ಕೇರಳದಲ್ಲಿ ಮದುವೆಗೂ, ಮಸಣಕೂ ನಿಯಮ: 75ಕ್ಕಿಂತ ಹೆಚ್ಚು ಮಂದಿ ಸೇರುವ ಹಾಗಿಲ್ಲ!
ತಿರುವನಂತಪುರಂ, ಜನವರಿ 4: ಕೇರಳದಲ್ಲಿ ಕೊರೊನಾವೈರಸ್ ಹೊಸ ರೂಪಾಂತರಿ ಒಮಿಕ್ರಾನ್ ಸೋಂಕಿತ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆ ಸಾರ್ವಜನಿಕ ಮತ್ತು ಖಾಸಗಿ ಕಾರ್ಯಕ್ರಮಗಳ ಮೇಲೆ ನಿಯಂತ್ರಣ ವಿಧಿಸುವುದಕ್ಕೆ ರಾಜ್ಯ ಸರ್ಕಾರ ನಿರ್ಧರಿಸಿದೆ.
ಮದುವೆ, ಅಂತ್ಯಕ್ರಿಯೆ ಸೇರಿದಂತೆ ಒಳಾಂಗಣದಲ್ಲಿ ನಡೆಯುವ ಎಲ್ಲ ಸಾಮಾಜಿಕ, ರಾಜಕೀಯ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಗರಿಷ್ಠ 75 ಮಂದಿ ಭಾಗವಹಿಸುವುದಕ್ಕೆ ಮಾತ್ರ ಅನುಮತಿ ನೀಡಲಾಗುತ್ತದೆ. ಹೊರಾಂಗಣ ಪ್ರದೇಶಗಳಲ್ಲಿ ನಡೆಯುವ ಕಾರ್ಯಕ್ರಮಗಳಲ್ಲಿ ಗರಿಷ್ಠ 150 ಮಂದಿ ಭಾಗವಹಿಸಲು ಅವಕಾಶ ನೀಡಲಾಗುತ್ತಿದೆ.
ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ನೇತೃತ್ವದಲ್ಲಿ ನಡೆದ ಕೊರೊನಾವೈರಸ್ ಪರಿಸ್ಥಿತಿ ಪರಿಶೀಲನಾ ಸಭೆಯಲ್ಲಿ ಸಾಂಕ್ರಾಮಿಕ ಪಿಡುಗಿನ ಕುರಿತು ಚರ್ಚೆ ನಡೆಸಲಾಯಿತು. ರಾಜ್ಯದಲ್ಲಿ ಕೊವಿಡ್-19 ಅಂಕಿ-ಅಂಶಗಳನ್ನು ಗಮನದಲ್ಲಿ ಇಟ್ಟುಕೊಂಡು ಈ ನಿರ್ಧಾರ ತೆಗೆದುಕೊಳ್ಳಲಾಯಿತು.
ವಿಮಾನ ನಿಲ್ದಾಣಗಳಲ್ಲಿ ಕೊವಿಡ್19 ಪರೀಕ್ಷೆ:
ರಾಜ್ಯದ ಎಲ್ಲಾ ವಿಮಾನ ನಿಲ್ದಾಣಗಳಲ್ಲಿ ಕೊವಿಡ್-19 ಲಕ್ಷಣಗಳನ್ನು ಹೊಂದಿರುವವರಿಗೆ ಪರೀಕ್ಷೆ ನಡೆಸುವುದಕ್ಕೆ ಸಭೆಯಲ್ಲಿ ತೀರ್ಮಾನಿಸಲಾಯಿತು. ಇದರ ಜೊತೆಗೆ ಕೊರೊನಾವೈರಸ್ ಸೋಂಕು ತಗುಲಿದ ವ್ಯಕ್ತಿಗಳಿಗೆ ಯಾವ ರೀತಿ ಚಿಕಿತ್ಸೆ ನೀಡಬೇಕು, ಹೋಮ್ ಕ್ವಾರಂಟೇನ್ ಆಗಿರುವವರಿಗೆ ಯಾವ ರೀತಿ ಚಿಕಿತ್ಸೆ ಒದಗಿಸಬೇಕು ಎಂಬುದಕ್ಕೆ ಸಂಬಂಧಿಸಿದಂತೆ ಶೀಘ್ರದಲ್ಲೇ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಮಾರ್ಗಸೂಚಿಯನ್ನು ಪ್ರಕಟಿಸಲಿದೆ ಎಂದು ಹೇಳಲಾಗಿದೆ.
