Breaking: ಹೊಸ ಪಕ್ಷ ಘೋಷಿಸಲಿರುವ ಗುಲಾಂ ನಬಿ ಆಜಾದ್
ಶ್ರೀನಗರ, ಸೆ.04: ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿ ಕಾಂಗ್ರೆಸ್ ತೊರೆದ ಹಿರಿಯ ರಾಜಕಾರಣಿ ಗುಲಾಂ ನಬಿ ಆಜಾದ್ ಭಾನುವಾರ ಜಮ್ಮುವಿನಲ್ಲಿ ಸಮಾವೇಶ ನಡೆಸಲಿದ್ದು, ಹೊಸ ಪಕ್ಷದೊಂದಿಗೆ ಹೊಸ ರಾಜಕೀಯ ಇನ್ನಿಂಗ್ಸ್ ಆರಂಭಿಸಲಿದ್ದಾರೆ.
ಹಿರಿಯ ಕಾಂಗ್ರೆಸ್ ನಾಯಕರಾಗಿದ್ದ ಗುಲಾಂ ನಬಿ ಆಜಾದ್ ಒಂದು ವಾರದ ಹಿಂದೆ ಪಕ್ಷಕ್ಕೆ ರಾಜೀನಾಮೆ ಸಲ್ಲಿಸಿದ್ದರು. ರಾಜೀನಾಮೆಗೆ ರಾಹುಲ್ ಗಾಂಧಿ ಕಾರಣ ಎಂದು ಟೀಕಿಸಿದ್ದರು.
ಸಮಾವೇಶದಲ್ಲಿ ಗುಲಾಂ ನಬಿ ಆಜಾದ್ ತಮ್ಮ ಹೊಸ ಪಕ್ಷವನ್ನು ಘೋಷಿಸುವ ಸಾಧ್ಯತೆಯಿದೆ. ಕಳೆದ ವಾರ ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಶೀಘ್ರದಲ್ಲೇ ಹೊಸ ಪಕ್ಷವನ್ನು ಪ್ರಾರಂಭಿಸುವುದಾಗಿ ಹೇಳಿದ್ದಾರೆ. ಪಕ್ಷದ ಮೊದಲ ಘಟಕವು ಜಮ್ಮು ಮತ್ತು ಕಾಶ್ಮೀರದಲ್ಲಿ ಆರಂಭವಾಗಲಿದೆ ಎಂದು ಮಾಹಿತಿ ನೀಡಿದ್ದರು.

ಜಮ್ಮು ಮತ್ತು ಕಾಶ್ಮೀರದಲ್ಲಿ ಶೀಘ್ರದಲ್ಲಿ ಚುನಾವಣೆ ನಡೆಯಲಿದೆ. ಗುಲಾಂ ನಬಿ ಆಜಾದ್ ನೇತೃತ್ವದ ಹೊಸ ಪಕ್ಷವು ಬಿಜೆಪಿ ಅಥವಾ ಜಮ್ಮು ಮತ್ತು ಕಾಶ್ಮೀರದ ಮುಖ್ಯವಾಹಿನಿಯ ಪಕ್ಷಗಳಾದ ನ್ಯಾಷನಲ್ ಕಾನ್ಫರೆನ್ಸ್ ಅಥವಾ ಪಿಡಿಪಿಯೊಂದಿಗೆ ಮೈತ್ರಿ ಮಾಡಿಕೊಳ್ಳುವ ಆಯ್ಕೆಯನ್ನು ಹೊಂದಿದೆ.
ಆದರೆ, ಎನ್ಡಿಟಿವಿ ಸಂದರ್ಶನದಲ್ಲಿ ಮಾತನಾಡಿರುವ ಆಜಾದ್ ಅವರು ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದಾರೆ. ಮೈತ್ರಿಯಿಂದ ಅವರಿಗೂ ಪ್ರಯೋಜನವಾಗುವುದಿಲ್ಲ, ನನಗೂ ಆಗುವುದಿಲ್ಲ ಎಂದು ಹೇಳಿದ್ದಾರೆ.
73 ವರ್ಷದ ಗುಲಾಂ ನಬಿ ಆಜಾದ್, ಕಾಂಗ್ರೆಸ್ ಪಕ್ಷದ ಜಮ್ಮು ಮತ್ತು ಕಾಶ್ಮೀರ ಘಟಕದಲ್ಲಿನ ಪ್ರಮುಖ ಹುದ್ದೆಗೆ ರಾಜೀನಾಮೆ ನೀಡಿ ತಿರಸ್ಕರಿಸಿದ ಕೆಲವೇ ದಿನಗಳಲ್ಲಿ ಕಾಂಗ್ರೆಸ್ ತೊರೆದರು. ನೇಮಕಾತಿಗಾಗಿ ಅವರ ಶಿಫಾರಸುಗಳನ್ನು ನಿರ್ಲಕ್ಷಿಸಲಾಗಿದೆ ಎಂದು ಆರೋಪಿಸಿದ್ದರು.
ಆಜಾದ್ ರಾಜೀನಾಮೆಯಿಂದಾಗಿ ಜಮ್ಮು ಮತ್ತು ಕಾಶ್ಮೀರ ಕಾಂಗ್ರೆಸ್ನಿಂದ ಮಾಜಿ ಉಪಮುಖ್ಯಮಂತ್ರಿ ತಾರಾ ಚಂದ್ ಸೇರಿದಂತೆ ಇನ್ನೂ 64 ನಾಯಕರು ತಮ್ಮ ರಾಜೀನಾಮೆಯನ್ನು ಸಲ್ಲಿಸಿದ್ದಾರೆ. ಮಂಗಳವಾರ ಗುಲಾಂ ನಬಿ ಆಜಾದ್ ಶಿಬಿರವನ್ನು ಸೇರಿಕೊಂಡಿದ್ದಾರೆ. ಈ ಮೂಲಕ ಕೇಂದ್ರಾಡಳಿತ ಪ್ರದೇಶದಲ್ಲಿ ರಾಷ್ಟ್ರೀಯ ಪಕ್ಷದ ಘಟಕವನ್ನು ಛಿದ್ರಗೊಳಿಸಿದ್ದಾರೆ.
ಪಕ್ಷ ತೊರೆದ ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಗುಲಾಂ ನಬಿ ಆಜಾದ್ ಕಳೆದ ಶುಕ್ರವಾರ ಸೋನಿಯಾ ಗಾಂಧಿ ಅವರಿಗೆ ಬರೆದ ಐದು ಪುಟಗಳ ರಾಜೀನಾಮೆ ಪತ್ರದಲ್ಲಿ ರಾಹುಲ್ ಗಾಂಧಿಯನ್ನು ಗುರಿಯಾಗಿಸಿ ದಾಳಿ ನಡೆಸಿದ್ದಾರೆ. ರಾಹುಲ್ ಗಾಂಧಿಯನ್ನು "ಅಪ್ರಬುದ್ಧ" ಎಂದು ಬಣ್ಣಿಸುವ ಮೂಲಕ ಕುಟುಕು ವಾಗ್ದಾಳಿ ನಡೆಸಿದರು. "ಗಂಭೀರವಲ್ಲದ ವ್ಯಕ್ತಿ ಪಕ್ಷದ ಚುಕ್ಕಾಣಿ ಹಿಡಿದಿದ್ದಾರೆ" ಎಂದು ಆರೋಪಿಸಿದರು.












Click it and Unblock the Notifications