ಕೇರಳದಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಲತಿಕಾ ಸುಭಾಷ್ ಸ್ಪರ್ಧೆ
ತಿರುವನಂತಪುರಂ, ಮಾರ್ಚ್ 16: ಕೇರಳ ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್ ನೀಡಲು ನಿರಾಕರಿಸಿದ ಕಾಂಗ್ರೆಸ್ ವಿರುದ್ಧ ಮಹಿಳಾ ಕಾಂಗ್ರೆಸ್ ಮಾಜಿ ಮುಖ್ಯಸ್ಥೆ ಲತಿಕಾ ಸುಭಾಷ್ ಬಂಡಾಯದ ಬಾವುಟ ಹಾರಿಸಿದ್ದಾರೆ.
ಏಪ್ರಿಲ್ 6ರಂದು ನಡೆಯಲಿರುವ ಕೊಟ್ಟಾಯಂನ ಎತ್ತುಮಾನೂರ್ ವಿಧಾನಸಭಾ ಕ್ಷೇತ್ರದಿಂದ ಸ್ವತಂತ್ರ್ಯ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಲತಿಕಾ ಸುಭಾಷ್ ಘೋಷಿಸಿದ್ದಾರೆ. ಈ ಹಿಂದೆ ಇದೇ ಕ್ಷೇತ್ರದಲ್ಲಿ ಸ್ಪರ್ಧಿಸುವುದಕ್ಕೆ ಕಾಂಗ್ರೆಸ್ ಟಿಕೆಟ್ ನೀಡುವಂತೆ ಬೇಡಿಕೆ ಇಟ್ಟಿದ್ದರು.
ಕೇರಳದಲ್ಲಿ ಕಾಂಗ್ರೆಸ್ ಟಿಕೆಟ್ ಸಿಗದಿದ್ದಕ್ಕೆ ತಲೆ ಬೋಳಿಸಿಕೊಂಡ ಮಹಿಳಾ ಮುಖ್ಯಸ್ಥೆ!
ಕಾಂಗ್ರೆಸ್ ಟಿಕೆಟ್ ನೀಡಲು ನಿರಾಕರಿಸಿದ ಬೆನ್ನಲ್ಲೇ ಮಹಿಳಾ ಕಾಂಗ್ರೆಸ್ ಮುಖ್ಯಸ್ಥ ಸ್ಥಾನಕ್ಕೆ ಲತಿಕಾ ಸುಭಾಷ್ ರಾಜೀನಾಮೆ ಸಲ್ಲಿಸಿದ್ದರು. ಅಲ್ಲದೇ, ಕಾಂಗ್ರೆಸ್ ಪಕ್ಷದ ಕಚೇರಿ ಎದುರಿನಲ್ಲೇ ತಲೆಗೂದಲು ಬೋಳಿಸಿಕೊಳ್ಳುವ ಮೂಲಕ ಪ್ರತಿರೋಧ ತೋರಿದ್ದರು.
ಕಾಂಗ್ರೆಸ್ ನಿರ್ಲಕ್ಷ್ಯದ ಬಗ್ಗೆ ಸೋನಿಯಾ ಗಾಂಧಿಯವರಿಗೆ ಪತ್ರ:
ಕೇರಳದಲ್ಲಿ ಮಹಿಳಾ ಘಟಕದ ಬಗ್ಗೆ ಕಾಂಗ್ರೆಸ್ ನಿರ್ಲಕ್ಷ್ಯವನ್ನು ವಹಿಸಿದೆ ಎಂದು ಎಐಸಿಸಿ ಮುಖ್ಯಸ್ಥೆ ಸೋನಿಯಾ ಗಾಂಧಿ ಅವರಿಗೆ ಲತಿಕಾ ಸುಭಾಷ್ ಪತ್ರ ಬರೆದಿದ್ದರು. ಈ ಪತ್ರದಲ್ಲಿ "ಮಹಿಳಾ ಕಾಂಗ್ರೆಸ್ ಘಟಕವನ್ನು ಸಂಪೂರ್ಣವಾಗಿ ನಿರ್ಲಕ್ಷಿಸಲಾಗುತ್ತಿದೆ. ಮಹಿಳಾ ಘಟಕದ ಮುಖಂಡರು ಮತ್ತು ಕಾರ್ಯಕರ್ತರ ಭಾವನೆಗಳಿಗೆ ಬೆಲೆ ಕೊಡಲಾಗುತ್ತಿಲ್ಲ. ಮಹಿಳಾ ಘಟಕದ ಒಬ್ಬರೇ ಒಬ್ಬ ಕಾರ್ಯಕರ್ತರಿಗೆ ಕೇರಳ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಕ್ಕೆ ಟಿಕೆಟ್ ಘೋಷಿಸಿಲ್ಲ" ಎಂದು ಆರೋಪಿಸಿದ್ದರು.
86 ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೊಳಿಸಿದ ಕಾಂಗ್ರೆಸ್:
ಕೇರಳ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸ್ಪರ್ಧಿಸುತ್ತಿರುವ 92 ಕ್ಷೇತ್ರಗಳ ಪೈಕಿ 86 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿಯನ್ನು ಅಧಿಕೃತವಾಗಿ ಬಿಡುಗಡೆಗೊಳಿಸಲಾಗಿದೆ. ಬಾಕಿ ಉಳಿದ 6 ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿಯನ್ನು ಇನ್ನು ಕೆಲ ದಿನಗಳಲ್ಲೇ ಬಿಡುಗಡೆಗೊಳಿಸಲಾಗುವುದು ಎಂದು ಕಾಂಗ್ರೆಸ್ ರಾಜ್ಯಾಧ್ಯಕ್ಷ ಮುಲ್ಲಪಲ್ಲಿ ರಾಮಚಂದ್ರನ್ ತಿಳಿಸಿದ್ದಾರೆ. ಕಾಂಗ್ರೆಸ್ ಯುವಕರಿಗೆ ಹೆಚ್ಚಿನ ಆದ್ಯತೆಯನ್ನು ನೀಡಿರುವುದು ಮೇಲ್ನೋಟಕ್ಕೆ ಸ್ಪಷ್ಟವಾಗಿ ಗೋಚರಿಸುತ್ತದೆ. 92 ಕಾಂಗ್ರೆಸ್ ಅಭ್ಯರ್ಥಿಗಳ ಪೈಕಿ 46 ಕಾಂಗ್ರೆಸ್ ಅಭ್ಯರ್ಥಿಗಳು 25-50 ವರ್ಷದೊಳಗಿನವರೇ ಆಗಿದ್ದಾರೆ. ಬಾಕಿ ಉಳಿದ ಶೇ.50ರಷ್ಟು ಕ್ಷೇತ್ರಗಳಲ್ಲಿ ಹಿರಿಯರಿಗೆ ಅವಕಾಶ ನೀಡಲಾಗಿದೆ.