Breaking: ಕುಪ್ವಾರದಲ್ಲಿ ಎನ್ಕೌಂಟರ್, ಇಬ್ಬರು ಉಗ್ರರ ಹತ್ಯೆ
ಶ್ರೀನಗರ ಜೂನ್ 7: ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯ ಭಕ್ತಾರಸ್ ಕಂಡಿ ಪ್ರದೇಶದಲ್ಲಿ ಮಂಗಳವಾರ ಬೆಳಗ್ಗೆ ಭದ್ರತಾ ಪಡೆಗಳು ನಡೆಸಿದ ಎನ್ಕೌಂಟರ್ನಲ್ಲಿ ಅಂತಾರಾಷ್ಟ್ರೀಯ ಭಯೋತ್ಪಾದಕ ಸಂಘಟನೆ ಲಷ್ಕರ್-ಎ- ತೋಯ್ಬಾದ ಇಬ್ಬರು ಉಗ್ರರನ್ನು ಹತ್ಯೆ ಮಾಡಲಾಗಿದೆ.
ಹತ್ಯೆಗೀಡಾದ ಇಬ್ಬರ ಪೈಕಿ ಒಬ್ಬ ಪಾಕಿಸ್ತಾನಿ ಪ್ರಜೆ ತುಫೈಲ್ ಎಂದು ಕಾಶ್ಮೀರ ವಲಯ ಪೊಲೀಸರು ತಿಳಿಸಿದ್ದಾರೆ.
"ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ಪಾಕಿಸ್ತಾನಿ ಭಯೋತ್ಪಾದಕ ತುಫೈಲ್ ಸೇರಿದಂತೆ ಲಷ್ಕರೆ ತೊಯ್ಬಾದ ಇಬ್ಬರು ಭಯೋತ್ಪಾದಕರು ಹತರಾಗಿದ್ದಾರೆ. ಇತರೆ ಭಯೋತ್ಪಾದಕರಿಗಾಗಿ ಶೋಧ ಕಾರ್ಯ ಮುಂದುವರಿದಿದೆ,'' ಎಂದು ಕಾಶ್ಮೀರ ವಲಯ ಪೊಲೀಸರು ಟ್ವೀಟ್ ಮಾಡಿದ್ದಾರೆ.
ಮಂಗಳವಾರ ಮುಂಜಾನೆ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ಆರಂಭವಾಗಿದೆ. "ಕುಪ್ವಾರ ಜಿಲ್ಲೆಯ ಭಕ್ತಾರಸ್ ಕಂಡಿ ಪ್ರದೇಶದಲ್ಲಿ ಎನ್ಕೌಂಟರ್ ಆರಂಭವಾಗಿದೆ. ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮತ್ತು ಭಾರತೀಯ ಸೇನೆಯು ಕಾರ್ಯಾಚರಣೆಯಲ್ಲಿ ತೊಡಗಿವೆ,'' ಎಂದು ಕಾಶ್ಮೀರ ವಲಯ ಪೊಲೀಸರು ಮಂಗಳವಾರ ಮುಂಜಾನೆ ಟ್ವೀಟ್ ಮಾಡಿದ್ದಾರೆ.

ಸೋಮವಾರ ಬಾರಾಮುಲ್ಲಾ ಜಿಲ್ಲೆಯಲ್ಲಿ ನಡೆದ ಎನ್ ಕೌಂಟರ್ ನಲ್ಲಿ ಲಷ್ಕರ್-ಎ-ತೋಯ್ಬಾಗೆ ಸೇರಿದ ಮತ್ತೊಬ್ಬ ಪಾಕಿಸ್ತಾನಿ ಉಗ್ರನನ್ನು ಭದ್ರತಾ ಪಡೆಗಳು ಹೊಡೆದುರುಳಿಸಿದ್ದವು.
ಇನ್ನೊಂದೆಡೆ ಜಮ್ಮು ಮತ್ತು ಕಾಶ್ಮೀರದ ಶೋಫಿಯಾನ್ ಜಿಲ್ಲೆಯ ಸೆಡೌನಲ್ಲಿ ಗುರುವಾರ ಭಾರತೀಯ ಯೋಧರು ತೆರಳುತ್ತಿದ್ದ ವಾಹನವನ್ನು ಉಗ್ರರು ಸ್ಫೋಟಿಸಿದ್ದರು. ಘಟನೆಯಲ್ಲಿ ಮೂವರು ಭಾರತೀಯ ಯೋಧರು ಗಾಯಗೊಂಡಿದ್ದರು. ಖಾಸಗಿ ವಾಹನವನ್ನು ಭಾರತೀಯ ಸೇನೆ ಬಾಡಿಗೆ ಪಡೆದಿತ್ತು. ಈ ವಾಹನದ ಮೇಲೆ ದಾಳಿಯಾಗಿತ್ತು.
ಇತ್ತೀಚಿಗೆ ಜಮ್ಮು ಮತ್ತು ಕಾಶ್ಮೀರದಾದ್ಯಂತ ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿಕೊಂಡು ಉಗ್ರರು ದಾಳಿ ನಡೆಸುತ್ತಿದ್ದಾರೆ.
ಕಳೆದ ವಾರ ಕಾಶ್ಮೀರ ಶೋಫಿಯಾನ್ ಜಿಲ್ಲೆಯ ಕೀಗಂ ಪ್ರದೇಶದಲ್ಲಿ ಉಗ್ರರು, ನಾಗರಿಕನ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಫಾರೂಕ್ ಅಹಮದ್ ಶೇಖ್ ಎಂಬುವವರು ಗುಂಡೇಟು ತಿಂದು ಗಾಯಗೊಂಡಿದ್ದರು.

