ಕಾಶ್ಮೀರದಲ್ಲಿ ಬಿಜೆಪಿ ಪ್ರಧಾನ ಕಾರ್ಯದರ್ಶಿ ವಾಹನಕ್ಕೆ ಉಗ್ರರಿಂದ ಬೆಂಕಿ
ಶ್ರೀನಗರ, ನವೆಂಬರ್ 01: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯ ಬಿಜೆಪಿ ಪ್ರಧಾನ ಕಾರ್ಯದರ್ಶಿಯೊಬ್ಬರ ವಾಹನಕ್ಕೆ ಉಗ್ರರು ಬೆಂಕಿ ಹಚ್ಚಿದ ಘಟನೆ ಶುಕ್ರವಾರ ಬೆಳಗ್ಗಿನ ಜಾವ ನಡೆದಿದೆ.
ಮನೆಯ ಮುಂದೆ ನಿಲ್ಲಿಸಲಾಗಿದ್ದ ಅವರ ವಾಹನ ಮತ್ತು ಇನ್ನೊಬ್ಬರ ವಾಹನಕ್ಕೆ ಉಗ್ರರು ಬೆಂಕಿ ಹಚ್ಚಿದ್ದು, ಮನೆಯ ಮೇಲೆ ಗುಂಡಿನ ದಾಳಿಯನ್ನೂ ನಡೆಸಿದ್ದಾರೆ ಎನ್ನಲಾಗಿದೆ. ಆದರೆ ಮನೆಯಲ್ಲಿ ಆ ಸಂದರ್ಭದಲ್ಲಿ ಯಾರೂ ಇಲ್ಲದ ಕಾರಣ ಯಾವುದೇ ಸಾವು ನೋವು ಸಂಭವಿಸಿಲ್ಲ.

ಆಸಗ್ಟ್ 5 ರಂದು ಕೇಂದ್ರ ಸರ್ಕಾರವು ಭಾರತದ ಸಂವಿಧಾನದ 370 ನೇ ವಿಧಿಯ ಅಡಿಯಲ್ಲಿ ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು ರದ್ದುಮಾಡಿ, ಜಮ್ಮು-ಕಾಶ್ಮೀರ ಮತ್ತು ಲಡಾಖ್ ಅನ್ನು ಎರಡೂ ಪ್ರತ್ಯೇಕ ಕೇಂದ್ರಾಡಳಿತ ಪ್ರದೇಶಗಳನ್ನಾಗಿ ಘೋಷಿಸಿತ್ತು. ಇದಾದ ನಂತರ ಉಗ್ರರು ಜಮ್ಮು ಮತ್ತು ಕಾಶ್ಮೀರದಲ್ಲಿ ಶಾಂತಿ ಕದಡಲು ನಿರಂತರವಾಗಿ ಯತ್ನಿಸುತ್ತಿದ್ದಾರೆ.
ಸಂವಿಧಾನದ 370 ನೇ ವಿಧಿ ರದ್ದತಿಯ ನಂತರ ಜಮ್ಮು ಮತ್ತು ಕಾಶ್ಮೀರದ ಸ್ಥಿತಿ ಹೇಗಿದೆ ಎಂಬುದನ್ನು ಅಧ್ಯಯನ ಮಾಡಿ, ವರದಿ ನೀಡಲು ಅಕ್ಟೋಬರ್ 29 ರಂದು ಯುರೋಪಿನಿಂದ ನಿಯೋಗವೊಂದು ಬಂದಿತ್ತು.
ಭೇಟಿ ನಂತರ ಪ್ರತಿಕ್ರಿಯೆ ನೀಡಿದ್ದ ನಿಯೋಗದ ಸದಸ್ಯರು "ಭಯೋತ್ಪಾದನೆಯ ವಿರುದ್ಧ ಹೋರಾಡುವ ಭಾರತದ ಪ್ರಯತ್ನಕ್ಕೆ ನಾವು ಬೆಂಬಲ ಸೂಚಿಸುತ್ತೇವೆ" ಎಂದಿದ್ದನ್ನು ಇಲ್ಲಿ ಸ್ಮರಿಸಬಹುದು.












Click it and Unblock the Notifications