ಪುನರ್ವಸತಿ ಕೇಂದ್ರದಲ್ಲಿ ವಿಷಾಹಾರ ಸೇವನೆ: 30 ನಿರಾಶ್ರಿತರು ಅಸ್ವಸ್ಥ
ಕಲ್ಪಟ್ಟ, ಆಗಸ್ಟ್ 12: ಪ್ರವಾಹದಿಂದ ತತ್ತರಿಸಿರುವ ಕೇರಳದಲ್ಲಿ ಮತ್ತೊಂದು ಸಮಸ್ಯೆ ಎದುರಾಗಿದೆ. ವಯನಾಡಿನ ಪುನರ್ವಸತಿ ಕೇಂದ್ರದಲ್ಲಿ ವಿಷಯುಕ್ತ ಆಹಾರ ಸೇವಿಸಿ 30 ಮಂದಿ ಅಸ್ವಸ್ಥರಾಗಿದ್ದಾರೆ. ಇದು ಅಲ್ಲಿನ ಪುನರ್ವಸತಿ ಕೇಂದ್ರಗಳಲ್ಲಿ ಆಶ್ರಯ ಪಡೆದಿರುವ ನಿರಾಶ್ರಿತರಲ್ಲಿ ಭೀತಿ ಮೂಡಿಸಿದೆ.
ವಯನಾಡ್ ಜಿಲ್ಲೆಯ ನಿರ್ವಾರಂ ಹೈಯರ್ ಸೆಕೆಂಡರಿ ಶಾಲೆಯಲ್ಲಿ ಸ್ಥಾಪಿಸಲಾಗಿರುವ ಪುನರ್ವಸತಿ ಕೇಂದ್ರದಲ್ಲಿ ಈ ದುರಂತ ನಡೆದಿದೆ. ವಿಷಯುಕ್ತ ಆಹಾರ ಸೇವಿಸಿದ 30 ಮಂದಿಯ ಆರೋಗ್ಯ ಹದಗೆಟ್ಟಿದೆ. ಅವರನ್ನು ಮಾನಂತವಾಡಿ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ಮಲಯಾಳ ಮನೋರಮಾ ಪತ್ರಿಕೆ ವರದಿ ಮಾಡಿದೆ.
ಕೇರಳದಲ್ಲಿ ಪ್ರವಾಹದಿಂದ ಮೃತಪಟ್ಟವರ ಸಂಖ್ಯೆ 85ಕ್ಕೆ ಏರಿದೆ. 2,50,638 ಮಂದಿ ಪುನರ್ವಸತಿ ಕೇಂದ್ರಗಳಲ್ಲಿ ಆಶ್ರಯ ಪಡೆದಿದ್ದಾರೆ. ಒಟ್ಟು 1,326 ಪುನರ್ವಸತಿ ಕೇಂದ್ರಗಳನ್ನು ತೆರೆಯಲಾಗಿದೆ. ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರು ವಯನಾಡು ಜಿಲ್ಲೆಯ ಪ್ರವಾಹ ಪೀಡಿತ ಸ್ಥಳಗಳಿಗೆ ಸೋಮವಾರ ಭೇಟಿ ನೀಡಿ ಜನರಿಗೆ ಸಾಂತ್ವನ ಹೇಳಿದರು. ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಪ್ರವಾಹಪೀಡಿತ ವಯನಾಡು ಮತ್ತು ಮಲಪ್ಪುರಂ ಜಿಲ್ಲೆಗಳಿಗೆ ಮಂಗಳವಾರ ಭೇಟಿ ನೀಡಲಿದ್ದಾರೆ.

'ನಾನು ಪ್ರಧಾನಿಯೊಂದಿಗೆ ಮಾತನಾಡಿದ್ದು, ಪ್ರವಾಹ ಸಂತ್ರಸ್ತರ ಅನುಕೂಲಕ್ಕೆ ಕೇಂದ್ರ ಸರ್ಕಾರ ಸಂಪೂರ್ಣ ಸಹಕಾರ ನೀಡಬೇಕು ಎಂದು ಒತ್ತಾಯಿಸಿದ್ದೇನೆ. ಉಳಿದದ್ದು ಅವರಿಗೆ ಬಿಟ್ಟಿದ್ದು' ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.












Click it and Unblock the Notifications