ಕೇರಳದ ರಾಜ್ಯಪಾಲ ಆರಿಫ್ ಖಾನ್ ರಿಗೆ ಕೊರೊನಾವೈರಸ್
ತಿರುವನಂತಪುರಂ, ನವೆಂಬರ್.07: ಕೇರಳದ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಈ ಕುರಿತು ಸ್ವತಃ ರಾಜ್ಯಪಾಲರೇ ಟ್ವೀಟ್ ಮಾಡಿದ್ದಾರೆ.
"ನನಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ಪತ್ತೆಯಾಗಿದೆ. ಆದರೆ ನನ್ನಲ್ಲಿ ಸೋಂಕಿಗೆ ಸಂಬಂಧಿಸಿದ ಯಾವುದೇ ಲಕ್ಷಣಗಳು ಇರಲಿಲ್ಲ. ಕಳೆದ ವಾರ ನವದೆಹಲಿಗೆ ತೆರಳಿದ ಸಂದರ್ಭದಲ್ಲಿ ನನ್ನ ಸಂಪರ್ಕಕ್ಕೆ ಬಂದ ಪ್ರತಿಯೊಬ್ಬರು ತಮ್ಮ ಆರೋಗ್ಯದ ಬಗ್ಗೆ ಹೆಚ್ಚಿನ ಗಮನ ಹರಿಸಬೇಕು. ಅಗತ್ಯವಿದ್ದಲ್ಲಿ ಕೊರೊನಾವೈರಸ್ ಸೋಂಕಿನ ತಪಾಸಣೆಯನ್ನು ಮಾಡಿಸಿಕೊಳ್ಳಿ" ಎಂದು ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಮನವಿ ಮಾಡಿಕೊಂಡಿದ್ದಾರೆ.
ಕೇರಳದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ ಈಗಾಗಲೇ 4.73 ಲಕ್ಷದ ಗಡಿ ದಾಟಿದೆ. 3,88,504 ಸೋಂಕಿತರು ಗುಣಮುಖರಾಗಿದ್ದರೆ, 83028 ಸಕ್ರಿಯ ಪ್ರಕರಣಗಳಿವೆ. ರಾಜ್ಯದಲ್ಲಿ ಈವರೆಗೂ ಮಹಾಮಾರಿಗೆ 1641 ಮಂದಿ ಪ್ರಾಣ ಬಿಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಭಾರತದಲ್ಲಿ ಕೊರೊನಾವೈರಸ್ ಪರಿಸ್ಥಿತಿ ಹೇಗಿದೆ:
ದೇಶದಲ್ಲಿ ಒಂದೇ ದಿನ 50357 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಕಳೆದ 24 ಗಂಟೆಗಳಲ್ಲಿ 53,920 ಮಂದಿ ಕೊರೊನಾವೈರಸ್ ಸೋಂಕಿತರು ಗುಣಮುಖರಾಗಿದ್ದು, 577 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ದೇಶಾದ್ಯಂತ ಕೊವಿಡ್-19 ಸೋಂಕಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಮಾಹಿತಿ ನೀಡಿದೆ. ಭಾರತದಲ್ಲಿ ಒಟ್ಟು ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ 84,62,081ಕ್ಕೆ ಏರಿಕೆಯಾಗಿದೆ. ಮಹಾಮಾರಿಗೆ ದೇಶದಲ್ಲಿ ಈವರೆಗೂ 1,25,562 ಮಂದಿ ಪ್ರಾಣ ಬಿಟ್ಟಿದ್ದಾರೆ. 78,19,887 ಕೊವಿಡ್-19 ಸೋಂಕಿತರು ಗುಣಮುಖರಾಗಿದ್ದು, ಉಳಿದಂತೆ 5,16,632 ಸಕ್ರಿಯ ಪ್ರಕರಣಗಳಿವೆ.











Click it and Unblock the Notifications