ಹೂಡಿಕೆ ಇಲ್ಲ, ಉದ್ಯೋಗ ಸೃಷ್ಟಿ ಆಗಿಲ್ಲ, ಸ್ವಜನ ಪಕ್ಷಪಾತವೇ ಎಲ್ಲ ಎಂದ ಡಾ.ಸಿ.ಎನ್. ಅಶ್ವಥ್ ನಾರಾಯಣ
ಬೆಂಗಳೂರು, ಮಾ. 19: ಕೇರಳದ ಎಲ್ಡಿಎಫ್ ಸರ್ಕಾರ ಎಲ್ಲ ಕ್ಷೇತ್ರಗಳಲ್ಲೂ ವಿಫಲವಾಗಿದೆ. ದುರಾಡಳಿತ ಮತ್ತು ಸ್ವಜನ ಪಕ್ಷಪಾತದಿಂದ ರಾಜ್ಯವು ಇತರೆ ಎಲ್ಲ ರಾಜ್ಯಗಳಿಗಿಂತ ಹಿಂದೆ ಬಿದ್ದಿದೆ ಎಂದು ಕೇರಳದ ಬಿಜೆಪಿ ಸಹ ಉಸ್ತುವಾರಿ, ಡಿಸಿಎಂ ಡಾ.ಸಿ.ಎನ್. ಅಶ್ವಥ್ ನಾರಾಯಣ ಅವರು ಆರೋಪಿಸಿದ್ದಾರೆ.
ತಿರುವನಂತಪುರದಲ್ಲಿ ಶುಕ್ರವಾರ ಬೆಳಿಗ್ಗೆ ಪ್ರಚಾರದ ವಿಡಿಯೋಗಳನ್ನು ಬಿಡುಗಡೆ ಮಾಡಿ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹಾಗೂ ಎಲ್ಡಿಎಫ್ ಸರ್ಕಾದ ವಿರುದ್ಧ ಅವರು ವಾಗ್ದಾಳಿ ನಡೆಸಿದರು.
ಎಲ್ಡಿಎಫ್ ಸರಕಾರ ಎಲ್ಲ ಕ್ಷೇತ್ರಗಳಲ್ಲಿ ವೈಫಲ್ಯತೆ ಹೊಂದಿದೆ ಮಾತ್ರವಲ್ಲ, ರಾಜ್ಯದಲ್ಲಿ ಹೂಡಿಕೆಗೆ ಪೂರಕವಾದ ವಾತಾವರಣ ನಿರ್ಮಿಸುವಲ್ಲಿ ಸಂಪೂರ್ಣ ಸೋತಿದೆ. ಉದ್ಯೋಗ ಸೃಷ್ಟಿಯಲ್ಲಿ ಘೋರವಾಗಿ ವಿಫಲವಾಗಿದೆ. ಹೀಗಾಗಿ ಕೇರಳದ ವಿದ್ಯಾವಂತ ಯುವ ಜನರು ಕೆಲಸಕ್ಕಾಗಿ ಬೇರೆ ಬೇರೆ ಕಡೆ ಹೋಗಬೇಕಾದ ಪರಿಸ್ಥಿತಿಯನ್ನು ಸೃಷ್ಟಿಸಲಾಗಿದೆ ಎಂದು ಡಿಸಿಎಂ ಡಾ. ಅಶ್ವಥ್ ನಾರಾಯಣ ದೂರಿದ್ದಾರೆ.
ಎಲ್ಲ ಕ್ಷೇತ್ರಗಳಲ್ಲಿ ಎಲ್ಡಿಎಫ್ ಸರ್ಕಾರ ವಿಫಲ
ಇಡೀ ದೇಶವೇ ಮುಮ್ಮುಖವಾಗಿ ಚಲಿಸುತ್ತ ಕೈಗಾರಿಕೆ, ಉದ್ಯೋಗ, ಕೃಷಿ ಮುಂತಾದ ಕ್ಷೇತ್ರಗಳಲ್ಲಿ ಅಗಾಧ ಸುಧಾರಣೆಗಳನ್ನು ತಂದು ಜನರಿಗೆ ಒಳ್ಳೆಯದು ಮಾಡುತ್ತಿದ್ದರೆ, ಕೇರಳ ಹಿಮ್ಮುಖವಾಗಿ ಚಲಿಸುತ್ತಿದೆ. ಅಂದರೆ, ಅಭಿವೃದ್ಧಿಗೆ ವಿರುದ್ಧವಾಗಿ ಚಲಿಸುತ್ತಿದೆ. ಕೃಷಿಯಲ್ಲಿ ಸ್ವಾವಲಂಭಿಯಗಿದ್ದ ರಾಜ್ಯವನ್ನು ಹಾಳುಗೆಡವಿದೆ. ಎಲ್ಡಿಎಫ್ ಸರಕಾರವು ಜನರ ಆಶೋತ್ತರಗಳನ್ನು ಗಾಳಿಗೆ ತೂರಿ ಸವಕಲು, ಅಪ್ರಸ್ತುತ ವಿಚಾರಗಳ ಮೂಲಕ ರಾಜ್ಯವನ್ನು ಕತ್ತಲೆಯಲ್ಲಿಟ್ಟಿದೆ ಎಂದು ಡಾ. ಅಶ್ವಥ್ ನಾರಾಯಣ ಅವರು ವಾಗ್ದಾಳಿ ನಡೆಸಿದರು.
ಕೇರಳದಲ್ಲಿ 42 ಸ್ಥಾನ ಗೆದ್ದರೂ ಬಿಜೆಪಿ ಸರ್ಕಾರ ಸ್ಥಾಪನೆ ಸಾಧ್ಯ!
