ಪ್ರಧಾನಿ ಎದುರು ವಿಶ್ವಾಸದ್ರೋಹದ ಕಥೆ ತೆರೆದಿಟ್ಟ ಜಮ್ಮು-ಕಾಶ್ಮೀರ ನಾಯಕರು!
ಶ್ರೀನಗರ್, ಜೂನ್ 25: ಜಮ್ಮು ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ಕಿತ್ತುಕೊಳ್ಳುವ ಮೂಲಕ ಕೇಂದ್ರ ಸರ್ಕಾರವು ರಾಜ್ಯದ ಜನರ ವಿಶ್ವಾಸಕ್ಕೆ ದ್ರೋಹ ಬಗೆದಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ವಿರುದ್ಧ ಕಣಿವೆ ರಾಜ್ಯದ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಗುರುವಾರ ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದಲ್ಲಿ ಮೂರೂವರೆ ಗಂಟೆಗಳ ಕಾಲ ಸರ್ವ ಪಕ್ಷ ಸಭೆ ನಡೆಸಲಾಯಿತು. ಜಮ್ಮು ಕಾಶ್ಮೀರದ 14 ಮುಖಂಡರನ್ನು ಒಳಗೊಂಡ ಸಭೆಯಲ್ಲಿ ಕೇಂದ್ರ ಸರ್ಕಾರದ ನಡೆಗೆ ನಾಯಕರು ವಿರೋಧ ವ್ಯಕ್ತಪಡಿಸಿದರು.
ಜಮ್ಮು ಕಾಶ್ಮೀರ ಕುರಿತ ಮೋದಿ ಸಭೆ; ಇಲ್ಲಿವೆ ಪ್ರಮುಖ ಅಂಶಗಳು
2019ರ ಆಗಸ್ಟ್ 5ರಂದು ಜಮ್ಮು ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ಕಿತ್ತುಕೊಂಡು ಕೇಂದ್ರಾಡಳಿತ ಪ್ರದೇಶವನ್ನಾಗಿ ಘೋಷಿಸಲಾಗಿದೆ. ಆ ಮೂಲಕ ಜನರ ವಿಶ್ವಾಸಕ್ಕೆ ದ್ರೋಹ ಬಗೆದಿರುವ ಕೇಂದ್ರ ಸರ್ಕಾರ ತಕ್ಷಣವೇ ತನ್ನ ನಿರ್ಧಾರವನ್ನು ವಾಪಸ್ ತೆಗೆದುಕೊಳ್ಳಬೇಕು. ಜಮ್ಮು-ಕಾಶ್ಮೀರದಲ್ಲಿ ರಾಜ್ಯತ್ವವನ್ನು ಪುನರ್ ಸ್ಥಾಪಿಸಬೇಕು ಎಂದು ಪ್ರಧಾನಿ ಮೋದಿ ಎದುರು ರಾಜ್ಯ ನಾಯಕರು ಆಗ್ರಹಿಸಿದರು.
2019ರಲ್ಲಿ ವಿಶೇಷ ಸ್ಥಾನಮಾನ ರದ್ದು
ಕೇಂದ್ರ ಸಂಸತ್ತಿನಲ್ಲಿ 370ನೇ ವಿಧಿಯನ್ನು ರದ್ದುಗೊಳಿಸುವ ಮೂಲಕ 2019ರ ಆಗಸ್ಟ್ 5ರಂದು ಜಮ್ಮು-ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಲಾಯಿತು. ರಾಜ್ಯವನ್ನು ಎರಡು ಕೇಂದ್ರಾಡಳಿತ ಪ್ರದೇಶವನ್ನಾಗಿ ವಿಂಗಡಣೆ ಮಾಡಲಾಯಿತು.
"ಪ್ರಧಾನಿಗಳೇ ಜನರ ನಂಬಿಕೆ ಉಳಿಸಿಕೊಳ್ಳಿ"
"ಪ್ರಧಾನಮಂತ್ರಿ ನರೇಂದ್ರ ಮೋದಿ ಜನರು ಇಟ್ಟುಕೊಂಡಿದ್ದ ನಂಬಿಕೆ ಮತ್ತು ವಿಶ್ವಾಸಕ್ಕೆ ದ್ರೋಹ ಎಸಗಿದ್ದಾರೆ. ಈಗ ಅವರ ಮೇಲಿನ ವಿಶ್ವಾಸವನ್ನು ಉಳಿಸಿಕೊಳ್ಳುವುದು ಜವಾಬ್ದಾರಿ ಎಂಬುದನ್ನು ಮನವರಿಕೆ ಮಾಡಿದ್ದೇವೆ," ಎಂದು ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಉಮರ್ ಅಬ್ದುಲ್ಲಾ ಹೇಳಿದ್ದಾರೆ. ಇನ್ನೊಂದು ದಿಕ್ಕಿನಲ್ಲಿ ಜಮ್ಮು ಕಾಶ್ಮೀರದ ಬಹುತೇಕ ನಾಯಕರು 370ನೇ ವಿಧಿಯನ್ನು ಪುನಃಸ್ಥಾಪಿಸಲು ಒತ್ತಾಯಿಸಲಿಲ್ಲ, ಈ ವಿಷಯವು ಸುಪ್ರೀಂ ಕೋರ್ಟ್ ಅಂಗಳದಲ್ಲಿದ್ದು, ಕಾನೂನು ಪ್ರಕ್ರಿಯೆಗೆ ಅವಕಾಶ ನೀಡಬೇಕು ಎಂದು ವಾದಿಸಿದರು.
