ಎರಡನೇ ಬಾರಿ ಹಾವು ಕಚ್ಚಿ ಮಹಿಳೆ ಮೃತಪಟ್ಟಿದ್ದ ಪ್ರಕರಣಕ್ಕೆ ಟ್ವಿಸ್ಟ್
ತಿರುವನಂತಪುರಂ, ಮೇ 25: ಮಹಿಳೆಗೆ ಹಾವು ಕಚ್ಚಿತೆಂದು ಕೇರಳದ ಆಸ್ಪತ್ರೆಗೆ ದಾಖಲಿಸಿದ್ದ ಸಂದರ್ಭದಲ್ಲಿ ಮತ್ತೆ ಹಾವು ಕಚ್ಚಿ ಆಕೆ ಮೃತಪಟ್ಟಿದ್ದ ಘಟನೆಗೆ ಟ್ವಿಸ್ಟ್ ಸಿಕ್ಕಿದೆ.
ಹಾವಿನ ದ್ವೇಷ ಇರಬಹುದು ಇಲ್ಲವಾದರೆ ಆಸ್ಪತ್ರೆಗೂ ಬಂದು ಹಾವು ಕಚ್ಚುವುದೇ ಎಂದು ಎಲ್ಲರೂ ನಂಬಿದ್ದರು. ಆದರೆ ಇದು ಪ್ರಿ ಪ್ಲ್ಯಾನ್ಡ್ ಮರ್ಡರ್ ಎನ್ನುವುದು ಬೆಳಕಿಗೆ ಬಂದಿದೆ.
ಮೃತ ಮಹಿಳೆಯ ತಂದೆ ಏರಂ ವೆಳ್ಳಾಶೇರಿಯ ವಿಜಯಸೇನ ನೀಡಿದ್ದ ದೂರಿನ ಆಧಾರದ ಮೇಲೆ ಪ್ರಕರಣದ ತನಿಖೆ ನಡೆಯುತ್ತಿದೆ. ಈ ಪ್ರಕರಣವು ಅನೇಕ ರೋಚಕ ಟ್ವಿಸ್ಟ್ ಪಡೆದುಕೊಂಡಿದೆ ಎಂದು ತನಿಖಾ ತಂಡದ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಏನಿದು ಪ್ರಕರಣ
ಮೂರು ತಿಂಗಳ ಹಿಂದೆ ಉತ್ತರಾಗೆ ಹಾವು ಕಚ್ಚಿದ್ದರಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಆಸ್ಪತ್ರೆಯಲ್ಲಿ ಇದ್ದಾಗಲೇ ಮೇ 7ರಂದು ಎರಡನೇ ಬಾರಿ ಹಾವು ಕಚ್ಚಿತ್ತು ಎಂದು ಹೇಳಲಾಗಿತ್ತು.
ಆದರೆ ಉತ್ತರಾಳ ಪೋಷಕರು ಆಕೆಯ ಅಳಿಯನ ಮೇಲೆ ಶಂಕೆ ವ್ಯಕ್ತಪಡಿಸಿ ಪೊಲೀಸರಿಗೆ ದೂರು ನೀಡಿದ್ದರು. ಅಷ್ಟೇ ಅಲ್ಲದೆ ಸೂರಜ್ ವರದಕ್ಷಿಣೆಗಾಗಿ ನಮ್ಮ ಮಗಳಿಗೆ ಆಗಾಗ್ಗೆ ಕಿರುಕುಳ ನೀಡುತ್ತಿದ್ದ. ಮದುವೆಯ ಸಮಯದಲ್ಲಿ ನೀಡಿದ್ದ ಕೆಲವು ಆಭರಣಗಳು ಲಾಕರ್ ನಿಂದ ಕಾಣೆಯಾಗಿವೆ ಎಂದು ದೂರಿದ್ದರು.

ಪತಿ, ಹಾವಾಡಿಗ, ಸಹಚರನ ಬಂಧನ
ಕೊಲ್ಲಂ ಜಿಲ್ಲೆಯ ಅಂಚಲ್ ನಿವಾಸಿ ಎಸ್.ಉತ್ತರ (25) ಕೊಲೆಯಾದ ಮಹಿಳೆ. ಈ ಕೃತ್ಯಕ್ಕೆ ಸಂಬಂಧಿಸಿದಂತೆ ಮಹಿಳೆಯ ಪತಿ, ಸ್ಥಳೀಯ ಹಾವಾಡಿಗ ಮತ್ತು ಇನ್ನೊಬ್ಬ ಸಹಚರನನ್ನು ಬಂಧಿಸಲಾಗಿದೆ.

ಇದೊಂದು ವಿಚಿತ್ರ ಪ್ರಕರಣ
ಇದೊಂದು ವಿಚಿತ್ರ ಪ್ರಕರಣವಾಗಿದೆ. ಮೂವರು ಆರೋಪಿಗಳು ನಮ್ಮ ವಶದಲ್ಲಿದ್ದಾರೆ. ತನಿಖೆ ನಡೆಯುತ್ತಿರುವುದರಿಂದ ಯಾವುದೇ ಮಾಹಿತಿ ಬಹಿರಂಗಪಡಿಸಲು ಸಾಧ್ಯವಿಲ್ಲ ಎಂದು ಕೊಲ್ಲಂ ಗ್ರಾಮೀಣ ಪೊಲೀಸ್ ಅಧೀಕ್ಷಕ ಎಸ್.ಹರಿಶಂಕರ್ ಹೇಳಿದ್ದಾರೆ.

ಆರೋಪಿಯಿಂದ ಸತ್ಯ ಬಯಲು
ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಕೆಲ ಸತ್ಯಗಳು ಬೆಳಕಿಗೆ ಬಂದಿವೆ ಎನ್ನಲಾಗಿದೆ. ಆರೋಪಿ ಸೂರಜ್ ಕಳೆದ ಐದು ತಿಂಗಳುಗಳಿಂದ ಪತ್ನಿಯ ಕೊಲೆಗೆ ಸಂಚು ರೂಪಿಸಿದ್ದ. ಖಾಸಗಿ ಬ್ಯಾಂಕಿನಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯ ಪತಿ ಸೂರಜ್ 10 ಸಾವಿರ ರೂ. ಪಾವತಿಸಿ ಆ ಪ್ರದೇಶದ ಹಾವಾಡಿಗ ಸುರೇಶ್ನಿಂದ ಹಾವನ್ನು ತಂದಿದ್ದ. ಬಳಿಕ ತನ್ನ ರೂಮ್ನಲ್ಲಿ ಹಾವನ್ನು ಪತ್ನಿ ಬಿಟ್ಟು ಪತ್ನಿಗೆ ಕಚ್ಚುವಂತೆ ಮಾಡಿದ್ದ. ಮೊದಲ ಬಾರಿಗೆ ಹಾವು ಕಚ್ಚಿದಾಗಲೇ ಪತ್ನಿ ಸಾಯುತ್ತಾಳೆ ಎಂದು ಸೂರಜ್ ತಿಳಿಸಿದ್ದ. ಆದರೆ ಅದೃಷ್ಟವಶಾತ್ ಉತ್ತರ ಬದುಕುಳಿದಿದ್ದಳು.












Click it and Unblock the Notifications