Video: ಜಮ್ಮು ಗಡಿ ನಿವಾಸಿಗೆ ಮೊಬೈಲ್ ಸಂಖ್ಯೆ ಪಡೆದ ಕೇಂದ್ರ ಸಚಿವ ಅಮಿತ್ ಶಾ
ಶ್ರೀನಗರ್, ಅಕ್ಟೋಬರ್ 25: ಜಮ್ಮು ಕಾಶ್ಮೀರದ ಮೂರು ದಿನದ ಪ್ರವಾಸ ಕೈಗೊಂಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾನುವಾರ ಜಮ್ಮುವಿನ ಗಡಿ ಪ್ರದೇಶಗಳಲ್ಲಿ ವಾಸವಾಗಿರುವ ಸ್ಥಳೀಯರನ್ನು ಭೇಟಿ ಮಾಡಿ, ಮಾತುಕತೆ ನಡೆಸಿದರು.
ಜಮ್ಮು ಗಡಿ ಪ್ರದೇಶವಾಗಿರುವ ಮಕ್ವಾಲ್ ಗೆ ಭೇಟಿ ನೀಡಿದ್ದ ಅವರು, ಸ್ಥಳೀಯರೊಂದಿಗೆ ಪರಿಸ್ಥಿತಿ ಕುರಿತು ಮಾಹಿತಿ ಪಡೆದುಕೊಂಡರು. ಯಾವುದೇ ರೀತಿ ಸಮಸ್ಯೆ ಎದುರಾದ ಸಂದರ್ಭದಲ್ಲಿ ತಮ್ಮನ್ನು ಸಂಪರ್ಕಿಸುವಂತೆ ಸ್ಥಳೀಯರಿಗೆ ಅಮಿತ್ ಶಾ ಹೇಳಿದ್ದಾರೆ. ಇದೇ ವೇಳೆ ಗಡಿ ಪ್ರದೇಶದ ನಿವಾಸಿಯೊಬ್ಬರ ಬಳಿ ತಮ್ಮ ಮೊಬೈಲ್ ಸಂಖ್ಯೆಯನ್ನು ವಿನಿಮಯ ಮಾಡಿಕೊಂಡಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.
#WATCH | J&K: Union Home Minister Amit Shah takes the contact number of a local resident of Makwal border in Jammu, shares his own and tells him that the man can contact him whenever he needs.
— ANI (@ANI) October 24, 2021
The Home Minister visited the forward areas of Makwal border today. pic.twitter.com/KJnI9zEsSD
ಕೇಂದ್ರ ಸಚಿವ ಅಮಿತ್ ಶಾ ಜೊತೆಗೆ ಜಮ್ಮು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಕೂಡಾ ಮಕ್ವಾಲ್ ಪ್ರದೇಶಕ್ಕೆ ಭೇಟಿ ನೀಡಿದ್ದು, ಇದೇ ಸಂದರ್ಭದಲ್ಲಿ ಭಾರತೀಯ ಭದ್ರತಾ ಪಡೆ(ಬಿಎಸ್ಎಫ್) ಸಿಬ್ಬಂದಿಯು ಜೊತೆಗಿದ್ದರು.
ಭದ್ರತಾ ಪಡೆ ಮತ್ತು ಕುಟುಂಬ ರಕ್ಷಣೆಗೆ ಬದ್ಧ:
"ಭಾರತವನ್ನು ರಕ್ಷಿಸುವ ಭದ್ರತಾ ಸಿಬ್ಬಂದಿ ಮತ್ತು ಅವರ ಕುಟುಂಬಗಳ ಕಲ್ಯಾಣಕ್ಕಾಗಿ ಕೇಂದ್ರ ಸರ್ಕಾರವು ಸಂಪೂರ್ಣ ಬದ್ಧವಾಗಿದೆ. "ನೀವು ಯಾವುದೇ ಆತಂಕವಿಲ್ಲದೆ ದೇಶವನ್ನು ರಕ್ಷಿಸಬೇಕು ಎಂದು ನಾನು ಎಲ್ಲರಿಗೂ ಹೇಳಲು ಬಯಸುತ್ತೇನೆ. ಮೋದಿ ಸರ್ಕಾರವು ನಿಮ್ಮ ಕುಟುಂಬಗಳನ್ನು ರಕ್ಷಿಸುವ ಹೊಣೆಯನ್ನು ಹೊತ್ತುಕೊಳ್ಳುತ್ತದೆ," ಎಂದು ಕೇಂದ್ರ ಸಚಿವ ಅಮಿತ್ ಶಾ ಹೇಳಿದ್ದಾರೆ. ಎಂದು ಅಮಿತ್ ಶಾ ಹೇಳಿದರು.
