ಶ್ರೀನಗರದಲ್ಲಿ ಭಯೋತ್ಪಾದಕರಿಂದ ಗುಂಡಿನ ದಾಳಿ: ಪೊಲೀಸ್ ಸಿಬ್ಬಂದಿ ಹುತಾತ್ಮ
ಶ್ರೀನಗರ, ನವೆಂಬರ್ 08: ಜಮ್ಮು ಮತ್ತು ಕಾಶ್ಮೀರದ ಶ್ರೀನಗರದಲ್ಲಿ ಭಯೋತ್ಪಾದಕರಿಂದ ಗುಂಡಿನ ದಾಳಿ ನಡೆದಿದ್ದು, ಗುಂಡಿನ ಚಕಮಕಿಯಲ್ಲಿ ಪೊಲೀಸ್ ಸಿಬ್ಬಂದಿ ತೌಸಿಫ್ ಅಹ್ಮದ್ ಎಂಬವರು ಹುತಾತ್ಮರಾಗಿದ್ದಾರೆ ಎಂದು ಮಾಹಿತಿ ಲಭಿಸಿದೆ. ಜಮ್ಮು ಮತ್ತು ಕಾಶ್ಮೀರದ ರಾಜಧಾನಿ ಶ್ರೀನಗರದ ಬಟ್ಮಾಲೂ ಪ್ರದೇಶದಲ್ಲಿ ಉಗ್ರರು ಪೊಲೀಸ್ ಸಿಬ್ಬಂದಿಯನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿದ್ದಾರೆ ಎಂದು ವರದಿಯು ತಿಳಿಸಿದೆ. ಈ ಬಗ್ಗೆ ಪಿಟಿಐ ಅಧಿಕಾರಿಯೊಬ್ಬರು ನೀಡಿರುವ ಮಾಹಿತಿಯನ್ನು ಉಲ್ಲೇಖ ಮಾಡಿದೆ
"ಭಾನುವಾರ ರಾತ್ರಿ ಸುಮಾರು 8 ಗಂಟೆಗೆ ಭಯೋತ್ಪಾದಕರು ಜಮ್ಮು ಮತ್ತು ಕಾಶ್ಮೀರದಲ್ಲಿ ಪೊಲೀಸ್ ಸಿಬ್ಬಂದಿ ತೌಸಿಫ್ ಅಹ್ಮದ್ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ನಗರದ ಬಟ್ಮಾಲೂ ಪ್ರದೇಶದ ಎಸ್ಡಿ ಕಾಲೋನಿಯಲ್ಲಿರುವ ಪೊಲೀಸ್ ಸಿಬ್ಬಂದಿ ತೌಸಿಫ್ ಅಹ್ಮದ್ ನಿವಾಸದ ಸಮೀಪದಲ್ಲಿ ಈ ಉಗ್ರರು ಪೊಲೀಸ್ ಸಿಬ್ಬಂದಿಯನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿದ್ದಾರೆ," ಎಂದು ಅಧಿಕಾರಿಯೊಬ್ಬರು ಸುದ್ದಿ ಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ.
