ಕೇರಳದಲ್ಲಿ ಕೊರೊನಾ ನಿಯಂತ್ರಣಕ್ಕೆ ಯಾವುದೇ ಕ್ರಮ ಕೈಗೊಂಡಿಲ್ಲ: ಕೇಂದ್ರ
ತಿರುವನಂತಪುರಂ, ಜುಲೈ 27: ಕೇರಳದಲ್ಲಿ ಕೊರೊನಾ ಸೋಂಕು ನಿಯಂತ್ರಣಕ್ಕೆ ತರಲು ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಹೀಗಾಗಿ ದೇಶದ ಒಟ್ಟು ಕೊರೊನಾ ಸೋಂಕಿತರಲ್ಲಿ ಶೇ.50ರಷ್ಟು ಪ್ರಕರಣಗಳು ಕೇರಳದಲ್ಲಿ ವರದಿಯಾಗುತ್ತಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.
ಮಹಾರಾಷ್ಟ್ರದಲ್ಲೂ ಇಂತಹುದೇ ವಾತಾವರಣ ನಿರ್ಮಾಣವಾಗಿದೆ. ಕೇರಳದಲ್ಲಿ ಕೊರೊನಾ ಸೋಂಕು ನಿಯಂತ್ರಣಕ್ಕೆ ತರುವುದಕ್ಕಿಂತ ಸೋಂಕಿತರ ಚಿಕಿತ್ಸೆಗೆ ಹೆಚ್ಚು ಗಮನ ನೀಡಲಾಗುತ್ತಿದೆ. ದೇಶದ ಒಟ್ಟು ಪ್ರಕರಣಗಳಲ್ಲಿ ಶೇ.50ರಷ್ಟು ಪ್ರಕರಣಗಳು ಕೇರಳ ಹಾಗೂ ಮಹಾರಾಷ್ಟ್ರದಲ್ಲಿ ವರದಿಯಾಗಿದೆ.
ಕಳೆದ ಕೆಲವು ವಾರಗಳಿಂದ ಕೇರಳದಲ್ಲಿ ಅತಿ ಹೆಚ್ಚು ಪ್ರಕರಣಗಳು ವರದಿಯಾಗುತ್ತಿವೆ. ಜುಲೈ 26ರಂದು 11,586 ಪ್ರಕರಣಗಳು ಪತ್ತೆಯಾಗಿದ್ದು 135 ಮಂದಿ ಮೃತಪಟ್ಟಿದ್ದಾರೆ. ಆರೋಗ್ಯ ಸಚಿವರಾದ ವೀಣಾ ಜಾರ್ಜ್ ನೀಡಿರುವ ಮಾಹಿತಿ ಪ್ರಕಾರ ಕೇಳರದಲ್ಲಿ ಲಸಿಕೆಯ ಅಭಾವವಿದ್ದು, ತಿರುವನಂತಪುರಂ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಲಸಿಕೆ ವಿತರಣೆಯನ್ನು ಸ್ಥಗಿತಗೊಳಿಸಲಾಗಿದೆ.

ತಿರುವನಂತಪುರಂ ನಿವಾಸಿಗರಲ್ಲಿ ಫ್ಲಾವಿ ವೈರಸ್ ಪತ್ತೆಯಾಗಿದ್ದು, ಜ್ವರ, ತಲೆನೋವು, ಮೈಕೈ ನೋವು ಚರ್ಮದ ಮೇಲೆ ಕಲೆಗಳ ಲಕ್ಷಣಗಳು ಜೋರಾಗಿವೆ. ''ಸೊಳ್ಳೆಗಳ ಮೂಲಕ ಹರಡುವ ಈ ಸೋಂಕು, ಗರ್ಭಿಣಿಯರಲ್ಲಿ ಕಾಣಿಸಿಕೊಂಡಲ್ಲಿ ಶಿಶುವಿನ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆ ಹೆಚ್ಚಿದೆ," ಎಂದು ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್ ಹೇಳಿದ್ದಾರೆ.
ಕೇರಳದ ಜತೆಗೆ ಮಹಾರಾಷ್ಟ್ರದಲ್ಲಿಯೂ ಕೊರೊನಾ ಸೋಂಕಿನ ಪ್ರಕರಣಗಳು ಮತ್ತೆ ನಿಧಾನವಾಗಿ ಏರಿಕೆ ಕಾಣುತ್ತಿವೆ. ಕೊಲ್ಹಾಪುರ, ಪುಣೆ ಗ್ರಾಮೀಣ, ಸಾಂಗ್ಲಿ, ಸತಾರ, ರತ್ನಗಿರಿ, ಸಿಂಧುದುರ್ಗ್, ರಾಯಗಢ ಮತ್ತು ಪಾಲ್ಘರ್ ಜಿಲ್ಲೆಗಳಲ್ಲಿ ಪಾಸಿಟಿವಿಟಿ ದರವು ರಾಜ್ಯದ ಸರಾಸರಿಗಿಂತ ಹೆಚ್ಚಿದೆ. ಈ ನಿಟ್ಟಿನಲ್ಲಿ ಕಾಂಟ್ಯಾಕ್ಟ್ ಟ್ರೇಸಿಂಗ್, ಸಂಚಾರಗಳಿಗೆ ಕಠಿಣ ನಿರ್ಬಂಧ ಹೇರುವಂತೆ ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ವಿಶೇಷ ಲಸಿಕಾ ಅಭಿಯಾನ ನಡೆಸಿ , ಪ್ರಕರಣಗಳ ಸಂಖ್ಯೆ ನಿಯಂತ್ರಣ ತಪ್ಪದಂತೆ ಎಚ್ಚರಿಕೆ ವಹಿಸಲು ಅಧಿಕಾರಿಗಳಿಗೆ ಸಿಎಂ ನಿರ್ದೇಶಿಸಿದ್ದಾರೆ.












Click it and Unblock the Notifications