ಮೇ 31ರಂದು ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಭಯೋತ್ಪಾದಕರು ಶಾಲಾ ಶಿಕ್ಷಕಿ ಮೇಲೆ ಗುಂಡು ಹಾರಿಸಿ ಹತ್ಯೆ ಮಾಡಿದ್ದರು. ಶಿಕ್ಷಕಿ ಕಾಶ್ಮೀರಿ ಪಂಡಿತ್ ಆಗಿರುವ ಕಾರಣದಿಂದಲೇ ಭಯೋತ್ಪಾದಕರು ಆಕೆಯನ್ನು ಗುರಿಯಾಗಿಸಿಕೊಂಡು ಗುಂಡಿಕ್ಕಿ ಕೊಂದಿದ್ದಾರೆ. ಆಕೆಗೆ ಗಂಭೀರ ಗಾಯಗಳಾಗಿದ್ದು, ತಕ್ಷಣ ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ ಆಸ್ಪತ್ರೆ ಸಾಗಿಸುವ ಮಾರ್ಗ ಮಧ್ಯೆ ಶಿಕ್ಷಕಿ ಸಾವನ್ನಪ್ಪಿದ್ದರು. ಮೃತ ಶಿಕ್ಷಕಿ ಜಮ್ಮುವಿನ ಸಾಂಬಾ ನಿವಾಸಿಯಾಗಿದ್ದರು.
ಕುಲ್ಗಾಮ್ ಜಿಲ್ಲೆಯಲ್ಲಿ ಜೂನ್ 2 ರಂದು ರಾಜಸ್ಥಾನ ಮೂಲದ ಬ್ಯಾಂಕ್ ಮ್ಯಾನೇಜರ್ ವಿಜಯ್ ಕುಮಾರ್ ಅವರನ್ನು ಉಗ್ರರು ಹತ್ಯೆ ಮಾಡಿದ್ದರು. ಇತ್ತೀಚಿಗೆ ನಡೆದ ಇನ್ನೊಂದು ಘಟನೆಯಲ್ಲಿ ಬುದ್ಗಾಮ್ನ ಚದೂರ ಪ್ರದೇಶದಲ್ಲಿ ಲಷ್ಕರೆ ತೊಯ್ಬಾ ಉಗ್ರರು ಟಿವಿ ನಿರೂಪಕಿ ಅಮ್ರೀನ್ ಭಟ್ ಅವರ ಮೇಲೆ ಗುಂಡು ಹಾರಿಸಿ ಕೊಲೆ ಮಾಡಿದ್ದರು. ಮೇ 12 ರಂದು ಬುದ್ಗಾಮ್ ಜಿಲ್ಲೆಯಲ್ಲಿ ಕಂದಾಯ ಇಲಾಖೆ ನೌಕರ ರಾಹುಲ್ ಭಟ್ ಅವರನ್ನು ಉಗ್ರರು ಹತ್ಯೆ ಮಾಡಿದ್ದರು.
ಇನ್ನೊಂದೆಡೆ, ಕಳೆದ ಮಂಗಳಾವಾರ ಜಮ್ಮು ಮತ್ತು ಕಾಶ್ಮೀರದ ಅವಂತಿಪೋರಾ ಜಿಲ್ಲೆಯಲ್ಲಿ ಭಾರತೀಯ ಸೇನೆ ನಡೆಸಿದ ಕಾರ್ಯಾಚರಣೆಯಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್ಕೌಂಟರ್ನಲ್ಲಿ ಇಬ್ಬರು ಭಯೋತ್ಪಾದಕರು ಹತರಾಗಿದ್ದರು.












Click it and Unblock the Notifications