ಲಕ್ಷದ್ವೀಪ ಆಡಳಿತ ಸುಧಾರಣೆ ಪ್ರಶ್ನಿಸಿ ಸಲ್ಲಿಸಿದ್ದ ಮನವಿ ತಿರಸ್ಕರಿಸಿದ ಕೇರಳ ಹೈಕೋರ್ಟ್
ಕೊಚ್ಚಿ, ಜೂ. 17: ಲಕ್ಷದ್ವೀಪ ಆಡಳಿತ ಸುಧಾರಣೆಗಳನ್ನು ಪ್ರಶ್ನಿಸಿ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು ಕೇರಳ ಹೈಕೋರ್ಟ್ ತಿರಸ್ಕರಿಸಿದೆ.
ಲಕ್ಷದ್ವೀಪ ಅಭಿವೃದ್ಧಿ ಪ್ರಾಧಿಕಾರದ ಕರಡು ನಿಯಮಗಳನ್ನು ಪ್ರಶ್ನಿಸಿ ಕೆಪಿಸಿಸಿ ಪದಾಧಿಕಾರಿ ನೌಶಾದ್ ಆಲಿ ಸಲ್ಲಿಸಿದ್ದ ಮನವಿಯನ್ನು ಕೇರಳ ಹೈಕೋರ್ಟ್ನ ವಿಭಾಗೀಯ ಪೀಠ ತಿರಸ್ಕರಿಸಿತು.
ಲಕ್ಷದ್ವೀಪ ಆಡಳಿತಾಧಿಕಾರಿ ಪ್ರಫುಲ್ ಉಚ್ಚಾಟನೆಗೆ ಕೇರಳ ವಿಧಾನಸಭೆ ನಿರ್ಣಯ
ಆಡಳಿತ ಸುಧಾರಣಾ ಪ್ರಸ್ತಾಪಗಳ ಕರಡು ಮಾತ್ರ ಪ್ರಸ್ತುತ ಲಭ್ಯವಿದೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ. ಆಡಳಿತ ಸುಧಾರಣೆಗಳ ಬಗ್ಗೆ ದೂರುದಾರರು ಕೂಡಲೇ ತಡೆಯಾಜ್ಞೆ ಕೋರಿದ್ದಾರೆ. ಆದರೆ ನ್ಯಾಯಾಲಯ ಅದಕ್ಕೆ ಅವಕಾಶ ನೀಡಿಲ್ಲ. ಬದಲಾಗಿ, ವಿವರಣೆ ಕೋರಿ ಕೇಂದ್ರ ಮತ್ತು ಲಕ್ಷದ್ವೀಪ ಆಡಳಿತಕ್ಕೆ ಪತ್ರ ಕಳುಹಿಸಿದೆ.
ಸುಧಾರಣೆಗಳನ್ನು ಮೊದಲ ಹಂತದಲ್ಲಿ ಮಾತ್ರ ಕಾರ್ಯಗತಗೊಳಿಸಲಾಗುತ್ತಿದೆ ಮತ್ತು ಜನರ ಅಭಿಪ್ರಾಯಗಳನ್ನು ಪರಿಗಣಿಸಿದ ನಂತರ ಸುಧಾರಣೆಗಳ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಲಕ್ಷದ್ವೀಪ ಆಡಳಿತ ನ್ಯಾಯಾಲಯದಲ್ಲಿ ವಿವರಿಸಿದೆ.
ಇತ್ತೀಚೆಗೆ ಲಕ್ಷದ್ವೀಪ ಆಡಳಿತಾಧಿಕಾರಿ ಪ್ರಫುಲ್ ಖೋಡಾ ಪಟೇಲ್ ಉಚ್ಚಾಟನೆಗೆ ಕೇರಳ ವಿಧಾನಸಭೆ ನಿರ್ಣಯ ಕೈಗೊಂಡಿದೆ. ಮುಸ್ಲಿಂ ಸಮುದಾಯ ಅಧಿಕವಾಗಿರುವ ಕೇಂದ್ರಾಡಳಿತ ಪ್ರದೇಶವಾದ ಲಕ್ಷದ್ವೀಪದ ಆಡಳಿತಾಧಿಕಾರಿ ಪ್ರಫುಲ್ ಖೋಡಾ ಪಟೇಲ್ ಹೊರಡಿಸಿದ ನೂತನ ಪ್ರಸ್ತಾವನೆಗಳು ರಾಜಕೀಯ ಸ್ವರೂಪ ಪಡೆಯಲು ಕಾರಣವಾಗಿದ್ದಲ್ಲದೇ, ಸ್ಥಳೀಯರ ಆಕ್ರೋಶಕ್ಕೂ ಕಾರಣವಾಗಿದೆ.
ಗೋ ಮಾಂಸ ಮಾರಾಟ ನಿಷೇಧ, ಅಪರಾಧ ಪ್ರಕರಣ ಕಡಿಮೆ ಇರುವ ದ್ವೀಪದಲ್ಲಿ ಗೂಂಡಾ ಕಾಯ್ದೆ ಜಾರಿ, ಇಬ್ಬರಿಗಿಂತ ಹೆಚ್ಚು ಮಕ್ಕಳನ್ನು ಹೊಂದಿರುವ ಪಂಚಾಯತ್ ಆಕಾಂಕ್ಷಿಗಳು ಅನರ್ಹ, ಅಭಿವೃದ್ಧಿ ಯೋಜನೆಗಳಿಗಾಗಿ ಖಾಸಗಿಯವರಿಂದ ಭೂಮಿ ವಶಪಡಿಸಿಕೊಳ್ಳಲು ಅಭಿವೃದ್ಧಿ ಪ್ರಾಧಿಕಾರ ಸ್ಥಾಪನೆ, ಲಕ್ಷದ್ವೀಪಾಭಿವೃದ್ಧಿ ಪ್ರಾಧಿಕಾರ 2021 ರಚನೆ, ಲಕ್ಷದ್ವೀಪದಲ್ಲಿ ಮದ್ಯ ಮಾರಾಟ ನಿಷೇಧ ತೆರವು, ಶಾಲೆಗಳಲ್ಲಿ ಮಧ್ಯಾಹ್ನದ ಬಿಸಿಯೂಟದಲ್ಲಿ ಮಾಂಸಾಹಾರ ನಿಷೇಧವು ಈ ನೂತನ ಪ್ರಸ್ತಾವನೆಯಲ್ಲಿದೆ.
Recommended Video
(ಒನ್ಇಂಡಿಯಾ ಸುದ್ದಿ)