ಮೋದಿ ಎದುರಿಗೆ ನಾಲ್ಕೈದು ಬೇಡಿಕೆ
"ಜಮ್ಮು-ಕಾಶ್ಮೀರದಲ್ಲಿ ರಾಜ್ಯತ್ವದ ಪುನರ್ ಸ್ಥಾಪನೆ, ಚುನಾವಣೆಗಳನ್ನು ನಡೆಸುವುದು, ಕಾಶ್ಮೀರಿ ಪಂಡಿತರಿಗೆ ಪುನರ್ವಸತಿ, ಜಮ್ಮು-ಕಾಶ್ಮೀರದಲ್ಲಿ ಭದ್ರತಾ ವ್ಯವಸ್ಥೆಯ ಪುನಃಸ್ಥಾಪನೆ ಮತ್ತು ಸ್ಥಳೀಯರಿಗೆ ಭೂಮಿ ಮತ್ತು ಉದ್ಯೋಗಗಳನ್ನು ಒದಗಿಸುವ ಸಾಂವಿಧಾನಿಕ ಭರವಸೆ ಸೇರಿದಂತೆ ನಾಲ್ಕೈದು ಬೇಡಿಕೆಗಳನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಮುಂದೆ ಪ್ರಸ್ತಾಪಿಸಲಾಗಿದೆ, ಎಂದು ಕಾಂಗ್ರೆಸ್ ಹಿರಿಯ ಮುಖಂಡ ಹಾಗೂ ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಗುಲಾಮ್ ನಬಿ ಆಜಾದ್ ಹೇಳಿದ್ದಾರೆ. ಇದರ ಜೊತೆಗೆ ಜಮ್ಮು ಕಾಶ್ಮೀರ ವಿಭಜನೆ ವಿರೋಧಿಸಿದ್ದಕ್ಕೆ ಬಂಧಿಸಿರುವ ರಾಜಕೀಯ ಕೈದಿಗಳನ್ನು ಬಿಡುಗಡೆ ಮಾಡುವಂತೆ ಆಜಾದ್ ಆಗ್ರಹಿಸಿದ್ದಾರೆ.
"ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದು ಪಾಕಿಸ್ತಾನವಲ್ಲ"
"ಜಮ್ಮು-ಕಾಶ್ಮೀರಕ್ಕೆ 370ನೇ ವಿಧಿಯ ಅಡಿ ವಿಶೇಷ ಸ್ಥಾನಮಾನವನ್ನು ನಮ್ಮ ಪ್ರಧಾನಮಂತ್ರಿ ಜವಾಹರ್ ಲಾಲ್ ನೆಹರೂ ಮತ್ತು ಅಂದಿನ ಗೃಹ ಸಚಿವ ಸರ್ದಾರ್ ವಲ್ಲಭ್ ಭಾಯ್ ಪಟೇಲ್ ಅವರೇ ಹೊರತೂ ಪಾಕಿಸ್ತಾನವಲ್ಲ. ಕಳೆದ ಆಗಸ್ಟ್ 5ರಂದು ಕೇಂದ್ರ ಸರ್ಕಾರವು ಅಸಂವಿಧಾನಿಕವಾಗಿ ತೆಗೆದುಕೊಂಡ ನಿರ್ಧಾರದಿಂದ ಜಮ್ಮು ಕಾಶ್ಮೀರದ ಜನರು ಅವಮಾನಕ್ಕೀಡಾಗಿದ್ದಾರೆ. ತೀವ್ರವಾಗಿ ನೊಂದಿರುವ ಜನರು ಭಾವನಾತ್ಮಕವಾಗಿ ಕುಸಿದು ಹೋಗಿದ್ದಾರೆ," ಎಂದು ಮಾಜಿ ಮುಖ್ಯಮಂತ್ರಿ ಮೆಹಬೂಬ್ ಮುಫ್ತಿ ಹೇಳಿದ್ದಾರೆ.
ಜಮ್ಮು ಕಾಶ್ಮೀರದಲ್ಲಿ 370ನೇ ವಿಧಿ ಅಡಿ ವಿಶೇಷ ಸ್ಥಾನಮಾನವನ್ನು ಪುನಃಸ್ಥಾಪಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಮೆಹಬೂಬ್ ಮುಫ್ತಿ ಒತ್ತಾಯಿಸಿದರು. ರಾಜ್ಯದ ಜನರು ಅದಕ್ಕಾಗಿ ಶಾಂತಿಯುತ ಮತ್ತು ಸಾಂವಿಧಾನಿಕವಾಗಿ ತಿಂಗಳು ಮತ್ತು ವರ್ಷಗಳ ಕಾಲ ಒಟ್ಟಾಗಿ ಹೋರಾಡುತ್ತಾರೆ ಎಂದು ಪ್ರತಿಪಾದಿಸಿದರು.