Breaking News: ಬೆಳ್ಳಂಬೆಳಗ್ಗೆ ದಕ್ಷಿಣ ಕಾಶ್ಮೀರದ ಪುಲ್ವಾಮಾದಲ್ಲಿ ಎನ್ ಕೌಂಟರ್
ಶ್ರೀನಗರ್, ಜುಲೈ 14: ಕಣಿವೆ ರಾಜ್ಯದಲ್ಲಿ ಬುಧವಾರ ಬೆಳ್ಳಂಬೆಳಗ್ಗೆ ಗುಂಡಿನ ಸದ್ದು ಮೊಳಗಿದೆ. ದಕ್ಷಿಣ ಕಾಶ್ಮೀರದ ಪುಲ್ವಾಮಾದಲ್ಲಿ ಕಾರ್ಯಾಚರಣೆ ಶುರು ಮಾಡಿರುವ ಭಾರತೀಯ ಭದ್ರತಾ ಪಡೆ ಸಿಬ್ಬಂದಿ ಎನ್ ಕೌಂಟರ್ ನಡೆಸಿದ್ದಾರೆ.
ಭದ್ರತಾ ಸಿಬ್ಬಂದಿ ಹಾಗೂ ಪೊಲೀಸರು ನಡೆಸಿರುವ ಜಂಟಿ ಕಾರ್ಯಾಚರಣೆಯಲ್ಲಿ ಮೂವರು ಉಗ್ರರನ್ನು ಹೊಡೆದುರುಳಿಸಲಾಗಿದೆ. ಮನೆಯಲ್ಲಿ ಅಡಗಿ ಕುಳಿತ ಮೂವರು ಭದ್ರತಾ ಪಡೆ ನಡೆಸಿದ ಎನ್ ಕೌಂಟರ್ ನಲ್ಲಿ ಬಲಿಯಾಗಿದ್ದಾರೆ. ಈ ಪೈಕಿ ಒಬ್ಬ ಪಾಕಿಸ್ತಾನಿ ಮೂಲದ ಎಲ್ಇಟಿ ಕಮಾಂಡರ್ ಏಜಾಜ್ ಅಲಿಯಾಸ್ ಅಬು ಹುರೈರಾ ಎಂದು ಗುರುತಿಸಲಾಗಿದೆ. ಉಳಿದ ಇಬ್ಬರು ಸ್ಥಳೀಯ ಉಗ್ರವಾದಿ ಚಟುವಟಿಕೆಯಲ್ಲಿ ತೊಡಗಿದ್ದರು ಎಂದು ತಿಳಿದು ಬಂದಿದೆ.
ಪುಲ್ವಾಮಾ ಪ್ರದೇಶದಲ್ಲಿ ಉಗ್ರರು ಅಡಗಿರುವ ಶಂಕೆ ವ್ಯಕ್ತವಾದ ಹಿನ್ನೆಲೆ ಪೊಲೀಸರು ಹಾಗೂ ಭದ್ರತಾ ಸಿಬ್ಬಂದಿ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಪುಲ್ವಾಮಾ ನಗರದಲ್ಲಿ ತೀವ್ರ ಕಟ್ಟೆಚ್ಚರ ವಹಿಸಿದ್ದು, ಭದ್ರತಾ ಸಿಬ್ಬಂದಿ ಮತ್ತು ಪೊಲೀಸರನ್ನು ಹೆಚ್ಚಿನ ಸಂಖ್ಯೆಯಲ್ಲಿ ನಿಯೋಜಿಸಲಾಗಿದೆ.
ಶ್ರೀನಗರದಲ್ಲಿ ಪಾಕ್ ಉಗ್ರ ಹಾಗೂ ಎಲ್ಇಟಿ ಕಮಾಂಡರ್ ಹತ್ಯೆ
ಒಂದು ಕಡೆ ಪುಲ್ವಾಮಾದಲ್ಲಿ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತೆ ಆಗಿದೆ. ಇನ್ನೊಂದು ಕಡೆಯಲ್ಲಿ ಜಮ್ಮು ಮತ್ತು ಕಾಶ್ಮೀರ ಗಡಿ ನಿಯಂತ್ರಣ ರೇಖೆಯಲ್ಲಿ ಕದನ ವಿರಾಮ ಉಲ್ಲಂಘನೆ ನಡೆಯುತ್ತಿದ್ದು, ಈ ಹಿನ್ನೆಲೆ ಗಡಿಯಲ್ಲಿ ನಿಯೋಜಿಸಲಾಗಿರುವ ಭಾರತೀಯ ಸೇನಾ ಸಿಬ್ಬಂದಿ ಹೆಚ್ಚಿನ ಎಚ್ಚರಿಕೆ ವಹಿಸಿದೆ. ಪುಲ್ವಾಮಾ ಎನ್ ಕೌಂಟರ್ ಕುರಿತು ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ.