ಕೊರೊನಾ ವೈರಸ್ ಭೀತಿ: ದಯವಿಟ್ಟು ಅಯ್ಯಪ್ಪ ಸ್ವಾಮಿ ದರ್ಶನಕ್ಕೆ ಬರಬೇಡಿ!
ತಿರುವನಂತಪುರಂ, ಮಾರ್ಚ್.10: ಕೇರಳದಲ್ಲಿ ಕೊರೊನಾ ವೈರಸ್ ಭೀತಿ ದಿನೇ ದಿನೆ ಹೆಚ್ಚಾಗುತ್ತಿದೆ. ಸರ್ಕಾರ ಸೋಂಕಿತ ಹರಡುವಿಕೆ ತಡೆಗೆ ಸಾಕಷ್ಟು ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ. ಇದರ ಮಧ್ಯೆ ಶಬರಿಮಲೆಯ ಪ್ರಸಿದ್ಧ ಅಯ್ಯಪ್ಪ ಸ್ವಾಮಿ ದೇವಸ್ಥಾನಕ್ಕೆ ಭಕ್ತರು ಆಗಮಿಸದಂತೆ ಮನವಿ ಮಾಡಿಕೊಳ್ಳಲಾಗಿದೆ.
ಶಬರಿಮಲೆ ಅಯ್ಯಪ್ಪ ಸ್ವಾಮಿ ದೇಗುಲವು ಪ್ರತಿ ತಿಂಗಳು ಪೂಜೆಗೆಂದು ತೆರೆಯಲಾಗುತ್ತದೆ. ಈ ಹಿನ್ನೆಲೆಯಲ್ಲಿ ಭಕ್ತರು ಆಗಮಿಸುವ ನಿರೀಕ್ಷೆಯಿದ್ದು, ಕೊರೊನಾ ವೈರಸ್ ಹರಡುವ ಭೀತಿಯಿಂದ ಭಕ್ತರಿಗೆ ದೇವಸ್ಥಾನದ ಆಡಳಿತ ಮಂಡಳಿಯು ಸಂದೇಶವನ್ನು ರವಾನಿಸಿದೆ.
ಕೇರಳದಲ್ಲಿ ಮತ್ತೆರಡು ಮಂದಿಗೆ ಕೊರೊನಾ ವೈರಸ್ ಸೋಂಕು ಪತ್ತೆ
ಈ ಬಾರಿ ಅಯ್ಯಪ್ಪಸ್ವಾಮಿ ದೇವಸ್ಥಾನದ ಪೂಜೆಗೆ ಭಕ್ತರು ಆಗಮಿಸದಂತೆ ತಿರುವಾಂಕೂರ್ ದೇವಸ್ವಂ ಮಂಡಳಿಯ ಅಧ್ಯಕ್ಷ ಎನ್.ವಾಸು ತಿಳಿಸಿದ್ದಾರೆ. ಇದರ ಜೊತೆಗೆ ಯಾತ್ರಾರ್ಥಿಗಳು ಸಾರ್ವಜನಿಕವಾಗಿ ಹಬ್ಬ ಹರಿದಿನಗಳಲ್ಲಿ ಭಾಗವಹಿಸದಂತೆ ಮನವಿ ಮಾಡಿಕೊಂಡಿದ್ದಾರೆ.
ಕೇರಳದಲ್ಲಿ ಇದುವರೆಗೂ 14 ಸೋಂಕಿತ ಪ್ರಕರಣ ಪತ್ತೆ:
ರಾಜ್ಯದಲ್ಲಿ ಇದುವರೆಗೂ 14 ಕೊರೊನಾ ವೈರಸ್ ಸೋಂಕಿತ ಪ್ರಕರಣಗಳು ಪತ್ತೆಯಾಗಿವೆ. ಸೋಮವಾರ 3 ವರ್ಷದ ಮಗು ಸೇರಿದಂತೆ ಆರು ಮಂದಿಯಲ್ಲಿ ಕೊರೊನಾ ವೈರಸ್ ಸೋಂಕು ಪತ್ತೆಯಾಗಿತ್ತು. ಮಂಗಳವಾರ ಹೊಸದಾಗಿ ಆರು ಪ್ರಕರಣಗಳು ವರದಿಯಾಗಿದ್ದವು. ಇದರ ಬೆನ್ನಲ್ಲೇ 3 ವರ್ಷದ ಮಗುವಿನ ಪೋಷಕರಲ್ಲಿಯೂ ಸೋಂಕು ಇರುವುದು ಸ್ಪಷ್ಟವಾಗಿದೆ. ಇದರಿಂದ ಕೇರಳದಲ್ಲಿ ಸೋಂಕಿತರ ಸಂಖ್ಯೆಯು 14ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವೆ ಕೆ.ಕೆ.ಶೈಲಜಾ ಮಾಹಿತಿ ನೀಡಿದ್ದಾರೆ.