ಕದನ ವಿರಾಮ ಉಲ್ಲಂಘಿಸಿದ ಪಾಕ್: ಒಬ್ಬ ಭಾರತೀಯ ಯೋಧ ಹುತಾತ್ಮ
ಶ್ರೀನಗರ್, ಸಪ್ಟೆಂಬರ್.15: ಜಮ್ಮು ಕಾಶ್ಮೀರದ ರಜೌರಿ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯುದ್ದಕ್ಕೂ ಪಾಕಿಸ್ತಾನ ಸೇನೆಯು ಕದನ ವಿರಾಮ ಉಲ್ಲಂಘನೆ ಮಾಡಿದೆ. ಪಾಕಿಸ್ತಾನ ಸೇನೆಯು ನಡೆಸಿದ ಗುಂಡಿನ ದಾಳಿಯಲ್ಲಿ ಒಬ್ಬ ಭಾರತೀಯ ಯೋಧ ಹುತಾತ್ಮರಾಗಿದ್ದು, ಒಬ್ಬ ಅಧಿಕಾರಿ ಸೇರಿದಂತೆ ಇಬ್ಬರು ಗಾಯಗೊಂಡಿದ್ದಾರೆ.
ಮಂಗಳವಾರ ಸಂಜೆಯಿಂದಲೇ ಪಾಕಿಸ್ತಾನದ ಸೇನೆ ಕಡೆಯಿಂದ ಅಪ್ರಚೋದಿತ ಶೆಲ್ ಮತ್ತು ಗುಂಡಿನ ದಾಳಿ ನಡೆಸಲಾಯಿತು. ರಜೌರಿ ಜಿಲ್ಲೆಯ ಸುಂದರ್ ಬಿನ್ ಸೆಕ್ಟರ್ ನಲ್ಲಿ ನಡೆಸಿದ ಗುಂಡಿನ ದಾಳಿಗೆ ಭಾರತೀಯ ಸೇನೆಯು ತಕ್ಕ ಪ್ರತ್ಯುತ್ತರವನ್ನು ನೀಡಿದೆ.

ಪಾಕಿಸ್ತಾನ ಸೇನೆ ನಡೆಸಿದ ಗುಂಡಿನ ದಾಳಿಯಲ್ಲಿ ಗಾಯಗೊಂಡ ಅಧಿಕಾರಿ ಮತ್ತು ಒಬ್ಬ ಯೋಧರನ್ನು ಸೇನಾ ಆಸ್ಪತ್ರೆಗೆ ರವಾನಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ ಎಂದು ಸೇನಾ ಮೂಲಗಳು ತಿಳಿಸಿವೆ ಎಂದು ಪಿಟಿಐ ವರದಿ ಮಾಡಿದೆ.
ಒಂದು ವರ್ಷದಲ್ಲಿ 3186 ಬಾರಿ ಕದನ ವಿರಾಮ ಉಲ್ಲಂಘನೆ:
ಜಮ್ಮು ಕಾಶ್ಮೀರ ಗಡಿಯಲ್ಲಿ ಕಳೆದ ಒಂದು ವರ್ಷದಲ್ಲೇ ಪಾಕಿಸ್ತಾನ ಸೇನೆಯು 3186 ಬಾರಿ ಕದನ ವಿರಾಮ ಉಲ್ಲಂಘಿಸಿ ಗುಂಡಿನ ದಾಳಿ ನಡೆಸಿದೆ ಎಂದು ಕೇಂದ್ರ ಸರ್ಕಾರವು ಸಪ್ಟೆಂಬರ್.14ರಂದಷ್ಟೇ ಅಂಕಿ-ಅಂಶಗಳ ಸಮೇತ ಮಾಹಿತಿ ನೀಡಿತ್ತು. ಅಲ್ಲದೇ ಜನವರಿ.01ರಿಂದ ಆಗಸ್ಟ್.31ರ ಅವಧಿಯಲ್ಲಿ 242 ಬಾರಿ ಅಂತಾರಾಷ್ಟ್ರೀಯ ಗಡಿ ನಿಯಂತ್ರಣ ರೇಖೆಯನ್ನು ದಾಟಿರುವ ಘಟನೆಗಳು ನಡೆದಿವೆ ಎಂದು ಕೇಂದ್ರ ಸರ್ಕಾರವು ತಿಳಿಸಿದೆ.












Click it and Unblock the Notifications