21 ವರ್ಷದ ಆರ್ಯ ರಾಜೇಂದ್ರನ್ ತಿರುವನಂತಪುರಂ ಮೇಯರ್ ಆಗಿ ಆಯ್ಕೆ
ತಿರುವನಂತಪುರಂ, ಡಿಸೆಂಬರ್ 28: 21 ವರ್ಷದ ಬಿಎಸ್ಸಿ ವಿದ್ಯಾರ್ಥಿನಿ ಆರ್ಯ ರಾಜೇಂದ್ರನ್ ಅವರು ತಿರುವನಂತಪುರಂನ ನೂತನ ಮೇಯರ್ ಆಗಿ ಆಯ್ಕೆಯಾಗಿದ್ದಾರೆ.
ಈ ಮೂಲಕ ಆರ್ಯ ಅವರು ರಾಜ್ಯ ಹಾಗೂ ದೇಶದ ಅತ್ಯಂತ ಕಿರಿಯ ಮೇಯರ್ ಎಂಬ ಗೌರವಕ್ಕೆ ಪಾತ್ರರಾಗಿದ್ದಾರೆ.
ಸಿಪಿಎಂ ಅಭ್ಯರ್ಥಿ ಆರ್ಯ, ಮುದವನ್ಮುಗಲ್ ವಾರ್ಡ್ನಿಂದ ಯುಡಿಎಫ್ ಅಭ್ಯರ್ಥಿ ಶ್ರೀಕಾಲ ಅವರ ವಿರುದ್ಧ 2872 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದು, ಜಿಲ್ಲೆಯ ಅತ್ಯಂತ ಕಿರಿಯ ಅಭ್ಯರ್ಥಿಯಾಗಿದ್ದಾರೆ.
ಆರ್ಯ ಅವರು ಯಾವುದೇ ರಾಜಕೀಯ ಕುಟುಂಬದ ಹಿನ್ನೆಲೆ ಹೊಂದಿಲ್ಲ. ಅವರ ತಂದೆ ರಾಜೇಂದ್ರನ್ ಅವರು ಎಲೆಕ್ಟ್ರಿಷಿಯನ್ ಆಗಿದ್ದು, ತಾಯಿ ಶ್ರೀಲತಾ ಅವರು ಎಲ್ಐಸಿ ಏಜೆಂಟ್ ಆಗಿದ್ದಾರೆ.
ಪಕ್ಷ ನನಗೆ ನೀಡುವ ಯಾವುದೇ ಜವಾಬ್ದಾರಿಯನ್ನು ಸಂತೋಷದಿಂದ ಸ್ವೀಕರಿಸುತ್ತೇನೆ ಎಂದು ಆರ್ಯ ಹೇಳಿದ್ದಾರೆ.
ಕಳೆದ ಸ್ವಲ್ಪ ದಿನಗಳ ಹಿಂದಷ್ಟೇ ಸಿಪಿಎಂ ಜಿಲ್ಲಾ ಕಾರ್ಯದರ್ಶಿ ಅವರನ್ನು ಭೇಟಿಯಾಗಿ ನಿರ್ಧಾರ ತಿಳಿಸಿದ್ದರು. ಇದೀಗ ಅಂತಿಮವಾಗಿದ್ದು, ಆರ್ಯ ರಾಜೇಂದ್ರನ್ ಅವರನ್ನು ತಿರುವನಂತಪುರಂ ಮೇಯರ್ ಆಗಿ ಆಯ್ಕೆ ಮಾಡಲಾಗಿದೆ.
ಆರ್ಯ ಅವರು ತಿರುವನಂತಪುರಂನಲ್ಲಿರುವ ಆಲ್ ಸೇಂಟ್ಸ್ ಕಾಲೇಜಿನ ದ್ವಿತೀಯ ವರ್ಷದ ಬಿಎಸ್ಸಿ ವಿದ್ಯಾರ್ಥಿನಿಯಾಗಿದ್ದು, ಬಾಲಾ ಸಂಘದ ರಾಜ್ಯಾಧ್ಯಕ್ಷೆ ಮತ್ತು ಸಿಪಿಎಂನ ವಿದ್ಯಾರ್ಥಿ ವಿಭಾಗವಾದ ಎಸ್ಎಫ್ಐನ ರಾಜ್ಯ ಪದಾಧಿಕಾರಿಯಾಗಿದ್ದಾರೆ. ಅಲ್ಲದೆ ಸಿಪಿಎಂ ಶಾಖಾ ಸಮಿತಿ ಸದಸ್ಯೆಯೂ ಆಗಿದ್ದಾರೆ.