ಕೃಷಿ ಕಾನೂನುಗಳ ವಿರುದ್ಧ ಸುಪ್ರೀಂ ಕೋರ್ಟ್ ಮೊರೆ ಹೋಗಲಿರುವ ಕೇರಳ
ತಿರುವನಂತಪುರಂ, ಡಿಸೆಂಬರ್ 7: ದೆಹಲಿಯಲ್ಲಿ ರೈತರ ಪ್ರತಿಭಟನೆ 12 ನೇ ದಿನಕ್ಕೆ ಕಾಲಿಟ್ಟಿದ್ದು, ಇದು ನಿಧಾನವಾಗಿ ರಾಷ್ಟ್ರದಾದ್ಯಂತ ವ್ಯಾಪಿಸುತ್ತಿದ್ದು, ಇದರ ಮಧ್ಯೆ ಕೇರಳ ಸರ್ಕಾರ ಮೂರು ವಿವಾದಾತ್ಮಕ ಕೃಷಿ ಮಸೂದೆಗಳ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರುವುದಾಗಿ ತಿಳಿಸಿದೆ.
ಕೇರಳ ಕೃಷಿ ಸಚಿವ ವಿ.ಎಸ್.ಸುನೀಲ್ ಕುಮಾರ್ ಅವರು ಮಾತನಾಡಿ, "ಕೃಷಿ ಮಾರ್ಕೆಟಿಂಗ್ ಕಾನೂನುಗಳ ವಿರುದ್ಧ ಕೇರಳ ಎರಡು ದಿನಗಳಲ್ಲಿ ಸುಪ್ರೀಂ ಕೋರ್ಟ್ ಮೊರೆ ಹೋಗಲಿದೆ. ಕಾನೂನುಗಳ ವಿರುದ್ಧ ಪ್ರಕರಣ ದಾಖಲಿಸುವ ಆಯ್ಕೆಗಳನ್ನು ಪರಿಶೀಲಿಸುವಂತೆ ಕೇರಳ ಸರ್ಕಾರ ಈಗಾಗಲೇ ಅಡ್ವೊಕೇಟ್ ಜನರಲ್ಗೆ ನಿರ್ದೇಶನ ನೀಡಿದೆ" ಎಂದರು.
ಕೇರಳ ಸರ್ಕಾರವು ರಾಜ್ಯದಲ್ಲಿ ಕೇಂದ್ರ ಹೊಸ ಮೂರು ಕೃಷಿ ಕಾನೂನುಗಳನ್ನು ಜಾರಿಗೊಳಿಸುವುದಿಲ್ಲ ಎಂದು ಹೇಳಿದ್ದು, "ರೈತ ವಿರೋಧಿ ಕಾನೂನುಗಳನ್ನು ಕೇರಳದಲ್ಲಿ ಜಾರಿಗೆ ತರಲಾಗುವುದಿಲ್ಲ ಮತ್ತು ಪರ್ಯಾಯ ಕಾನೂನನ್ನು ಪರಿಗಣಿಸಲಾಗುವುದು' ಎಂದು ಕೃಷಿ ಸಚಿವರು ತಿಳಿಸಿದ್ದಾರೆ. ಇದೇ ವೇಳೆ "ಈ ನಿರ್ಧಾರದ ವಿರುದ್ಧ ಕೇಂದ್ರ ಸರ್ಕಾರವು ತೆಗೆದುಕೊಳ್ಳುವ ಯಾವುದೇ ಪರಿಣಾಮಗಳನ್ನು ಎದುರಿಸಲು ನಾವು ಸಿದ್ಧರಿದ್ದೇವೆ' ಎಂದು ಕೃಷಿ ಸಚಿವ ಸುನೀಲ್ ಕುಮಾರ್ ಹೇಳಿದರು.

ಪಿಣರಾಯಿ ವಿಜಯನ್ ನೇತೃತ್ವದ ಕೇರಳ ಸರ್ಕಾರವು ಕೃಷಿ ಕಾನೂನುಗಳ ವಿರುದ್ಧ ಪಂಜಾಬ್ ಮತ್ತು ರಾಜಸ್ಥಾನ ಸರ್ಕಾರದೊಂದಿಗೆ ಕೇಂದ್ರ ಸರ್ಕಾರದ ಕೃಷಿ ನೀತಿಗಳ ವಿರುದ್ಧ ಜಂಟಿ ಪ್ರತಿಭಟನೆ ನಡೆಸಲಿದೆ ಎಂದು ಹೇಳಲಾಗಿದೆ.
ಕಳೆದ ವಾರವಷ್ಟೇ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಹೊಸ ಕೃಷಿ ಕಾನೂನುಗಳ ವಿರುದ್ಧ ದೆಹಲಿ ಗಡಿಗಳಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರ ಮಾತುಗಳನ್ನು ಆಲಿಸಿ ಮತ್ತು ಸೌಹಾರ್ದಯುತವಾಗಿ ಬಗೆಹರಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದರು.
ಈ ಕುರಿತು ಟ್ವೀಟ್ ಮಾಡಿದ್ದ ಸಿಎಂ ಪಿಣರಾಯಿ ವಿಜಯನ್, ರೈತರನ್ನು ದೇಶದ "ಜೀವನಾಡಿ" ಎಂದು ಬಣ್ಣಿಸಿದ್ದರು ಮತ್ತು ಅವರೊಂದಿಗೆ ನಿಲ್ಲುವ ಸಮಯ ಬಂದಿದೆ ಎಂದು ಹೇಳಿದ್ದರು.












Click it and Unblock the Notifications