ಜಮ್ಮು ವಿಮಾನ ನಿಲ್ದಾಣದಲ್ಲಿ ಸ್ಫೋಟದ ಬೆನ್ನಲ್ಲೇ ಪಠಾಣ್ಕೋಟ್ನಲ್ಲಿ ಹೈಅಲರ್ಟ್
ಶ್ರೀನಗರ್, ಜೂನ್ 27: "ಭಾರತೀಯ ವಾಯುಸೇನೆ ನಿಯಂತ್ರಣದಲ್ಲಿ ಇರುವ ಜಮ್ಮು ವಿಮಾನ ನಿಲ್ದಾಣದಲ್ಲಿ ಸಂಭವಿಸಿದ ಎರಡು ಲಘುಸ್ಫೋಟದ ಹಿನ್ನೆಲೆ ಪಂಜಾಬ್ ಗಡಿ ಜಿಲ್ಲೆ ಪಠಾಣ್ಕೋಟ್ನಲ್ಲಿ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ," ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪಠಾಣ್ಕೋಟ್ನ ಕೇಂದ್ರ ಸ್ಥಳಗಳಲ್ಲಿ ಬಳಿ ಬಿಗಿ ಭದ್ರತೆಯನ್ನು ನಿಯೋಜಿಸಲಾಗಿದೆ. ಪಠಾಣ್ಕೋಟ್ ಸುತ್ತಮುತ್ತಲಿನ ಸೂಕ್ಷ್ಮ ಪ್ರದೇಶಗಳಲ್ಲಿ ಗಸ್ತು ತಿರುಗುವಿಕೆ ಉದ್ದೇಶದಿಂದ ಹೆಚ್ಚುವರಿ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.
"ಪರಿಸ್ಥಿತಿಯನ್ನು ಗಮನದಲ್ಲಿ ಇಟ್ಟುಕೊಂಡು ಭದ್ರತಾ ವ್ಯವಸ್ಥೆಯನ್ನು ನೋಡಿಕೊಳ್ಳಲಾಗುತ್ತದೆ. ಅಕ್ಕಪಕ್ಕದ ಪ್ರದೇಶಗಳಲ್ಲಿ ಈ ರೀತಿಯ ಘಟನೆಗಳು ನಡೆದ ಸಂದರ್ಭದಲ್ಲಿ ನಾವು ಹೆಚ್ಚುವರಿ ಎಚ್ಚರಿಕೆಯನ್ನು ವಹಿಸುತ್ತೇವೆ," ಎಂದು ಪಠಾಣ್ಕೋಟ್ನ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಸುರೇಂದ್ರ ಲಂಬಾ ಹೇಳಿದ್ದಾರೆ.

ರಾಜ್ಯದ ಗಡಿಯಲ್ಲೂ ತೀವ್ರ ತಪಾಸಣೆ:
"ಜಮ್ಮುವಿನಲ್ಲಿ ನಡೆದ ಲಘು ಸ್ಫೋಟದ ಬೆನ್ನಲ್ಲೇ ಪಂಜಾಬಿನ ಪಠಾಣ್ಕೋಟ್ನಲ್ಲಿ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ. ಇದರ ಜೊತೆ ಪರಿಸ್ಥಿತಿಯನ್ನು ಅರಿತುಕೊಂಡು ರಾಜ್ಯದ ಗಡಿಯಲ್ಲಿನ ಚಟುವಟಿಕೆಗಳ ಮೇಲೆ ನಿಗಾ ವಹಿಸಲಾಗುತ್ತದೆ. ಅದಕ್ಕಾಗಿ ಹೆಚ್ಚುವರಿ ಸಿಬ್ಬಂದಿಯನ್ನು ಸಹ ನಿಯೋಜಿಸಲಾಗಿರುತ್ತದೆ, SWAT ತಂಡ, ಪಂಜಾಬ್ ಪೊಲೀಸರು ಹಾಗೂ ವಿಶೇಷ ಕಾಮಾಂಡೋಗಳನ್ನು ಆಯಕಟ್ಟಿನ ಸ್ಥಳಗಳಲ್ಲಿ ನಿಯೋಜಿಸಲಾಗುತ್ತವೆ. ಪಂಜಾಬಿಗೆ ಜಮ್ಮು ಮತ್ತು ಕಾಶ್ಮೀರಕ್ಕೆ ಹೋಗುವ ಮತ್ತು ಅಲ್ಲಿಂದ ರಾಜ್ಯದ ಗಡಿಯನ್ನು ಪ್ರವೇಶಿಸುವ ಪ್ರತಿಯೊಂದು ವಾಹನಗಳು ಮತ್ತು ಪ್ರಯಾಣಿಕರ ಮೇಲೆ ನಿಗಾ ವಹಿಸಲಾಗುವುದು," ಎಂದು ಲಾಂಬಾ ಹೇಳಿದ್ದಾರೆ.
ಜಮ್ಮು ವಿಮಾನ ನಿಲ್ದಾಣದಲ್ಲಿ ಲಘುಸ್ಫೋಟ:
ಭಾನುವಾರ ಬೆಳಗಿನ ಜಾವ 1.37ರ ಹೊತ್ತಿಗೆ ಮೊದಲ ಸ್ಫೋಟ ಸಂಭವಿಸಿದ್ದು, ಕಟ್ಟಡದ ತಾಂತ್ರಿಕ ವಿಭಾಗದಲ್ಲಿನ ಮೇಲ್ಛಾವಣಿಗೆ ಹಾನಿಯಾಗಿದೆ. ಬೆಳಗಿನ ಜಾವ 1.43ರ ಹೊತ್ತಿಗೆ ಒಂದೇ ಕಿಲೋ ಮೀಟರ್ ದೂರದಲ್ಲಿ ಇರುವ ಬಯಲು ಪ್ರದೇಶದಲ್ಲಿ ಎರಡನೇ ಸ್ಫೋಟ ಸಂಭವಿಸಿದೆ ಎಂದು ವರದಿಯಾಗಿದೆ.
ಭಾನುವಾರ ಬೆಳಗಿನ ಜಾವ 2 ಗಂಟೆ ಸುಮಾರಿಗೆ ಐದು ನಿಮಿಷಗಳ ಅಂತರದಲ್ಲಿ ಎರಡು ಸ್ಫೋಟ ಸಂಭವಿಸಿದ್ದು, ಇಬ್ಬರು ಭಾರತೀಯ ಸೇನಾ ಪಡೆ ಸಿಬ್ಬಂದಿ ಗಾಯಗೊಂಡಿದ್ದಾರೆ. ಸ್ಥಳಕ್ಕೆ ರಾಷ್ಟ್ರೀಯ ಬಾಂಬ್ ದತ್ತಾಂಶ ಕೇಂದ್ರ ತಜ್ಞರು, ವಿಧಿವಿಜ್ಞಾನ ಪ್ರಯೋಗಾಲಯದ ಸಿಬ್ಬಂದಿ ಹಾಗೂ ಜಮ್ಮು ಕಾಶ್ಮೀರ ಪೊಲೀಸರು ದೌಡಾಯಿಸಿದ್ದು, ಸ್ಥಳದಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.












Click it and Unblock the Notifications