ಜಮ್ಮು ಮತ್ತು ಕಾಶ್ಮೀರದಲ್ಲಿ ದಿನದಿಂದ ದಿನಕ್ಕೆ ಹೆಚ್ಚಾಯ್ತು ಸಾವಿನ ಸಂಖ್ಯೆ
"ಭಯೋತ್ಪಾದಕರ ಗುಂಡಿನ ದಾಳಿಯಿಂದಾಗಿ ಪೊಲೀಸ್ ಸಿಬ್ಬಂದಿ ತೌಸಿಫ್ ಅಹ್ಮದ್ ತೀವ್ರವಾಗಿ ಗಾಯಗೊಂಡಿದ್ದರು. ಕೂಡಲೇ ತೌಸಿಫ್ ಅಹ್ಮದ್ರನ್ನು ಎಸ್ಎಂಹೆಚ್ಎಸ್ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆದರೆ ವೈದ್ಯರು ಪೊಲೀಸ್ ಸಿಬ್ಬಂದಿ ತೌಸಿಫ್ ಅಹ್ಮದ್ ಈಗಾಗಲೇ ಮೃತಪಟ್ಟಿದ್ದಾರೆ ಎಂದು ಘೋಷಣೆ ಮಾಡಿದ್ದಾರೆ," ಎಂದು ಕೂಡಾ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಪ್ರಸ್ತುತ ಈ ಪ್ರದೇಶದಲ್ಲಿ ಪೊಲೀಸರು ಸುತ್ತುವರಿದಿದ್ದು, ಭಯೋತ್ಪಾದಕರ ಪತ್ತೆಗಾಗಿ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಅಫ್ಘಾನಿಸ್ತಾನವನ್ನು ತಾಲಿಬಾನ್ ಉಗ್ರರು ತಮ್ಮ ವಶಕ್ಕೆ ಪಡೆದ ಬಳಿಕ ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರ ದಾಳಿಯು ಮತ್ತಷ್ಟು ಅಧಿಕವಾಗಿದೆ. ಭದ್ರತಾ ಸಿಬ್ಬಂದಿಗಳು, ನಾಗರಿಕರ ಹತ್ಯೆಯು ಜಮ್ಮು ಮತ್ತು ಕಾಶ್ಮೀರದಲ್ಲಿ ತೀವ್ರವಾಗಿ ಹೆಚ್ಚಾಗುತ್ತಿದೆ.
ಜಮ್ಮು ಮತ್ತು ಕಾಶ್ಮೀರದಲ್ಲಿ ಹೆಚ್ಚಿದ ಉಗ್ರರ ದಾಳಿ
ಅಕ್ಟೋಬರ್ ತಿಂಗಳು ಒಂದರಲ್ಲೇ 12 ಭದ್ರತಾ ಸಿಬ್ಬಂದಿಗಳು, 20 ಉಗ್ರರು ಹಾಗೂ 12 ನಾಗರಿಕರು ಹತ್ಯೆಗೀಡಾಗಿದ್ದಾರೆ. ಸೆಪ್ಟೆಂಬರ್ ನಲ್ಲಿ ಮೂವರು ಭದ್ರತಾ ಸಿಬ್ಬಂದಿಗಳು, 8 ಮಂದಿ ಉಗ್ರರು, ಓರ್ವ ನಾಗರಿರು ಸಾವನ್ನಪ್ಪಿದ್ದರು.
ತಾಲಿಬಾನ್ ಉಗ್ರರು ಆಗಸ್ಟ್ 15 ರಂದು ಅಫ್ಘಾನಿಸ್ತಾನವನ್ನು ತನ್ನ ವಶಕ್ಕೆ ಪಡೆದುಕೊಂಡಿದ್ದಾರೆ. ಅಧಿಕೃತ ಅಂಕಿ ಅಂಶಗಳ ಪ್ರಕಾರವಾಗಿ ತಾಲಿಬಾನ್ ಉಗ್ರರು ಅಫ್ಘಾನಿಸ್ತಾನವನ್ನು ತನ್ನ ವಶಕ್ಕೆ ಪಡೆದ ಆಗಸ್ಟ್ 15 ರಿಂದ ಅಕ್ಟೋಬರ್ ತಿಂಗಳ ಕೊನೆಯವರೆಗೆ ಜಮ್ಮು-ಕಾಶ್ಮೀರದಲ್ಲಿ 16 ಭದ್ರತಾ ಸಿಬ್ಬಂದಿಗಳು, 15 ಪ್ರಜೆಗಳು ಉಗ್ರರ ದಾಳಿಗೆ ಬಲಿಯಾಗಿದ್ದಾರೆ. ಇನ್ನು ಈ ಸಂದರ್ಭದಲ್ಲೇ 39 ಉಗ್ರ ಸಂಘಟನೆಗಳ ಕಮಾಂಡರ್ಗಳನ್ನೂ, ಉಗ್ರರನ್ನೂ ಭಾರತೀಯ ಸೇನಾ ಪಡೆಯು ಹೊಡೆದುರುಳಿಸಿದೆ.
