ದಕ್ಷಿಣ ಭಾರತದ ರಾಜ್ಯಗಳಲ್ಲಿ ನ.1ರ ತನಕ ಭಾರೀ ಮಳೆ
ತಿರುವನಂತಪುರಂ, ಅಕ್ಟೋಬರ್ 28; ಭಾರತೀಯ ಹವಾಮಾನ ಇಲಾಖೆ ಅಕ್ಟೋಬರ್ 28 ರಿಂದ ನವೆಂಬರ್ 1ರ ತನಕ ತಮಿಳುನಾಡು, ಕೇರಳ, ಪುದುಚೇರಿ, ಆಂಧ್ರ ಪ್ರದೇಶ ಮತ್ತು ಕರ್ನಾಟಕದಲ್ಲಿ ಭಾರೀ ಮಳೆಯಾಗಲಿದೆ ಎಂದು ಎಚ್ಚರಿಕೆ ನೀಡಿದೆ.
ಈ ಹಿನ್ನಲೆಯಲ್ಲಿ ಕೇರಳದ ಕಂದಾಯ ಸಚಿವ ಕೆ. ರಾಜನ್ ಮಾಧ್ಯಮಗಳ ಜೊತೆ ಮಾತನಾಡಿದ್ದು, "6 ಜಿಲ್ಲೆಗಳಲ್ಲಿ ಎರಡು ಎನ್ಡಿಆರ್ಎಫ್ ತಂಡಗಳನ್ನು ನಿಯೋಜನೆ ಮಾಡಲಾಗಿದೆ" ಎಂದು ಹೇಳಿದ್ದಾರೆ.
"ಹವಾಮಾನ ಇಲಾಖೆ ಮುನ್ಸೂಚನೆ ಬಳಿಕ ತಿರುವನಂತಪುರಂ, ಕೊಲ್ಲಂ, ಪಟ್ಟಣಂತಿಟ್ಟ, ಅಲಫೂಜ, ಕೊಟ್ಟಾಯಂ ಮತ್ತು ಇಡುಕಿ ಜಿಲ್ಲೆಗಳಿಗೆ ಇಲಾಖೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ" ಎಂದು ಸಚಿವರು ತಿಳಿಸಿದ್ದಾರೆ.

ಇಡುಕ್ಕಿ ಜಿಲ್ಲೆಯ ಮುಲ್ಲಪೆರಿಯಾರ್ ಅಣೆಕಟ್ಟು ಭರ್ತಿಯಾಗಿದ್ದು ಹೆಚ್ಚಿನ ನೀರನ್ನು ಹೊರಬಿಡುವ ಸಾಧ್ಯತೆ ಇದೆ. ಇದರಿಂದಾಗಿ ಮುನ್ನೆಚ್ಚರಿಕೆ ಕ್ರಮವಾಗಿ 27 ಕಿ. ಮೀ. ವ್ಯಾಪ್ತಿಯಲ್ಲಿನ 339 ಕುಟುಂಬಗಳನ್ನು 6 ಕಾಳಜಿ ಕೇಂದ್ರಗಳಿಗೆ ಸ್ಥಳಾಂತರ ಮಾಡಲಾಗಿದೆ.
ಸುಮಾರು 126 ವರ್ಷದಷ್ಟು ಹಳೆಯದಾದ ಮುಲ್ಲಪೆರಿಯಾರ್ ಅಣೆಕಟ್ಟು ದುರ್ಬಲಗೊಂಡಿದೆ. ಈಗ ಅದು ಭರ್ತಿಯಾಗಿದ್ದು ಮತ್ತಷ್ಟು ಆತಂಕಕ್ಕೆ ಕಾರಣವಾಗಿದೆ. ಕೇರಳದ ಇಡುಕ್ಕಿಯಲ್ಲಿರುವ ಈ ಡ್ಯಾಂ ನಿರ್ವಹಣೆಯನ್ನು ತಮಿಳುನಾಡು ಸರ್ಕಾರ ನೋಡಿಕೊಳ್ಳುತ್ತದೆ.
