದ್ದು, ಕನಿಷ್ಠ ಇಬ್ಬರು ಎನ್ಕೌಂಟರ್ ನಡೆದ ಸ್ಥಳದಲ್ಲಿ ಸಿಕ್ಕಿಬಿದ್ದಿದ್ದಾರೆ ಎಂದು ತಿಳಿದುಬಂದಿದೆ. ಭಾರತೀಯ ಸೇನೆ ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಜಂಟಿಯಾಗಿ ಕಾರ್ಯಾಚರಣೆ ನಡೆಸುತ್ತಿದ್ದಾರೆ.
ವರದಿಗಳ ಪ್ರಕಾರ, ಉಗ್ರರು ಭದ್ರತಾ ಪಡೆಗಳ ಮೇಲೆ ಗುಂಡು ಹಾರಿಸಿದ ನಂತರ ಎನ್ಕೌಂಟರ್ ನಡೆಸಲಾಗಿದೆ ಎಂದು ಸೇನಾ ಅಧಿಕಾರಿಗಳು ತಿಳಿಸಿದ್ದಾರೆ. ಇನ್ನೂ ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.
ಗುರುವಾರ ಜಮ್ಮು ಮತ್ತು ಕಾಶ್ಮೀರದ ಶ್ರೀನಗರದ ಹೊರವಲಯದಲ್ಲಿ ಸ್ಥಳೀಯ ಪೊಲೀಸ್ ಅಧಿಕಾರಿಯನ್ನು ಉಗ್ರರು ಹತ್ಯೆ ಮಾಡಿದ್ದಾರೆ. ಹತ್ಯೆಯ ಹಿಂದೆ ಭಯೋತ್ಪಾದಕ ಸಂಘಟನೆಯಾದ ಲಷ್ಕರ್-ಎ-ತೊಯ್ಬಾ (ಎಲ್ಇಟಿ) ಪಾತ್ರವಿದೆ ಎಂದು ಅಧಿಕಾರಿಗಳು ಶಂಕಿಸಿದ್ದಾರೆ.
ಅರಿಗಂ ನೌಗಂನಲ್ಲಿರುವ ಬಿಜೆಪಿ ಮುಖಂಡರ ನಿವಾಸದ ಮೇಲೆ ನಾಲ್ಕು ಉಗ್ರರು ಮಹಿಳೆಯರ ವೇಷ ಧರಿಸಿ ದಾಳಿ ನಡೆಸಿದ್ದಾರೆ ಎನ್ನಲಾಗಿದೆ.