Video: ಕೇರಳದ 5 ಜಿಲ್ಲೆಗಳಲ್ಲಿ ರೆಡ್, 7 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್: ಹೇಗಿದೆ ಪರಿಸ್ಥಿತಿ?
ತಿರುವನಂತಪುರಂ, ಅಕ್ಟೋಬರ್ 16: ಅರಬ್ಬಿ ಸಮುದ್ರ ಮತ್ತು ಬಂಗಾಳಕೊಲ್ಲಿ ವಾಯುಭಾರ ಕುಸಿತದಿಂದ ಕೇರಳದಲ್ಲಿ ವರುಣನ ಅಬ್ಬರ ಮಿತಿ ಮೀರಿದೆ. ರಾಜ್ಯದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದ 5 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಹಾಗೂ 7 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಕೇರಳದಲ್ಲಿ ವರುಣನ ಕೋಪಕ್ಕೆ ಜನಜೀವನ ಅಸ್ತವ್ಯಸ್ತಗೊಂಡಿದೆ. ಬಹುಪಾಲು ಪ್ರದೇಶಗಳು, ರಸ್ತೆಗಳು ಜಲಾವೃತಗೊಂಡಿವೆ. ದಕ್ಷಿಣ ಕೇರಳ ಪ್ರದೇಶದಲ್ಲಿ ಸುರಿದ ಮಳೆಗೆ ರಸ್ತೆಗಳು ಜಲಾವೃತಗೊಂಡು ವಾಹನ ಸವಾರರು ಪರದಾಡುವಂತಾ ಸ್ಥಿತಿ ನಿರ್ಮಾಣವಾಗಿದೆ.
ಶನಿವಾರ ಜಲಾವೃತಗೊಂಡ ರಸ್ತೆಯಲ್ಲಿ ಬಸ್ ವೊಂದು ಸಿಲುಕಿದ್ದು ಅದರಲ್ಲಿದ್ದ ಪ್ರಯಾಣಿಕರು ಪ್ರಾಣ ಉಳಿಸಿಕೊಳ್ಳುವುದಕ್ಕೆ ನಡೆಸಿದ ಹೋರಾಟ ಪರಿಸ್ಥಿತಿಗೆ ಹಿಡಿದ ಕೈಗನ್ನಡಿಯಾಗಿದೆ. ಇದರ ಜೊತೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವಿಡಿಯೋಗಳು ಸನ್ನಿವೇಶ ಸಾಕ್ಷೀಕರಿಸುವಂತಿವೆ. ಕೇರಳದಲ್ಲಿ ಮಳೆ ಸೃಷ್ಟಿಸಿದ ಅವಾಂತರ ಮತ್ತು ವಸ್ತುಸ್ಥಿತಿಯ ಕುರಿತು ಒಂದು ವರದಿ ಇಲ್ಲಿದೆ ಓದಿ.

ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಕೇಂದ್ರ ಸೇನೆ
ಕೇರಳ ಸರ್ಕಾರದ ಮನವಿ ಮೇರೆಗೆ ಪ್ರವಾಹ ಪೀಡಿತ ಪ್ರದೇಶಗಳಿಗೆ ಕೇಂದ್ರ ಸೇನೆ ಹಾಗೂ ವಾಯುಪಡೆಯು ರಕ್ಷಣಾ ಕಾರ್ಯಾಚರಣೆಗಾಗಿ ತೆರಳಿವೆ. ರಕ್ಷಣಾ ಕಾರ್ಯಾಚರಣೆಗಾಗಿ ಹೆಲಿಕಾಪ್ಟರ್ ಸನ್ನದ್ಧಗೊಂಡಿದ್ದು, ದಕ್ಷಿಣ ಏರ್ ಕಮಾಂಡ್ ಅಡಿಯಲ್ಲಿರುವ ಎಲ್ಲಾ ನೆಲೆಗಳು ಹೆಚ್ಚಿನ ಎಚ್ಚರಿಕೆ ವಹಿಸಲಾಗಿವೆ. ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಸೇನೆಯು ತನ್ನ ಸಿಬ್ಬಂದಿಯನ್ನು ನಿಯೋಜಿಸಿದೆ. ಪಾಂಗೋಡ್ ಮಿಲಿಟರಿ ನಿಲ್ದಾಣದಿಂದ ಕಂಜೀರಪಲ್ಲಿನ್ ಕೊಟ್ಟಾಯಂ ಜಿಲ್ಲೆಗೆ ಸೇನಾ ಸಿಬ್ಬಂದಿಯನ್ನು ಸ್ಥಳಾಂತರಿಸಲಾಗಿದೆ.
|
ಕೊಟ್ಟಾಯಂ ಜಿಲ್ಲೆಯಲ್ಲಿ ಪ್ರವಾಹ ಪರಿಸ್ಥಿತಿ
ಕೇರಳದಲ್ಲಿ ರೆಡ್ ಅಲರ್ಟ್ ಘೋಷಿಸಿದ ಐದು ಜಿಲ್ಲೆಗಳ ಪೈಕಿ ಕೊಟ್ಟಾಯಂ ಕೂಡಾ ಒಂದಾಗಿದೆ. ಕೊಟ್ಟಾಯಂ ಗ್ರಾಮಾಂತರ ಪ್ರದೇಶಗಳಲ್ಲಿ ಭಾರೀ ಮಳೆ ಎಚ್ಚರಿಕೆಯನ್ನು ನೀಡಿದ್ದು, ಮೊಣಕಾಲುದ್ದ ನಿಂತ ನೀರಿನಲ್ಲಿ ಚಲಿಸಲು ಸಾಧ್ಯವಾಗದೇ ಸ್ಥಳೀಯರು ಕಾರನ್ನು ತಳ್ಳಿಕೊಂಡು ಹೋಗುತ್ತಿರುವುದು ದೃಶ್ಯಗಳಲ್ಲಿ ಸ್ಪಷ್ಟವಾಗಿ ಗೋಚರಿಸುತ್ತಿದೆ. ಇನ್ನೊಂದು ವಿಡಿಯೋದಲ್ಲಿ ಭಾರೀ ಮಳೆಯ ನಡುವೆ ಹಗ್ಗದಿಂದ ವಾಹನವನ್ನು ಹೊರತೆಗೆಯಲು ಪುರುಷರು ಪ್ರಯತ್ನಿಸುತ್ತಿರುವುದು ಗೊತ್ತಾಗಿದೆ.

