ಇಂದಿನಿಂದ ಜಮ್ಮು-ಕಾಶ್ಮೀರ ಪ್ರವಾಸಿಗರಿಗೆ ಮುಕ್ತ
ಶ್ರೀನಗರ, ಅಕ್ಟೋಬರ್ 10: ಜಮ್ಮು ಮತ್ತು ಕಾಶ್ಮೀರ ಇಂದಿನಿಂದ ಪ್ರವಾಸಿಗರಿಗೆ ಮುಕ್ತವಾಗಲಿದೆ. ಸಂವಿಧಾನದ ವಿಧಿ 370 ರದ್ದತಿ ಹಿನ್ನೆಲೆಯಲ್ಲಿ ಪ್ರವಾಸಿಗರಿಗೆ ನಿಷೇಧ ಹೇರಲಾಗಿತ್ತು.
ಇಂದಿನಿಂದ ಮತ್ತೆ ಕಾಶ್ಮೀರ ಪ್ರವಾಸಿಗರಿಗೆ ಮುಕ್ತವಾಗಲಿದೆ. ಆಗಸ್ಟ್ 2ರಿಂದಲೇ ಪ್ರವಾಸಿಗರ ಭೇಟಿ ಮತ್ತು ವಾಸ್ತವ್ಯವನ್ನು ಕೇಂದ್ರ ಸರ್ಕಾರ ನಿರ್ಭಂಧಿಸಿತ್ತು. ಮುಖ್ಯ ಕಾರ್ಯದರ್ಶಿ ಮತ್ತು ಇತರೆ ಉನ್ನತ ಸಲಹೆಗಾರರ ಜೊತೆ ಸೋಮವಾರ ವಾಸ್ತವ ಸ್ಥಿತಿ ಮತ್ತು ಭದ್ರತಾ ಪರಿಶೀಲನಾ ಸಭೆ ನಡೆಸಿದ್ದ ರಾಜ್ಯಪಾಲ ಸತ್ಯಪಾಲ್ ಮಲ್ಲಿಕ್ ಪ್ರವಾಸಿಗರಿಗೆ ವಿಧಿಸಿರುವ ನಿರ್ಬಂಧ ರದ್ದುಪಡಿಸುವುದಾಗಿ ತಿಳಿಸಿದ್ದರು.
ಅ. 10ರಿಂದ ಪ್ರವಾಸಿಗರಿಗೆ ಮುಕ್ತವಾಗಲಿದೆ ಜಮ್ಮು- ಕಾಶ್ಮೀರ
ಅಧಿಕೃತ ಅಂಕಿಅಂಶಗಳ ಪ್ರಕಾರ, ಈ ವರ್ಷದ ಮೊದಲ ಏಳು ತಿಂಗಳಲ್ಲಿ 5 ಲಕ್ಷಕ್ಕೂ ಹೆಚ್ಚು ಪ್ರವಾಸಿಗರು ಜಮ್ಮು-ಕಾಶ್ಮೀರಕ್ಕೆ ಭೇಟಿ ನೀಡಿದ್ದರು. ಜುಲೈ ತಿಂಗಳಲ್ಲಿ ಸುಮಾರು 3,40,000 ಯಾತ್ರಿಕರು ಕಣಿವೆ ರಾಜ್ಯಕ್ಕೆ ಆಗಮಿಸಿದ್ದರು. ಆದರೆ ಆಗಸ್ಟ್ 5ರ ಬಳಿಕ ಕೇವಲ 150 ವಿದೇಶಿ ಪ್ರಯಾಣಿಕರು ಕಾಶ್ಮೀರಕ್ಕೆ ಭೇಟಿ ನೀಡಿದ್ದಾರೆ ಎಂದು ಅಂಕಿ ಅಂಶಗಳು ತಿಳಿಸಿವೆ.
ಕೇಂದ್ರ ಸರ್ಕಾರ ಕಣಿವೆ ರಾಜ್ಯದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸುವ ಮೊದಲೇ ಜಮ್ಮು ಕಾಶ್ಮೀರವನ್ನು ತೊರೆಯುವಂತೆ ಎಲ್ಲಾ ಪ್ರವಾಸಿಗರಿಗೆ ಸೂಚನೆ ನೀಡಿತ್ತು. ಹೀಗಾಗಿ ಕಳೆದ ಎರಡು ತಿಂಗಳಿನಿಂದ ಕಾಶ್ಮೀರ ಪ್ರವಾಸಿಗರಿಲ್ಲದೆ ಬಣಗುಡುತ್ತಿತ್ತು. ಆದರೆ, ಇದೀಗ ಪ್ರವಾಸಿಗರಿಗೆ ಹೇರಿದ್ದ ನಿಷೇಧವನ್ನು ರದ್ದುಪಡಿಸಲಾಗಿದೆ ಎಂದು ರಾಜ್ಯಪಾಲ ಸತ್ಯಪಾಲ್ ಮಲಿಕ್ ತಿಳಿಸಿದ್ದಾರೆ.
ಜಮ್ಮು ಕಾಶ್ಮೀರದ ಎಲ್ಲಾ ಪ್ರೌಢಶಾಲೆ, ಕಾಲೇಜುಗಳು ಮತ್ತು ವಿಶ್ವವಿದ್ಯಾಲಯಗಳನ್ನು ರಾಜ್ಯ ಸರ್ಕಾರ ಪುನರಾರಂಭ ಮಾಡಿದೆ. ಆರೆ ವಿದ್ಯಾರ್ಥಿಗಳ ಹಾಜರಾತಿ ಗಣನೀಯ ಪ್ರಮಾಣದಲ್ಲಿ ಕಡಿಮೆಯಿದೆ. ಶ್ರೀನಗರ ಸರ್ ಪ್ರತಾಪ್ ಕಾಲೇಜು ಸೇರಿದಂತೆ ಹಲವು ಶಿಕ್ಷಣ ಸಂಸ್ಥೆಗಳ ಬಾಗಿಲಲ್ಲಿ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ವಿದ್ಯಾರ್ಥಿಗಳ ಗುರುತು ಪತ್ರ ಪರಿಶೀಲಿಸಿಯೇ ಕಾಲೇಜುಗಳ ಒಳಗೆ ಬಿಡಲಾಗುತ್ತಿದೆ.