ಅಕ್ಟೋಬರ್ನಲ್ಲಿ ಸುರಿದ ಮಳೆಯಿಂದಾಗಿ ಅಣೆಕಟ್ಟು ಭರ್ತಿಯಾಗಿದೆ. ಈಗ ಪುನಃ ಈ ಪ್ರದೇಶದಲ್ಲಿ ಭಾರೀ ಮಳೆ ಮುನ್ಸೂಚನೆ ಕೊಡಲಾಗಿದೆ. ಮುಲ್ಲಪೆರಿಯಾರ್ ಅಣೆಕಟ್ಟು ಅತ್ಯಂತ ದುರ್ಬಲಗೊಂಡಿದ್ದು, ಅದರ ಕಾರ್ಯಾಚರಣೆ ಸ್ಥಗಿತಗೊಳಿಸಬೇಕು, ಅದರ ಜಾಗದಲ್ಲಿ ಹೊಸ ಅಣೆಕಟ್ಟು ನಿರ್ಮಾಣ ಮಾಡಬೇಕು ಎಂದು ಕೇರಳ ಸರ್ಕಾರ ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಿಕೆ ಮಾಡಿದೆ. ಬುಧವಾರ ಈ ಅರ್ಜಿಯ ವಿಚಾರಣೆ ಕೋರ್ಟ್ನಲ್ಲಿ ನಡೆದಿತ್ತು.
ಮುಲ್ಲಪೆರಿಯಾರ್ ಅಣೆಕಟ್ಟು ಕೆಳ ಪಾತ್ರದಲ್ಲಿ 5 ಜಿಲ್ಲೆಗಳ 30 ಲಕ್ಷಕ್ಕೂ ಅಧಿಕ ಜನರು ವಾಸವಾಗಿದ್ದಾರೆ. ಅಣೆಕಟ್ಟಿನಿಂದ ನೀರನ್ನು ಹೊರಬಿಡುವಂತೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಭಾನುವಾರ ತಮಿಳುನಾಡು ಮುಖ್ಯಮಂತ್ರಿ ಎಂ. ಕೆ. ಸ್ಟಾಲಿನ್ರನ್ನು ಒತ್ತಾಯಿಸಿದ್ದರು.
ತಮಿಳುನಾಡು, ಕೇರಳ ಮತ್ತು ಮಾಹೆ ಪ್ರದೇಶದಲ್ಲಿ ಅಕ್ಟೋಬರ್ 28 ರಿಂದ ನವೆಂಬರ್ 1ರ ತನಕ, ಅಕ್ಟೋಬರ್ 28 ರಿಂದ 31ರ ತನಕ ಆಂಧ್ರ ಪ್ರದೇಶದ ಕರಾವಳಿಯಲ್ಲಿ, ಕರ್ನಾಟಕದ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಅಕ್ಟೋಬರ್ 31ರ ತನಕ ಮಳೆಯ ಮುನ್ಸೂಚನೆ ನೀಡಲಾಗಿದೆ.
ಬಂಗಾಳಕೊಲ್ಲಿಯ ನೈಋತ್ಯ ಭಾಗದಲ್ಲಿ ವಾಯುಭಾರ ಕುಸಿದ ಸೂಚನೆ ಕಂಡುಬಂದಿದೆ. ಇದು ಮುಂದಿನ 48 ಗಂಟೆಗಳಲ್ಲಿ ಪಶ್ಚಿಮಕ್ಕೆ ಸಾಗುವ ನಿರೀಕ್ಷೆ ಇದೆ. ಇದರ ಪರಿಣಾಮವಾಗಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಗುಡುಗು, ಸಿಡಿಲು ಸಹಿತ ಮಳೆ ಕೇರಳ, ಮಾಹೆ, ತಮಿಳುನಾಡು, ಪುದುಚೇರಿ, ಆಂಧ್ರ ಪ್ರದೇಶ ಕರಾವಳಿಯಲ್ಲಿ ಸುರಿಯಲಿದೆ ಎಂದು ಮುನ್ಸೂಚನೆ ಕೊಡಲಾಗಿದೆ. ದೇಶದ ಉಳಿದ ಭಾಗದಲ್ಲಿ ಒಣಹವೆ ಮುಂದುವೆಯಲಿದೆ ಎಂದು ಅಂದಾಜಿಸಲಾಗಿದೆ.
ಕರ್ನಾಟಕದಲ್ಲಿ ಮಳೆ; ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡಿನ 14 ಜಿಲ್ಲೆಗಳಲ್ಲಿ ಅಕ್ಟೋಬರ್ 30 ಮತ್ತು 31ರಂದು ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ ಯೆಲ್ಲೊ ಅಲರ್ಟ್ ಘೋಷಣೆ ಮಾಡಲಾಗಿದೆ.
ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರೆಯಲಿದೆ. ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಈಗಾಗಲೇ ಮಳೆಯಾಗುತ್ತಿದ್ದು, ಜಲಾಶಯಗಳಿಗೆ ಒಳಹರಿವು ಹೆಚ್ಚಿದೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿರುವ ಕೆಆರ್ಎಸ್ ಜಲಾಶಯ ಸಹ ಭರ್ತಿಯಾಗುವ ಹಂತದಲ್ಲಿದೆ.












Click it and Unblock the Notifications