ಅಮಿತ್ ಶಾ ಭೇಟಿಗೂ ಒಂದು ದಿನ ಮುನ್ನವೇ ಕಾಶ್ಮೀರದಲ್ಲಿ ಇಂಟರ್ನೆಟ್ ಸ್ಥಗಿತ
ಹುತಾತ್ಮ ಪೊಲೀಸ್ ಅಧಿಕಾರಿ ಪತ್ನಿಗೆ ಉದ್ಯೋಗ:
ಮೊದಲ ದಿನ ಜಮ್ಮು ಕಾಶ್ಮೀರಕ್ಕೆ ಭೇಟಿ ನೀಡಿದ ಅಮಿತ್ ಶಾ, ಅಕ್ಟೋಬರ್ ತಿಂಗಳ ಆರಂಭದಲ್ಲಿ ಭಯೋತ್ಪಾದಕರಿಂದ ಹತ್ಯೆಗೀಡಾದ ಜಮ್ಮು ಮತ್ತು ಕಾಶ್ಮೀರದ ಪೊಲೀಸ್ ಅಧಿಕಾರಿ ಇನ್ಸ್ಪೆಕ್ಟರ್ ಪರ್ವೇಜ್ ಅಹ್ಮದ್ ಅವರ ಕುಟುಂಬವನ್ನು ಭೇಟಿ ಮಾಡಿದರು. ಇದೇ ವೇಳೆ ಮೃತ ಪೊಲೀಸ್ ಅಧಿಕಾರಿ ಅಹ್ಮದ್ ಅವರ ಪತ್ನಿ ಫಾತಿಮಾ ಅಖ್ತರ್ ಅವರಿಗೆ ಸರ್ಕಾರಿ ಕೆಲಸದ ನೇಮಕಾತಿ ಪತ್ರವನ್ನು ನೀಡಿದರು. ಈ ವೇಳೆ ಶಾ ಜೊತೆಗೆ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ, ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಮತ್ತು ಪೊಲೀಸ್ ಮಹಾನಿರ್ದೇಶಕ ದಿಲ್ಬಾಗ್ ಸಿಂಗ್ ಉಪಸ್ಥಿತರಿದ್ದರು.
ಕಣಿವೆ ರಾಜ್ಯದಲ್ಲಿ ನಾಗರಿಕರ ಸರಣಿ ಹತ್ಯೆ:
ಜಮ್ಮು ಮತ್ತು ಕಾಶ್ಮೀರದಲ್ಲಿ ಅಕ್ಟೋಬರ್ ಆರಂಭದ ದಿನಗಳಿಂದ ನಾಗರಿಕರನ್ನು ಗುರಿಯಾಗಿಸಿಕೊಂಡು ಸರಣಿ ದಾಳಿಗಳನ್ನು ನಡೆಸಲಾಗಿದ್ದು, ಈವರೆಗೂ 9 ನಾಗರಿಕರನ್ನು ಹತ್ಯೆ ಮಾಡಲಾಗಿದೆ. ಈ ಮಧ್ಯೆ ಪೂಂಚ್ ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ಉಗ್ರರ ವಿರುದ್ಧ ನಡೆದ ಕಾರ್ಯಾಚರಣೆಯಲ್ಲಿ ಈವರೆಗೂ 11 ಯೋಧರು ಹುತಾತ್ಮರಾಗಿದ್ದು, 15ಕ್ಕೂ ಹೆಚ್ಚು ಉಗ್ರರನ್ನು ಹೊಡೆದುರುಳಿಸಲಾಗಿದೆ.
ಜಮ್ಮು ಕಾಶ್ಮೀರದಲ್ಲಿ ಬಿಗಿ ಭದ್ರತೆ:
ಉಗ್ರರ ಸರಣಿ ದಾಳಿ ಮತ್ತು ಕಾರ್ಯಾಚರಣೆ ನಡುವೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ ನೀಡಿರುವ ಹಿನ್ನೆಲೆ ಕಣಿವೆ ರಾಜ್ಯದಲ್ಲಿ ಭದ್ರತೆಯನ್ನು ಮತ್ತಷ್ಟು ಬಿಗಿಗೊಳಿಸಲಾಗಿದೆ. ಕಣಿವೆ ರಾಜ್ಯದಲ್ಲಿ ಹೆಚ್ಚಿನ ಭದ್ರತಾ ವ್ಯವಸ್ಥೆಯನ್ನು ಮಾಡಿಕೊಳ್ಳಲಾಗಿದೆ. ಶ್ರೀನಗರ್ ನಲ್ಲಿ ದ್ವಿಚಕ್ರ ವಾಹನಗಳು ಸೇರಿದಂತೆ ಕೆಲವು ನಿಗದಿತ ವಾಹನಗಳ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ. ಪ್ರತಿಯೊಂದು ವಾಹನಗಳನ್ನು ತೀವ್ರ ತಪಾಸಣೆಗೆ ಒಳಪಡಿಸಲಾಗುತ್ತಿದೆ. ಪ್ರಮುಖ ರಸ್ತೆಗಳಲ್ಲಿ ಬ್ಯಾರಿಕೇಡ್ ಹಾಕಲಾಗಿದೆ. ಶ್ರೀನಗರ್ ದಲ್ಲಿ ಹೆಚ್ಚುವರಿ ಭದ್ರತಾ ಸಿಬ್ಬಂದಿ ನಿಯೋಜಿಸಲಾಗಿದೆ. ಕಣಿವೆ ರಾಜ್ಯದಾದ್ಯಂತ 50ಕ್ಕೂ ಹೆಚ್ಚು ತುಕಡಿಗಳನ್ನು ಹೆಚ್ಚುವರಿಯಾಗಿ ನಿಯೋಜಿಸಲಾಗಿದೆ. ಅಮಿತ್ ಶಾ ಭೇಟಿ ನೀಡುವ ಸಾಧ್ಯತೆಯಿರುವ ಜವಾಹರ್ ನಗರದಲ್ಲಿರುವ ಬಿಜೆಪಿ ಕಚೇರಿ ಸುತ್ತ ಬಿಗಿ ಭದ್ರತೆ ಏರ್ಪಡಿಸಲಾಗಿದೆ.
ಕಳೆದ 2019ರ ಆಗಸ್ಟ್ 5ರಂದು ಜಮ್ಮು ಕಾಶ್ಮೀರಕ್ಕೆ 370ರಡಿ ನೀಡಲಾದ ವಿಶೇಷ ಸ್ಥಾನಮಾನ ರದ್ದುಗೊಳಿಸಿದ ನಂತರದಲ್ಲಿ ಇದು ಅಮಿತ್ ಶಾ ಮೊದಲ ಬಾರಿಗೆ ಭೇಟಿಯಾಗಿದೆ.