ರೆಡ್, ಆರೆಂಜ್, ಯೆಲ್ಲೋ ಅಲರ್ಟ್ ಘೋಷಿಸಿದ ಜಿಲ್ಲೆಗಳು?
ಕೇರಳದಲ್ಲಿ ಧಾರಾಕಾರ ಮಳೆಯಿಂದಾಗಿ ಐದು ಜಿಲ್ಲೆಗಳಲ್ಲಿ ರೆಡ್ ಅಲರ್ಟ್, ಏಳು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಹಾಗೂ ಎರಡು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಪಥನಂಥಿಟ್ಟಾ, ಕೊಟ್ಟಾಯಂ, ಎರ್ನಾಕುಳಂ, ಇಡುಕ್ಕಿ, ಥ್ರಿಸುರ್ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ತಿರುವನಂತಪುರಂ, ಕೊಲ್ಲಂ, ಅಲಪ್ಪುಜಾ, ಪಲಕ್ಕದ್, ಮಲಪ್ಪುರಂ, ಕೋಯಿಕ್ಕೋಡ್ ಮತ್ತು ವಯನಾಡ್ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಉಳಿದಂತೆ ಎರಡು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಕೇರಳದ ಜನರಿಗೆ ಎಚ್ಚರಿಕೆ ನೀಡಿದ ಸರ್ಕಾರ
ಕೇರಳದಲ್ಲಿ ಧಾರಾಕಾರ ಮಳೆಯಿಂದ ಬಹುಪಾಲು ಪ್ರದೇಶಗಳಲ್ಲಿ ಪ್ರವಾಹ ಪರಿಸ್ಥಿತಿ ಸೃಷ್ಟಿಯಾಗಿದ್ದು, ಸಾರ್ವಜನಿಕರು ಜಾಗರೂಕತೆಯಿಂದಿರಬೇಕು. ಪರ್ವತ ಮತ್ತು ನದಿ ಹಾಗೂ ಸಮುದ್ರದ ಸುತ್ತಮುತ್ತಲಿನ ಪ್ರದೇಶಗಳಿಗೆ ತೆರಳದಂತೆ ಮುಖ್ಯಮಂತ್ರಿ ಕಚೇರಿಯಿಂದ ಸಂದೇಶ ರವಾನಿಸಲಾಗಿದೆ. "ಕೇರಳದ ಕರಾವಳಿಯಲ್ಲಿ ಗಾಳಿಯ ವೇಗ ಪ್ರತಿ ಗಂಟೆಗೆ 40-50 ಕಿಮೀಗೆ ತಲುಪುವ ಸಾಧ್ಯತೆಯಿದ್ದು, ಇಂದು ಮತ್ತು ನಾಳೆ ಮೀನುಗಾರರರು ಈ ಸಮುದ್ರ ಪ್ರದೇಶಗಳಿಗೆ ಹೋಗದಂತೆ ಸೂಚಿಸಲಾಗಿದೆ".
"ಕೇರಳ ಕರಾವಳಿಯಲ್ಲಿ ಆಗ್ನೇಯ ಅರಬ್ಬಿ ಸಮುದ್ರದ ಮೇಲೆ ವಾಯುಭಾರ ಕುಸಿತದಿಂದ ರಾಜ್ಯದಲ್ಲಿ ಅಕ್ಟೋಬರ್ 17 (ಭಾನುವಾರ) ಮುಂಜಾನೆಯವರೆಗೆ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ಅಕ್ಟೋಬರ್ 18ರ ಸೋಮವಾರ ಮಳೆಯಾಗುವ ಸಾಧ್ಯತೆಯಿದ್ದು, ಮಂಗಳವಾರ ಬೆಳಗ್ಗೆಯಿಂದ ಮಳೆಯ ಪ್ರಮಾಣ ಕಡಿಮೆಯಾಗಲಿದೆ," ಎಂದು ಹವಾಮಾನ ಇಲಾಖೆ ತಿಳಿಸಿದೆ.












Click it and Unblock the Notifications