ಕಾಶ್ಮೀರದಲ್ಲಿ ಶಾಂತಿ ನೆಲೆಸಲು ಪಾಕಿಸ್ತಾನದ ಜತೆ ಮಾತುಕತೆ ನಡೆಸಬೇಕು: ಫಾರೂಖ್
ಇನ್ನು ಜಮ್ಮು ಮತ್ತು ಕಾಶ್ಮೀರದಲ್ಲಿ ಭದ್ರತಾ ಪಡೆ ಹಾಗೂ ಜಮ್ಮು ಮತ್ತು ಕಾಶ್ಮೀರ ಪೊಲೀಸರು ನಿರಂತರವಾಗಿ ಉಗ್ರರ ವಿರುದ್ಧ ಕಾರ್ಯಾಚರಣೆಯನ್ನು ನಡೆಸುತ್ತಲಿದ್ದಾರೆ. ಇತ್ತೀಚೆಗೆ ಜಮ್ಮು ಕಾಶ್ಮೀರ ರಜೌರಿ ಜಿಲ್ಲೆಯ ಖಬ್ಲಾನ್ ಅರಣ್ಯದಲ್ಲಿ ಭಾರಿ ಶಸ್ತ್ರಾಸ್ತ್ರಗಳನ್ನು ಹೊಂದಿರುವ ಉಗ್ರರು ಅಡಗಿರುವ ಬಗ್ಗೆ ಸ್ಥಳೀಯರು ಮಾಹಿತಿ ನೀಡಿದ ಬೆನ್ನಲ್ಲೇ ಭಾರತೀಯ ಸೇನೆ ಅಲರ್ಟ್ ಆಗಿ ಈ ಪ್ರದೇಶದಲ್ಲಿ ಕಾರ್ಯಾಚರಣೆಯನ್ನು ಆರಂಭ ಮಾಡಿದೆ.
ಜಮ್ಮು ಮತ್ತು ಕಾಶ್ಮೀರದ ಪೂಂಚ್ ಮತ್ತು ಪಿರ್ಪಾಂಜಲ್ ಪ್ರದೇಶಗಳಲ್ಲಿ ಭಯೋತ್ಪಾದನಾ ವಿರೋಧಿ ಕಾರ್ಯಾಚರಣೆಯನ್ನು ನಡೆಸಲಾಗುತ್ತಿದೆ. ಈ ಸಂದರ್ಭದಲ್ಲಿ ಕಳೆದ 27 ದಿನಗಳಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಇಬ್ಬರು ಅಧಿಕಾರಿಗಳು ಸೇರಿದಂತೆ ಒಂಬತ್ತು ಯೋಧರು ಹುತಾತ್ಮರಾಗಿದ್ದಾರೆ.
ಇನ್ನು ಕಳೆದ ಅಕ್ಟೋಬರ್ನಿಂದ ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರಮುಖವಾಗಿ ನಾಗರಿಕರನ್ನು ಗುರಿಯಾಗಿಸಿಕೊಂಡು ದಾಳಿಯನ್ನು ನಡೆಸುತ್ತಿದ್ದಾರೆ. ಅದರಲ್ಲೂ ಮುಖ್ಯವಾಗಿ ವಲಸೆ ಕಾರ್ಮಿಕರನ್ನು ಗುರಿಯಾಗಿಸಿಕೊಳ್ಳಲಾಗಿದೆ. ಈ ನಿಟ್ಟಿನಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿರುವ ವಲಸೆ ಕಾರ್ಮಿಕರು ಆತಂಕಕ್ಕೆ ಒಳಗಾಗಿದ್ದು, ತಮ್ಮ ತವರೂರಿನತ್ತ ಮುಖಮಾಡಿದ್ದಾರೆ.
Recommended Video
(ಒನ್ಇಂಡಿಯಾ ಸುದ್ದಿ)