ಕೇರಳದಲ್ಲಿ ಭಾರಿ ಮಳೆ: 19 ರೈಲುಗಳ ಸಂಚಾರ ಸ್ಥಗಿತ
ತಿರುವನಂತಪುರಂ, ಆಗಸ್ಟ್ 10: ಕೊಡಗು, ದಕ್ಷಿಣ ಕನ್ನಡದ ಕೆಲವು ಭಾಗಗಳಲ್ಲಿ ಕಳೆದ ಹದಿನೈದು ದಿನಗಳಿಂದ ಮಳೆಯಾಗುತ್ತಿತ್ತು. ಇದೀಗ ಕೇರಳದಲ್ಲೂ ಮಹಾ ಮಳೆ ಆರಂಭವಾಗಿದ್ದು 19 ರೈಲುಗಳ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ.
ಇದುವರೆಗೆ ಧಾರಾಕಾರ ಮಳೆಯಿಂದಾಗಿ ನಲವತ್ತೆರಡು(42) ಜನರು ಪ್ರಾಣ ಕಳೆದುಕೊಂಡಿದ್ದಾರೆ ಮತ್ತು ಶನಿವಾರ 19 ರೈಲುಗಳನ್ನು ರದ್ದುಪಡಿಸಲಾಗಿದೆ.
ಶುಕ್ರವಾರ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ರಾಜ್ಯದಲ್ಲಿ 24 ಭೂಕುಸಿತ ಘಟನೆಗಳು ವರದಿಯಾಗಿವೆ ಎಂದು ಹೇಳಿದ್ದಾರೆ. ಮಲಪ್ಪುರಂನಲ್ಲಿ, ಆಗಸ್ಟ್ 8 ರಂದು ಭೂಕುಸಿತ ಸಂಭವಿಸಿ 30 ಕ್ಕೂ ಹೆಚ್ಚು ಜನರು ಭಯಭೀತರಾಗಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ನಿರಂತರವಾಗಿ ಮಳೆ ಸುರಿಯುತ್ತಲೇ ಇರುವುದರಿಂದ ರಕ್ಷಣಾ ಕಾರ್ಯಕ್ಕೆ ಅಡ್ಡಿಯಾಗಿದೆ ಎಂದು ಹೇಳಲಾಗಿದೆ.
ಎರ್ನಾಕುಲಂ, ಇಡುಕ್ಕಿ, ಪಾಲಕ್ಕಾಡ್, ಮಲಪ್ಪುರಂ, ಕೋಜಿಕೋಡ್, ವಯನಾಡ್ ಮತ್ತು ಕಣ್ಣೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆ ಸೂಚಿಸಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮುಂದಿನ ಐದು ದಿನಗಳಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತದ ಹವಾಮಾನ ಇಲಾಖೆ ಸೂಚಿಸಿರುವುದರಿಂದ ಪರಿಸ್ಥಿತಿ ಇನ್ನಷ್ಟು ಹದಗೆಡಬಹುದು. ಈ ಹಿನ್ನೆಲೆಯಲ್ಲಿ ತಗ್ಗು ಪ್ರದೇಶಗಳಲ್ಲಿರುವ ಜನರನ್ನು ಸುರಕ್ಷಿತ ಸ್ಥಳಗಳಿಗೆ ರವಾನಿಸಲಾಗಿದೆ ಎಂದು ಹೇಳಲಾಗಿದೆ.
ಭಾರತೀಯ ಹವಾಮಾನ ಇಲಾಖೆ ಕರಾವಳಿ ಪ್ರದೇಶಗಳಲ್ಲಿ 40-50 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ ಎಂದು ಮುನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಮೀನುಗಾರರು ಸಮುದ್ರಕ್ಕೆ ಹೋಗದಂತೆ ಸೂಚಿಸಲಾಗಿದೆ.
ರಾಷ್ಟ್ರೀಯ ವಿಪತ್ತು ಪಡೆ, ಭಾರತೀಯ ಸೇನೆ ಮತ್ತು ಸ್ಥಳೀಯ ಪೊಲೀಸರು ಪ್ರಸ್ತುತ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ರಕ್ಷಣಾ ಕಾರ್ಯಗಳನ್ನು ಕೈಗೊಂಡಿದ್ದಾರೆ.