ಸ್ವಜನ ಪಕ್ಷಪಾತದ ವಿಜೃಂಭಣೆ
ಕೇರಳ ಸರಕಾರ ಹಾಗೂ ಆಡಳಿತಾರೂಢ ಪಕ್ಷಗಳು ಸಂಪೂರ್ಣವಾಗಿ ಸ್ವಜನ ಪಕ್ಷಪಾತದಲ್ಲಿ ಮುಳುಗಿವೆ. ನಾವು-ನಮಗೆ ಬೇಕಾದವರು ಎಂಬ ನೀತಿಯಡಿಯಲ್ಲಿ ಸರಕಾರ ಕೆಲಸ ಮಾಡುತ್ತಿದೆ ಎಂದು ಆರೋಪಿಸಿದ ಡಾ. ಅಶ್ವಥ್ ನಾರಾಯಣ ಅವರು, ಸರಕಾರದ ಎಲ್ಲ ಹಂತಗಳಲ್ಲೂ ಸ್ವಜನ ಪಕ್ಷಪಾತ ವಿಜೃಂಭಿಸುತ್ತಿದೆ. ಆಡಳಿತದ ಎಲ್ಲ ಮಟ್ಟದಲ್ಲಿ, ಸರಕಾರಿ ಸಂಸ್ಥೆಗಳಲ್ಲಿ ಸರಕಾರವು ತನ್ನ ಪಕ್ಷದ ಕಾರ್ಯಕರ್ತರು, ನಾಯಕರನ್ನು ತುಂಬಿದೆ. ಇದರಿಂದ ರಾಜ್ಯದ ಅಭಿವೃದ್ಧಿ ಕುಂಠಿತವಾಗಿದೆ ಎಂದರು.
ಕೇರಳ ಸರ್ಕಾರದಿಂದ ಅಧಿಕಾರ ದುರುಪಯೋಗ
ಜನತೆಯಿಂದ ಅಧಿಕಾರಕ್ಕೆ ಬಂದಿರುವ ಸರಕಾರವು ಜನಾದೇಶವನ್ನು ಮರೆತು ಅಧಿಕಾರ ದುರುಪಯೋಗ ಮಾಡಿಕೊಳ್ಳುತ್ತಿರುವುದು ಅತ್ಯಂತ ಬೇಸರದ ಸಂಗತಿ. ಜನರಿಗೆ ಹೇಳಿದ್ದು ಒಂದು, ಮಾಡಿದ್ದು ಇನ್ನೊಂದು. ಎಲ್ಲ ರೀತಿಯಲ್ಲೂ ಎಲ್ಡಿಎಫ್ ಸರ್ಕಾರ ಜನರಿಗೆ ವಿರುದ್ಧವಾಗಿ ಕೆಲಸ ಮಾಡಿದೆ. ಜನರಿಗೆ ಉದ್ಯೋಗ ನೀಡಬೇಕಿದ್ದ ಸರಕಾರ ತನ್ನ ಕಾರ್ಯಕರ್ತರಿಗೆ ಕೆಲಸ ಕೊಟ್ಟಿದೆ ಎಂದು ಡಾ. ಅಶ್ವಥ್ ನಾರಾಯಣ ಗಂಭೀರ ಆರೋಪ ಮಾಡಿದ್ದಾರೆ.
ಪಾರ್ಟಿ ಸರ್ವೀಸ್ ಕಮೀಷನ್
ಸ್ವಜನ ಪಕ್ಷಪಾತ ಅದೆಷ್ಟರ ಮಟ್ಟಿಗೆ ಇದೆ ಎಂದರೆ, ʼಕೇರಳ ಪಬ್ಲಿಕ್ ಸರ್ವೀಸ್ ಕಮೀಷನ್ʼ ಈಗ ʼಪಾರ್ಟಿ ಸರ್ವೀಸ್ ಕಮೀಷನ್ʼ ಆಗಿಬಿಟ್ಟಿದೆ. ಎಲ್ಲ ನಿಯಮಗಳನ್ನು ಗಾಳಿಗೆ ತೂರಿ ಬೇಕಾದರವರನ್ನು ಸರ್ಕಾರಿ ಹುದ್ದೆಗಳಿಗೆ ನೇಮಕ ಮಾಡಿಕೊಳ್ಳುತ್ತಿದ್ದಾರೆ. ಇದರಿಂದ ಅರ್ಹರಿಗೆ ಅನ್ಯಾಯವಾಗಿದೆ ಎಂದರು.
ಇಷ್ಟೆಲ್ಲ ವೈಫಲ್ಯಗಳನ್ನು ಕಂಡಿರುವ ಎಲ್ಡಿಎಫ್ ಸರಕಾರವನ್ನು ತೊಲಗಿಸಬೇಕಾಗಿದೆ. ಅಭಿವೃದ್ಧಿಗೆ ಮಾರಕವಾಗಿರುವ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಕೂಟವನ್ನು ಸೋಲಿಸಬೇಕಾಗಿದೆ ಎಂದು ಇದೇ ಸಂದರ್ಭದಲ್ಲಿ ಡಾ. ಅಶ್ವಥ್ ನಾರಾಯಣ ಹೇಳಿದರು. ಚುನಾವಣಾ ನಿರ್ವಹಣಾ ಸಮಿತಿಯ ಮುಖ್ಯಸ್ಥರಾದ ಜಾರ್ಜ್ ಕುರಿಯನ್ ಈ ಸಂದರ್ಭದಲ್ಲಿ ಹಾಜರಿದ್ದರು.