ಕೊವಿಡ್-19 ಮೃತರ ಕುಟುಂಬಕ್ಕೆ ಪರಿಹಾರ:
ಕೊರೊನಾವೈರಸ್ ಸೋಂಕಿನಿಂದ ಪ್ರಾಣ ಬಿಟ್ಟವರ ಕುಟುಂಬದವರು ಸಾಧ್ಯವಾದಷ್ಟು ಬೇಗ ಪರಿಹಾರಕ್ಕಾಗಿ ಅರ್ಜಿ ಸಲ್ಲಿಸಬೇಕು. ಈಗಾಗಲೇ ಸಲ್ಲಿಕೆ ಆಗಿರುವ ಅರ್ಜಿಗಳ ಬಗ್ಗೆ ಅಧಿಕಾರಿಗಳು ಯಾವುದೇ ರೀತಿ ವಿಳಂಬ ಧೋರಣೆ ತೋರುವಂತಿಲ್ಲ. ಕೊವಿಡ್-19 ಸೋಂಕಿನಿಂದ ಮೃತಪಟ್ಟ ಸಂತ್ರಸ್ತರ ಕುಟುಂಬಕ್ಕೆ ಆರ್ಥಿಕ ನೆರವು ನೀಡಲಾಗುವುದು ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಸೂಚನೆ ನೀಡಿದ್ದಾರೆ.
ಶೇ.80ರಷ್ಟು ಫಲಾನುಭವಿಗಳಿಗೆ 2 ಡೋಸ್ ಲಸಿಕೆ:
ಕೇರಳದಲ್ಲಿ ಕೊರೊನಾವೈರಸ್ ಲಸಿಕೆಯ ಅರ್ಹ ಫಲಾನುಭವಿಗಳ ಪೈಕಿ ಶೇ.80ರಷ್ಟು ಜನರಿಗೆ ಎರಡೂ ಡೋಸ್ ಲಸಿಕೆಯನ್ನು ವಿತರಿಸಲಾಗಿದೆ. ರಾಜ್ಯದಲ್ಲಿ 15.43 ಮಕ್ಕಳಿಗೆ ಕೊವಿಡ್-19 ಲಸಿಕೆ ನೀಡಬೇಕಾಗಿದ್ದು, ಈಗಾಗಲೇ ಶೇ.02ರಷ್ಟು ಮಕ್ಕಳಿಗೆ ಲಸಿಕೆಯನ್ನು ನೀಡಲಾಗಿದೆ. ಇದರ ಹೊರತಾಗಿ ಕೇರಳದಲ್ಲಿ 181 ಕೊರೊನಾವೈರಸ್ ಹೊಸ ರೂಪಾಂತರಿ ಓಮಿಕ್ರಾನ್ ಸೋಂಕಿತ ಪ್ರಕರಣಗಳು ವರದಿಯಾಗಿವೆ ಎಂದು ಸರ್ಕಾರದ ಅಂಕಿ-ಅಂಶಗಳಿಂದ ತಿಳಿದು ಬಂದಿದೆ.
ಕೇರಳದಲ್ಲಿ ಕೊರೊನಾವೈರಸ್ ಪ್ರಕರಣ:
ಕೇರಳದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಮೂರನೇ ಅಲೆ ಭೀತಿ ನಡುವೆ ಪ್ರಕರಣಗಳ ಸಂಖ್ಯೆಯೂ ಏರಿಕೆ ಆಗುತ್ತಿದೆ. ರಾಜ್ಯದಲ್ಲಿ ಒಂದೇ ದಿನ 7,000ಕ್ಕೂ ಹೆಚ್ಚು ಸೋಂಕಿತ ಪ್ರಕರಣಗಳು ವರದಿಯಾಗಿವೆ. ಕಳೆದ 24 ಗಂಟೆಗಳಲ್ಲಿ 7,167 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ದೃಢಪಟ್ಟಿದೆ. ಇದೇ ಅವಧಿಯಲ್ಲಿ 167 ಮಂದಿ ಮಹಾಮಾರಿಗೆ ಬಲಿಯಾಗಿದ್ದು, 6,439 ಸೋಂಕಿತರು ಗುಣಮುಖರಾಗಿದ್ದಾರೆ. ಇದರ ಹೊರತಾಗಿ ರಾಜ್ಯದಲ್ಲಿ ಈವರೆಗೂ 49,68,657 ಕೊರೊನಾವೈರಸ್ ಸೋಂಕಿತ ಪ್ರಕರಣಗಳು ಪತ್ತೆಯಾಗಿವೆ. ಈ ಪೈಕಿ 48,57,181 ಸೋಂಕಿತರು ಗುಣಮುಖರಾಗಿದ್ದರೆ, 31,681 ಮಂದಿ ಸೋಂಕಿನಿಂದ ಪ್ರಾಣ ಬಿಟ್ಟಿದ್ದಾರೆ. 79,266 ಕೊವಿಡ್-19 ಸಕ್ರಿಯ ಪ್ರಕರಣಗಳಿವೆ ಎಂದು ಕೇರಳದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
Recommended Video